Showing posts with label `ಪ್ರಜಾವಾಣಿ'. Show all posts
Showing posts with label `ಪ್ರಜಾವಾಣಿ'. Show all posts

Tuesday, April 30, 2013

`ಕಾಂಗ್ರೆಸ್ ನಾಯಕರಿಗೂ ತಮ್ಮ ತಪ್ಪಿನ ಅರಿವಾಗುತ್ತಿದೆ'

ಗುಲ್ಬರ್ಗ: `ನಮ್ಮಿಂದಾಗಿಯೇ ಬಿಜೆಪಿ 35 ಸೀಟುಗಳನ್ನು ಕಳೆದುಕೊಳ್ಳಲಿದೆ, ಉಳಿದ ಕಡೆ ಅದು ಸೋಲುವುದು ಇದ್ದೇ ಇದೆ. ಕಾಂಗ್ರೆಸ್ 75 ದಾಟುವುದಿಲ್ಲ, ಜೆಡಿಎಸ್ 25 ತಲುಪಿ
ದರೆ ಹೆಚ್ಚು. ಉಳಿದಂತೆ ನಮ್ಮ ಪಕ್ಷ ಗೆಲ್ಲುವ ಸ್ಥಾನಗಳ ಸಂಖ್ಯೆಯನ್ನು ನೀವೇ ಊಹಿಸಿಕೊಳ್ಳಿ' ಎಂದು ಹೇಳುತ್ತಲೇ ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೈಯಲ್ಲಿದ್ದ ಚೀಟಿಯನ್ನು ಅಂಗಿಯ ಕಿಸೆಗೆ ತುರುಕಿಸಿದರು. ಪ್ರಕಟಿಸಬಾರದೆಂಬ ಷರತ್ತಿನಲ್ಲಿ ನೋಡಲು ಕೊಟ್ಟ ಆ ಚೀಟಿಯಲ್ಲಿ ಕೆಜೆಪಿ ನೂರಕ್ಕೆ ನೂರರಷ್ಟು ಗೆಲ್ಲಲಿದೆ ಎಂದು ಅವರು ಬಲವಾಗಿ ನಂಬಿರುವ ಕ್ಷೇತ್ರಗಳ ಸಂಖ್ಯೆ ಮತ್ತು ಹೆಸರುಗಳಿದ್ದವು.
`ಫಲಿತಾಂಶ ಪ್ರಕಟವಾಗುವ ದಿನ ನಾನು ಹೇಳಿದ ಸತ್ಯ ನಿಮಗೆ ಗೊತ್ತಾಗುತ್ತದೆ. ಆಗ ನಿಮ್ಮ ಮತ್ತು ನನ್ನ ಪಟ್ಟಿ ತಾಳೆ ನೋಡುವಾ' ಎಂದು ಸವಾಲೆಸೆದ ಅವರ ಮುಖದಲ್ಲಿ ಎಂದಿನ ಆತ್ಮವಿಶ್ವಾಸ ಇತ್ತು.
ಗುಲ್ಬರ್ಗ ನಗರದಲ್ಲಿ ರಾತ್ರಿ ಚುನಾವಣಾ ಪ್ರಚಾರ ನಡೆಸಿ ತಡರಾತ್ರಿ ಹೊಟೇಲ್‌ನಲ್ಲಿ ಬಂದು ಉಳಿದುಕೊಂಡಿದ್ದ ಯಡಿಯೂರಪ್ಪ ಬೆಳಿಗ್ಗೆ ಎಂಟು ಗಂಟೆ ಹೊತ್ತಿಗೆ ಎದ್ದು ಹೆಲಿಕಾಪ್ಟರ್ ಹತ್ತಲು ರೆಡಿಯಾಗಿ ಕೂತಿದ್ದರು. ಈ ಅವಸರದಲ್ಲಿಯೇ ಬಿಡುವು ಮಾಡಿಕೊಂಡು `ಪ್ರಜಾವಾಣಿ' ಜತೆ ಮಾತನಾಡಿದರು.
 ಪ್ರ: ನೀವು ಹೇಳಿದ ಲೆಕ್ಕವನ್ನು ನಂಬಿದರೆ ನಿಮ್ಮ ಪಕ್ಷ ಸ್ವಂತಬಲದಿಂದ ಅಧಿಕಾರಕ್ಕೆ ಬರುವುದು ಸಾಧ್ಯ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾರ ಜತೆ ಸೇರಿಕೊಳ್ಳುತ್ತೀರಿ? ಬಿಜೆಪಿ? ಕಾಂಗ್ರೆಸ್? ಜೆಡಿಎಸ್?
ಬಿಜೆಪಿ ಜತೆ ಹೋಗುವ ಪ್ರಶ್ನೆಯೇ ಇಲ್ಲ. ಆ ಪಕ್ಷದ ನಾಯಕರು ನಮ್ಮ ಮತದಾರರನ್ನು ಹಾದಿ ತಪ್ಪಿಸಲು ಈ ರೀತಿಯ ವದಂತಿಗಳನ್ನು ಹರಡು ತ್ತಿದ್ದಾರೆ. ಸುಷ್ಮಾ ಸ್ವರಾಜ್ ಅವರೇ ಮೊನ್ನೆ ಈ ರೀತಿ ಹೇಳಿದ್ದರು. ಆ ಪಕ್ಷದಲ್ಲಿ ಒಂದಷ್ಟು ನನ್ನ ಹಿತೈಷಿಗಳಿರು ವುದು ನಿಜ. ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಭಾನು ವಾರ ರಾಜ್ಯದಲ್ಲಿ ಮಾಡಿದ್ದ ಪ್ರಚಾರ ಭಾಷಣ ದಲ್ಲಿ ಕೂಡಾ ನನ್ನ ಹೆಸರನ್ನೆತ್ತಿ ಟೀಕಿಸಿಲ್ಲ ಎನ್ನುವುದನ್ನು ನೀವು ಗಮನಿಸಿರಬಹುದು. ಬಿಜೆಪಿಯ ಕೆಲವು ನಾಯಕರು ನನ್ನನ್ನು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಂಪರ್ಕಿಸುತ್ತಿರುವುದು ನಿಜ. ಆದರೆ ಬಿಜೆಪಿ ನನ್ನ ಬದುಕಿನಲ್ಲಿ ಮುಗಿದ ಅಧ್ಯಾಯ. ಇನ್ನು ವಿಶ್ವಾಸದ್ರೋಹ ಮಾಡಿದ ಜೆಡಿಎಸ್ ಜತೆ ಈ ಜನ್ಮದಲ್ಲಿ ಸೇರುವುದಿಲ್ಲ. ಅನುಭವದಿಂದ ಅಷ್ಟು ಪಾಠವನ್ನು ಕಲಿಯದಿದ್ದರೆ ಹೇಗೆ?
ಪ್ರ: ಕಾಂಗ್ರೆಸ್?
ಈ ಚುನಾವಣೆ ನಡೆಯುತ್ತಿರುವುದೇ ನಮ್ಮ ಪಕ್ಷ ಮತ್ತು ಕಾಂಗ್ರೆಸ್ ನಡುವೆ. ಹೊಂದಾಣಿಕೆ ಮಾಡಿಕೊಳ್ಳುವುದು ಎಲ್ಲಿ ಬಂತು? ಆದರೆ ಕಾಂಗ್ರೆಸ್ ನಾಯಕರಿಗೂ ತಮ್ಮ ತಪ್ಪಿನ ಅರಿವಾಗುತ್ತಿದೆ. ನನ್ನ ಮೇಲಿನ ಆರೋಪಗಳು ಬಿಜೆಪಿಯ ಕೆಲವು ನಾಯಕರು ಸೇರಿ ನನ್ನ ವಿರುದ್ಧ ಹೂಡಿದ್ದ ಸಂಚು ಎಂದು ನಿಧಾನವಾಗಿ ಅವರಿಗೆ ಅರ್ಥವಾಗುತ್ತಿದೆ. ನನ್ನನ್ನು ಎದುರುಹಾಕಿಕೊಂಡರೆ ರಾಜ್ಯದ ಒಂದು ದೊಡ್ಡ ಸಮುದಾಯದ ಅಸಮಾಧಾನಕ್ಕೆ ಈಡಾಗಬಹುದೆಂಬ ಭೀತಿಯೂ ಅವರಲ್ಲಿದೆ. ಇದಕ್ಕಾಗಿಯೇ ಅವರು ನನ್ನ ಬಗ್ಗೆ ಹೆಚ್ಚು ಮಾತನಾಡುತ್ತಿಲ್ಲ.
ಪ್ರ: ಇಷ್ಟೊಂದು ಆತ್ಮವಿಶ್ವಾಸದಿಂದ ಗೆಲ್ಲುವ ಅಭ್ಯರ್ಥಿಗಳ ಸಂಖ್ಯೆಯನ್ನು ಹೇಳುತ್ತಿದ್ದೀರಿ, ಇದಕ್ಕೆ ಆಧಾರ ಏನು?
ಜನರ ಮೇಲಿನ ನಂಬಿಕೆಯೇ ಆಧಾರ. ನಾನು ಮಾಡಿದ ಕೆಲಸಗಳೆಲ್ಲ ಜನರಿಗೆ ಗೊತ್ತು, ತಪ್ಪು-ಒಪ್ಪುಗಳ ಹಿಂದಿನ ಸತ್ಯ ಏನು ಎನ್ನುವುದನ್ನೂ ನಿಧಾನವಾಗಿ ಅವರು ತಿಳಿದುಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಮ್ಮ ಪಕ್ಷಕ್ಕೆ ಇರುವ ಬೆಂಬಲವನ್ನು ನೀವೇ ಕಣ್ಣಾರೆ ನೋಡಿದ್ದೀರಿ. ಇದೇ ರೀತಿ ಮುಂಬೈ ಕರ್ನಾಟಕದಲ್ಲಿಯೂ ಇದೆ. ಹಳೆಮೈಸೂರಿನಲ್ಲಿ ಜೆಡಿಎಸ್‌ಗೆ ಬಹಳ ದೊಡ್ಡ ಪ್ರಮಾಣದಲ್ಲಿ ಹಾನಿ ಮಾಡಲಿದ್ದೇವೆ.
ಪ್ರ: ನಿಮ್ಮ ಶಕ್ತಿ ಎಂದು ಹೇಳಿಕೊಳ್ಳುತ್ತಿರುವ ನಿಮ್ಮ ನಂಬಿಕೆಯೇ ನಿಮ್ಮ ದೌರ್ಬಲ್ಯ ಎಂದು ಈಗಲೂ ಅನಿಸುವುದಿಲ್ಲವೇ? ಸ್ವಂತ ಪಕ್ಷ ರಚಿಸಿದಾಗ ನಿಮ್ಮನ್ನು ಬೆಂಬಲಿಸಬಹುದೆಂದು ನೀವು ನಂಬಿದವರಲ್ಲಿ ಹೆಚ್ಚಿನವರು ಯಾರೂ ನಿಮ್ಮ ಜತೆಯಲ್ಲಿಲ್ಲ. ಇದು ನಿಮ್ಮ ನಂಬಿಕೆಯ ದೋಷ ಅಲ್ಲವೇ?
ಕೆಲವು ನಾಯಕರು ನಾನಿಟ್ಟ ನಂಬಿಕೆಗೆ ದ್ರೋಹ ಬಗೆದದ್ದು ನಿಜ, ಆದರೆ  ಜನ ಹಾಗೆ ಮಾಡಲಾರರು.
ಪ್ರ: ಯಾವ ರೀತಿಯ ದ್ರೋಹ?
ಅವರ ಹೆಸರು ಹೇಳಲು ನನಗಿಷ್ಟ ಇಲ್ಲ, ಅದು ನಿಮಗೂ ಗೊತ್ತಿದೆ. ನನ್ನ ಜತೆಯಲ್ಲಿಯೇ ಇದ್ದವರಂತೆ ನಟಿಸುತ್ತಿದ್ದ ಅವರು ಬಿಜೆಪಿಯಲ್ಲಿದ್ದ ನನ್ನ ವಿರೋಧಿಗಳ ಜತೆ ಷಾಮೀಲಾಗಿದ್ದರು ಎನ್ನುವುದು ನನಗೆ ತಿಳಿಯಲೇ ಇಲ್ಲ. ಅವರೆಲ್ಲ ಕೊನೆ ಗಳಿಗೆಯಲ್ಲಿ ತೀರ್ಮಾನ ಕೈಗೊಂಡು ಬಿಜೆಪಿಯಲ್ಲಿಯೇ ಉಳಿದವರಲ್ಲ. ಈ ಸಂಚನ್ನು ಸಾಕಷ್ಟು ಪೂರ್ವದಲ್ಲಿಯೇ ಪರಸ್ಪರ ಕೂಡಿ ಮಾಡಿದ್ದರು. ಪಕ್ಷಕ್ಕೆ ರಾಜೀನಾಮೆ ಕೊಡುವುದನ್ನು ವಿಳಂಬ ಮಾಡಿಸಿದ್ದು ಕೂಡಾ ಇದೇ ಸಂಚಿನ ಭಾಗ. ಇದೆಲ್ಲ ನನಗೆ ಗೊತ್ತಾಗಲಿಲ್ಲ. ಅವರಿಗಿರುವ ವಕ್ರಬುದ್ಧಿ ನನಗಿಲ್ಲ, ನನ್ನದೇನಿದ್ದರೂ ನೇರಾನೇರ ರಾಜಕೀಯ.
ಪ್ರ: ಯಾವಾಗ ಪಕ್ಷ ಬಿಡುವ ಯೋಜನೆ ಇತ್ತು ನಿಮಗೆ?
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಾಕ್ಷಣವೇ ಆ ಪಕ್ಷ ಬಿಟ್ಟು ಹೊರಗೆ ಬರಬೇಕಾಗಿತ್ತು. ಆಗ ಹೊಸ ಪಕ್ಷ ಕಟ್ಟಲು ಸಮಯ ಸಿಗುತ್ತಿತ್ತು. ಆ ರೀತಿ ಮಾಡಿದರೆ ನಾನು ಬಲಿಷ್ಠನಾಗುತ್ತೇನೆ ಎಂದು ತಿಳಿದ ಬಿಜೆಪಿ ನಾಯಕರು ನಾನು ನಂಬಿದವರನ್ನೇ ಜತೆಯಲ್ಲಿಟ್ಟುಕೊಂಡು ಹಾದಿ ತಪ್ಪಿಸಿದರು. ದೆಹಲಿಯ ನಾಯಕರು ಸಂಧಾನ ನಡೆಸಿದರು, ಮುಂಬೈಯಲ್ಲಿ ನಡೆದ ಪಕ್ಷದ ಅಧಿವೇಶನಕ್ಕೆ ಕರೆಸಿಕೊಂಡರು. ಇವೆಲ್ಲವೂ ನಾನು ಹೊರಗೆ ಹೋಗುವುದನ್ನು ವಿಳಂಬ ಮಾಡಲು ಬಿಜೆಪಿ ಮಾಡಿದ ಸಂಚು ಎಂದು ನನಗೆ ತಿಳಿಯಲಿಲ್ಲ. ಆಗ ನನ್ನ ಜತೆಯಲ್ಲಿದ್ದವರಿಗೆ ಇದು ಗೊತ್ತಿದ್ದರೂ ಅದನ್ನು ನನಗೆ ತಿಳಿಸಲಿಲ್ಲ. ಅವರನ್ನು ನಂಬಿ ಮೋಸಹೋದೆ. ಅವರಿಗೆ ಒಳ್ಳೆಯದಾಗಲಿ.
ಪ್ರ: ನೀವು  ಅಧಿಕಾರದಲ್ಲಿದ್ದಾಗ ವೀರಶೈವ ಮಠಗಳಿಗೆ ಧಾರಾಳವಾಗಿ ದುಡ್ಡು ಕೊಟ್ಟವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಾಯ ಎದುರಾದಾಗ ಕೆಲವು ಸ್ವಾಮಿಗಳು ಬೀದಿಗೆ ಇಳಿದು ಪ್ರತಿಭಟನೆಯನ್ನೂ ನಡೆಸಿದ್ದರು. ಅವರಲ್ಲಿ ಯಾರೊಬ್ಬರೂ ಈಗ ನಿಮ್ಮನ್ನು ಬಹಿರಂಗವಾಗಿ ಬೆಂಬಲಿಸುತ್ತಿಲ್ಲವಲ್ಲಾ? ಅಲ್ಲಿಯೂ ನೀವಿಟ್ಟ ನಂಬಿಕೆ ಹುಸಿಯಾಗಿ ಹೋಯಿತೇ?
ಬಹಿರಂಗವಾಗಿ ಹೇಳಿಕೆ ನೀಡದಿದ್ದ ಮಾತ್ರಕ್ಕೆ ಅವರು ನನ್ನನ್ನು ಬೆಂಬಲಿಸುತ್ತಿಲ್ಲ ಎಂದು ಹೇಳಲಾಗದು. ಕೆಲವು ಸ್ವಾಮೀಜಿಗಳ ಬಂಟರು ಬದಲಾಗಿರಬಹುದು ಅಷ್ಟೆ. ಸ್ವಾಮೀಜಿಗಳು ಮತ್ತು ಅವರ ಅನುಯಾಯಿಗಳು ನಮ್ಮ ಪಕ್ಷದ ಪರವಾಗಿದ್ದಾರೆ. ಅವರ ಆಶೀರ್ವಾದ ನನ್ನ ಮೇಲಿದೆ.
ಪ್ರ: ಈ ಚುನಾವಣೆಯ ನಂತರ ನಿಮ್ಮ ಪಕ್ಷದ ಭವಿಷ್ಯದ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ?
ಅಂತಿಮವಾಗಿ ನಾವು ರಾಷ್ಟ್ರಮಟ್ಟದಲ್ಲಿ ತೃತೀಯ ರಂಗದ ಜತೆ ಸೇರಿಕೊಳ್ಳುವವರು. ಈ ಬಗ್ಗೆ ಕೆಲವು ಪಕ್ಷಗಳ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅದರ ವಿವರವನ್ನು ಈಗ ಬಹಿರಂಗಪಡಿಸುವುದು ಸರಿಯಾಗುವುದಿಲ್ಲ. ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗಿ ಅವರ ಜತೆ ಮಾತುಕತೆ ನಡೆಸುತ್ತೇನೆ. ನಮ್ಮದು ಒಂದು ಚುನಾವಣೆಯ ಪಕ್ಷ ಅಲ್ಲ, ಇದು ಯಡಿಯೂರಪ್ಪನಿಗೆ ಅನ್ಯಾಯವಾಗಿದೆ ಎಂಬ ಕಾರಣಕ್ಕಾಗಿ ಹುಟ್ಟಿಕೊಂಡ ಪಕ್ಷ ಅಲ್ಲ. ಅದೊಂದು ನೆಪ ಅಷ್ಟೆ. ರಾಜ್ಯಕ್ಕೆ ಆಗಿರುವ ಮತ್ತು ಆಗಲಿರುವ ಅನ್ಯಾಯದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ.