Showing posts with label ಕಾವೇರಿ. Show all posts
Showing posts with label ಕಾವೇರಿ. Show all posts

Sunday, February 17, 2013

ಕಾವೇರಿ ಐತೀರ್ಪಿನ ಆಚೆಗೂ ಬದುಕು ಇದೆ

ಕಾವೇರಿ ಐತೀರ್ಪಿನ ಅಧಿಸೂಚನೆಯ ಪ್ರಕಟಣೆ ಎಂದರೆ `ಶವದ ಪೆಟ್ಟಿಗೆಗೆ ಕೊನೆಯ ಮೊಳೆ'ಯೇನಲ್ಲ, ಅದರಾಚೆಗೂ ಬದುಕಿದೆ. ಆ ಬದುಕಿನಲ್ಲಿ ಮಳೆ-ಬೆಳೆ, ರಾಜ್ಯ-ರಾಜ್ಯಗಳ ನಡುವೆ ನೀರಿನ ಜಗಳ, ನ್ಯಾಯಾಲಯ - ನ್ಯಾಯಮಂಡಳಿಗಳಲ್ಲಿ ವ್ಯಾಜ್ಯ, ರೈತರ ಪ್ರತಿಭಟನೆ, ರಾಜಕಾರಣಿಗಳ ಆತ್ಮವಂಚನೆ ಎಲ್ಲವೂ ಇರುತ್ತವೆ.
`ಎಲ್ಲವೂ ಮುಗಿದು ಹೋಗುತ್ತದೆ' ಎಂದು ಹುಯಿಲೆಬ್ಬಿಸುತ್ತಿರುವ ನಮ್ಮ ರಾಜಕಾರಣಿಗಳಲ್ಲಿ ಕೆಲವರು ಎಲ್ಲವೂ ಗೊತ್ತಿದ್ದು ಸುಳ್ಳು ಹೇಳುತ್ತಿದ್ದಾರೆ, ಉಳಿದವರು ಏನೂ ಗೊತ್ತಿಲ್ಲದೆ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಿದ್ದಾರೆ. ಐತೀರ್ಪಿನ ಅಧಿಸೂಚನೆಯ ಪ್ರಕಟಣೆಗೆ ಅಭ್ಯಂತರ ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ತಲೆಬಾಗಿದೆ. ಅದರಂತೆ ಕೊನೆಯ ದಿನಾಂಕವನ್ನೂ ಸುಪ್ರೀಂಕೋರ್ಟ್ ನಿಗದಿಪಡಿಸಿದೆ. ಇನ್ನೂ ಅದನ್ನು ತಡೆಯುವುದು ಸಾಧ್ಯ ಇಲ್ಲ. ನೀರಲ್ಲಿ ಗುದ್ದಾಡುವ ಈ ವ್ಯರ್ಥಪ್ರಯತ್ನವನ್ನು ಕೈಬಿಟ್ಟು ಅಧಿಸೂಚನೆಯ ಪ್ರಕಟಣೆಯನ್ನು ನಮ್ಮ ಅನುಕೂಲತೆಗೆ ಬಳಸಿಕೊಳ್ಳುವುದು ಹೇಗೆ ಎಂಬ ಯೋಚನೆ ಮಾಡುವುದು ಜಾಣತನ. ತಮಿಳುನಾಡಿನ ರಾಜಕಾರಣಿಗಳು ನಮ್ಮವರಿಗಿಂತ ಜಾಣರು, ಬಹುಶಃ ಅವರು ಈಗಾಗಲೇ ಈ ಪ್ರಯತ್ನದಲ್ಲಿದ್ದಾರೆ.
`ಅಧಿಸೂಚನೆ ಹೊರಡಿಸಿದರೂ  ಅದು ಐತೀರ್ಪನ್ನು ಪ್ರಶ್ನಿಸುವ ಸಂಬಂಧಿತ ರಾಜ್ಯಗಳ ಹಕ್ಕು ಮತ್ತು ಈಗ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅಡ್ಡಿಯಾಗುವುದಿಲ್ಲ' ಎಂದು ಸಾಕ್ಷಾತ್ ಸುಪ್ರೀಂಕೋರ್ಟ್ ಹೇಳಿದ ನಂತರ `ಶವದ ಪೆಟ್ಟಿಗೆಗೆ ಕೊನೆಯ ಮೊಳೆ' ಆಗುವುದಾದರೂ ಹೇಗೆ? ಇಂತಹ ಅಪಾಯ ಇರುವುದೇ ನಿಜವಾಗಿದ್ದರೆ, 2007ರಲ್ಲಿ ಅಂತಿಮ ಐತೀರ್ಪಿನ ಕೆಲವು ಅಂಶಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದಾಗ ಐತೀರ್ಪಿನ ಅಧಿಸೂಚನೆ ಪ್ರಕಟಣೆಯನ್ನು ರಾಜ್ಯ ಸರ್ಕಾರ ಯಾಕೆ ವಿರೋಧಿಸಿರಲಿಲ್ಲ?
ಆಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕಾಣದಿದ್ದ ಅಪಾಯ ಈಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಾದಿಯಾಗಿ ಎಲ್ಲರಿಗೂ ಯಾಕೆ ಕಾಣತೊಡಗಿದೆ? ಅಧಿಸೂಚನೆ ಹೊರಡಿಸುವುದರಿಂದ ಕರ್ನಾಟಕಕ್ಕೆ ಆಗಲಿರುವ ಬಹುದೊಡ್ಡ ಲಾಭ ಎಂದರೆ ಕಳೆದ 23 ವರ್ಷಗಳಿಂದ ನಮ್ಮ ಕೊರಳಿಗೆ ನೇಣಿನಂತೆ ಸುತ್ತಿಕೊಂಡಿರುವ ಕಾವೇರಿ ನ್ಯಾಯಮಂಡಳಿಯ ಮಧ್ಯಂತರ ಐತೀರ್ಪಿನಿಂದ ಮುಕ್ತಿ. ಯಾವ ಕೋನದಿಂದ ಅಧ್ಯಯನ ನಡೆಸಿದರೂ ಮಧ್ಯಂತರ ಐತೀರ್ಪಿಗಿಂತ ಅಂತಿಮ ತೀರ್ಪು ಕರ್ನಾಟಕದ ರೈತರಿಗೆ ಹೆಚ್ಚು ಲಾಭವನ್ನುಂಟು ಮಾಡಲಿದೆ ಎನ್ನುವ ಸತ್ಯವನ್ನು ಒಪ್ಪಿಕೊಳ್ಳದೆ ಇರಲಾಗದು. ಹೀಗಿದ್ದರೂ ಕಳೆದ ಐದು ವರ್ಷಗಳಿಂದ ಮಧ್ಯಂತರ ಐತೀರ್ಪನ್ನು ಕೊರಳಿಗೆ ಕಟ್ಟಿಕೊಂಡು ಕರ್ನಾಟಕ ಯಾಕೆ ಸಂಕಟಪಡುತ್ತಿದೆಯೋ ಗೊತ್ತಿಲ್ಲ.
ಹೌದು, ಅಂತಿಮ ಐತೀರ್ಪಿನಲ್ಲಿ ಎಲ್ಲವೂ ನಮ್ಮ ಪರವಾಗಿ ಇಲ್ಲ, ಸಾಕಷ್ಟು ಅನ್ಯಾಯವಾಗಿದೆ. ಸಂಕಷ್ಟದ ಕಾಲವಾದ ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಅವಧಿಯಲ್ಲಿ ತಮಿಳುನಾಡಿಗೆ ಹರಿಸಬೇಕಾಗಿರುವ ನೀರಿನ ಪ್ರಮಾಣ ತಗ್ಗಿಲ್ಲ, ಬೆಂಗಳೂರು ಮಹಾನಗರ ಸೇರಿದಂತೆ ಕಾವೇರಿ ಕಣಿವೆ ಪ್ರದೇಶದ ಜನತೆಗೆ ಅವಶ್ಯ ಇರುವಷ್ಟು ಪ್ರಮಾಣದಲ್ಲಿ ಕುಡಿಯುವ ನೀರಿನ ಪಾಲು ಒದಗಿಸಿಲ್ಲ, ಅಂತರ್ಜಲದ ನೆಪದಲ್ಲಿ ಕರ್ನಾಟಕದ ಚರಂಡಿ ನೀರನ್ನೂ ಲೆಕ್ಕ ಹಾಕಿರುವ ನ್ಯಾಯಮಂಡಳಿ ತಮಿಳುನಾಡಿನ ಕಾವೇರಿ ಕಣಿವೆ ಪ್ರದೇಶದಲ್ಲಿನ ಅಂತರ್ಜಲದ ಬಗ್ಗೆ ಚಕಾರ ಎತ್ತಿಲ್ಲ.
1924ರ ಒಪ್ಪಂದದಿಂದ ಕರ್ನಾಟಕವನ್ನು ಮುಕ್ತಗೊಳಿಸಿದರೂ ಅದೇ ಒಪ್ಪಂದದ ಬಲದಿಂದ ತಮಿಳುನಾಡು ಯದ್ವಾತದ್ವಾ ಹೆಚ್ಚು ಮಾಡಿಕೊಂಡಿರುವ 24.71 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶದ ರಕ್ಷಣೆಗೆ 419 ಟಿಎಂಸಿ ನೀರು ಒದಗಿಸಿರುವ ನ್ಯಾಯಮಂಡಳಿ, ಕರ್ನಾಟಕ ಕೇಳಿಕೊಂಡಿರುವ 25.27 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶವನ್ನು ಒಪ್ಪಿಕೊಂಡಿಲ್ಲ, 381 ಟಿಎಂಸಿ ನೀರಿನ ಪಾಲನ್ನೂ ನೀಡಿಲ್ಲ.  ಕೇರಳ ರಾಜ್ಯಕ್ಕೆ ಈಗ ಕೇವಲ 9 ಟಿಎಂಸಿಯಷ್ಟೇ ಬಳಸಲು ಸಾಧ್ಯ ಇದ್ದರೂ ಅಲ್ಲಿಗೆ 21 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಹೇಳಿ ಆ ನೀರನ್ನು ಬಳಸಲು ತಮಿಳುನಾಡಿಗೆ ಅವಕಾಶ ಮಾಡಿಕೊಟ್ಟಿರುವ ನ್ಯಾಯಮಂಡಳಿ ಅಂತಹ ಔದಾರ್ಯವನ್ನು ಕರ್ನಾಟಕಕ್ಕೆ ತೋರಿಸಿಲ್ಲ....ಹೀಗೆ ಆಗಿರುವ ಅನ್ಯಾಯದ ಪಟ್ಟಿಯನ್ನು ಬೆಳೆಸುತ್ತಾ ಹೋಗಬಹುದು.
ಅಂತಿಮ ಐತೀರ್ಪಿನಿಂದ ಕರ್ನಾಟಕಕ್ಕೆ ಒಂದಷ್ಟು ಅನುಕೂಲಗಳೂ ಆಗಿವೆ. ಮುಖ್ಯವಾಗಿ ಕಳೆದ ಕೆಲವು ದಶಕಗಳಿಂದ ತಲೆ ಮೇಲೆ ಇದ್ದ 1924ರ ಒಪ್ಪಂದದ ತೂಗುಕತ್ತಿಯಿಂದ ಶಾಶ್ವತ ಮುಕ್ತಿ ಸಿಕ್ಕಿದೆ. ಮಧ್ಯಂತರ ಐತೀರ್ಪಿನಲ್ಲಿದ್ದ 11.24 ಲಕ್ಷ ಎಕರೆ ಮೇಲಿನ ನಿರ್ಬಂಧ ರದ್ದಾಗಿದೆ. ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನಿಗದಿಪಡಿಸಿರುವ ನೀರಿನ ಪಾಲನ್ನು ನೀಡಿದ ನಂತರ ಉಳಿಯುವ ಹೆಚ್ಚುವರಿ ನೀರಿನ ಬಳಕೆಯ ಹಕ್ಕನ್ನು ಸಂಪೂರ್ಣವಾಗಿ ಕರ್ನಾಟಕಕ್ಕೆ ನೀಡಲಾಗಿದೆ. ಕೇಂದ್ರ ಜಲ ಆಯೋಗದ ನಿಯಂತ್ರಣದಲ್ಲಿರುವ ಬಿಳಿಗುಂಡ್ಲು ಜಲಮಾಪನ ಕೇಂದ್ರದ ನೀರಿನ ಲೆಕ್ಕವೇ ಅಧಿಕೃತ ಎಂದು ಹೇಳುವ ಮೂಲಕ ತಮಿಳುನಾಡಿನ ಮೋಸದ ಲೆಕ್ಕಕ್ಕೆ ಕಡಿವಾಣ ಹಾಕಿದೆ.
ಕರ್ನಾಟಕಕ್ಕೆ ಆಗಿರುವ `ಅನ್ಯಾಯ'ದ ವಿರುದ್ಧ ಹೋರಾಟ ನಡೆಯಲೇಬೇಕು. ನ್ಯಾಯಾಲಯದಲ್ಲಿ ಕಾನೂನಿನ ಹೋರಾಟ, ಕೇಂದ್ರ ಸರ್ಕಾರದ ಜತೆ ರಾಜಕೀಯ ಹೋರಾಟ, ಸರ್ವಪಕ್ಷಗಳ ನಿಯೋಗ, ತಜ್ಞರ ಜತೆ ಸಮಾಲೋಚನೆ, ಪ್ರತಿಭಟನೆ, ಪಾದಯಾತ್ರೆ...ಎಲ್ಲವೂ ನಡೆಯಬೇಕು. ಇದರ ಜತೆಯಲ್ಲಿ ಐತೀರ್ಪಿನಲ್ಲಿ ನಮಗೆ ಸಿಕ್ಕಿರುವ `ನ್ಯಾಯ'ದ ಅನುಕೂಲಗಳನ್ನು ಬಳಸಿಕೊಳ್ಳಲು ಪ್ರಯತ್ನ ನಡೆಸುವುದು ಬೇಡವೇ? ಇದಕ್ಕಾಗಿ ರಾಜ್ಯ ಸರ್ಕಾರ ಏನು ಮಾಡಿದೆ? ಇಂತಹ ಬಿಕ್ಕಟ್ಟು ಎದುರಾದಾಗೆಲ್ಲ ನಮ್ಮ ಈವರೆಗಿನ ಎಲ್ಲ ಸರ್ಕಾರಗಳು ತಮಿಳುನಾಡು ಎಂಬ `ಭೂತ'ವನ್ನು ಪ್ರತಿಭಟನಕಾರರ ಮುಂದೆ ತಂದು ನಿಲ್ಲಿಸುತ್ತಾ ಬಂದಿವೆ.
ರೋಷತಪ್ತ ಜನ ಕೂಡಿ ಆ `ಭೂತ'ಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟುಹಾಕಿ ಕೋಪ ಶಮನಮಾಡಿಕೊಳ್ಳುತ್ತಾರೆ. ಆದರೆ ಪಕ್ಕದಲ್ಲಿಯೇ ಇರುವ ಹಿತಶತ್ರುವಿನ ಕಡೆ ಯಾರ ಗಮನವೂ ಹೋಗುವುದಿಲ್ಲ. ಯಾರೂ ಅದೇ ಗಟ್ಟಿ ದನಿಯಲ್ಲಿ ಜನಪ್ರತಿನಿಧಿಗಳ ಕರ್ತವ್ಯಲೋಪವನ್ನು ಪ್ರಶ್ನಿಸಲು ಹೋಗುವುದಿಲ್ಲ. ನೆಲ-ಜಲ-ಭಾಷೆಯಂತಹ ಭಾವನಾತ್ಮಕ ವಿಷಯಗಳಿಗೆ ಸಂಬಂಧಿಸಿದ ವಿವಾದದ ಸಮಯದಲ್ಲಿ ಸಿಡಿದೇಳುವ ಭಾವುಕ ಜನರನ್ನು ಹೇಗೆ ಪಳಗಿಸಬೇಕೆಂಬುದು ನಮ್ಮ ರಾಜಕಾರಣಿಗಳಿಗೆ ಚೆನ್ನಾಗಿ ಗೊತ್ತಿರುವುದರಿಂದ ಇವೆಲ್ಲವೂ ನಡೆಯುತ್ತಾ ಬಂದಿದೆ.
1924ರ ಒಪ್ಪಂದದ ಪ್ರಕಾರ ಕರ್ನಾಟಕದ ಅಚ್ಚುಕಟ್ಟು ಪ್ರದೇಶ 2,35,000 ಎಕರೆ, ಬಳಸಬಹುದಾದ ನೀರಿನ ಪಾಲು ಕೇವಲ 89.82 ಟಿಎಂಸಿ ಆಗಿತ್ತು. ಮಧ್ಯಂತರ ಐತೀರ್ಪಿನಲ್ಲಿ ಈ ಅಚ್ಚುಕಟ್ಟು ಪ್ರದೇಶವನ್ನು 11.24 ಲಕ್ಷ ಎಕರೆವರೆಗೆ ವಿಸ್ತರಿಸಲಾಯಿತು. ಕಾವೇರಿ ನ್ಯಾಯಮಂಡಳಿಯ ಮುಂದೆ ರಾಜ್ಯ ಸರ್ಕಾರ ಆ ಕಾಲದಲ್ಲಿ ಹೇಳಿಕೊಂಡಿರುವ ಪ್ರಕಾರ ನಮ್ಮ ಅಚ್ಚುಕಟ್ಟು ಅಭಿವೃದ್ಧಿಯ ಗುರಿ 27 ಲಕ್ಷ ಎಕರೆ. ಇದರಲ್ಲಿ 24 ಲಕ್ಷ ಎಕರೆ ಅಚ್ಚುಕಟ್ಟು ಅಭಿವೃದ್ಧಿಗೆ ಯೋಜನೆ ಸಿದ್ದ ಇದೆ ಎಂದು ಸರ್ಕಾರ ತಿಳಿಸಿತ್ತು.
ನ್ಯಾಯಮಂಡಳಿ ಕೇವಲ 18.85 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿಪಡಿಸಬೇಕೆಂದು ಆದೇಶಿಸಿ ಅದಕ್ಕೆ 250 ಟಿಎಂಸಿ ನೀರಿನ ಪಾಲನ್ನಷ್ಟೆ ನೀಡಿ ಅನ್ಯಾಯ ಮಾಡಿರುವುದು ನಿಜ. ಆದರೆ ಹೆಚ್ಚುವರಿ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ಸಿಕ್ಕಿರುವ ಅವಕಾಶವನ್ನಾದರೂ ಬಳಸಿಕೊಳ್ಳುವುದು ಬೇಡವೇ? 18.85 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶವನ್ನು ಅಭಿವೃದ್ಧಿ ಪಡಿಸಿದ್ದಾಗಿ 2010ರಲ್ಲಿಯೇ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ಮತ್ತು ತಮಿಳುನಾಡು ಸರ್ಕಾರಕ್ಕೆ ತಿಳಿಸಿತ್ತು. ಈ 18.85 ಲಕ್ಷ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಮಾನ್ಯತೆ ಪಡೆಯಲಿಕ್ಕಾದರೂ ಅಂತಿಮ ಐತೀರ್ಪು ಅಧಿಸೂಚನೆ ಪ್ರಕಟವಾಗಬೇಕಲ್ಲವೇ?
ಅಂತಿಮ ಐತೀರ್ಪಿನಿಂದ ನಮ್ಮ ಅಚ್ಚುಕಟ್ಟು ಪ್ರದೇಶ ವಿಸ್ತರಣೆಗೆ ಮಾತ್ರ ಅಲ್ಲ, ಹೆಚ್ಚುವರಿ ನೀರಿನ ಬಳಕೆಗೂ ಅವಕಾಶ ಸಿಗಲಿದೆ. ನ್ಯಾಯಮಂಡಳಿ ರಾಜ್ಯಕ್ಕೆ ಅಧಿಕೃತವಾಗಿ ನೀಡಿರುವ ಪಾಲು 270 ಟಿಎಂಸಿಯಾದರೂ ರಾಜ್ಯ ಬಳಸಲು ಅವಕಾಶ ನೀಡಿರುವ ಹೆಚ್ಚುವರಿ ನೀರಿನ ಪಾಲನ್ನು ಸೇರಿಸಿದರೆ ಇದು ಸುಮಾರು 310 ಟಿಎಂಸಿ ಆಗಲಿದೆ ಎಂದು ಹೇಳುತ್ತಿದೆ ಒಳಲೆಕ್ಕ.
1972-73ರಿಂದ 2004-05ರಿಂದ ಇಲ್ಲಿಯವರೆಗೆ ಬಿಳಿಗುಂಡ್ಲು ಜಲಮಾಪನದವರೆಗಿನ ನೀರಿನ ಸರಾಸರಿ ಉತ್ಪನ್ನ 538 ಟಿಎಂಸಿ. ಅಂತಿಮ ಐತೀರ್ಪಿನ ಪ್ರಕಾರ ತಮಿಳುನಾಡಿಗೆ 192 ಟಿಎಂಸಿ ಮತ್ತು ಕೇರಳಕ್ಕೆ 21 ಟಿಎಂಸಿ ನೀರು  ಹರಿಸಿದರೆ ನಮಗೆ ಉಳಿಯುವ ನೀರಿನ ಪ್ರಮಾಣ ಸುಮಾರು 325 ಟಿಎಂಸಿ. ಅಂತಿಮ ಐತೀರ್ಪಿನಲ್ಲಿ ನಮಗೆ ಅಧಿಕೃತವಾಗಿ 270 ಟಿಎಂಸಿ ನೀರನ್ನಷ್ಟೇ ನಿಗದಿಪಡಿಸಲಾಗಿದ್ದರೂ ಸಾಮಾನ್ಯ ಮಳೆಗಾಲದಲ್ಲಿ ನಮಗೆ ಹೆಚ್ಚುವರಿಯಾಗಿ ಸುಮಾರು 55 ಟಿಎಂಸಿ ನೀರು ಸಿಗಲಿದೆ. ಈ ನೀರಿನ ಬಳಕೆಗೆ ಸಂಬಂಧಿಸಿದಂತೆ ಅಂತಿಮ ಐತೀರ್ಪಿನಲ್ಲಿ ಯಾವ ನಿರ್ಬಂಧವನ್ನು ಹೇರಲಾಗಿಲ್ಲ. ಆದರೆ ಈ ನೀರು ಬಳಸಿಕೊಳ್ಳುವ ಎಷ್ಟು ನೀರಾವರಿ ಯೋಜನೆಗಳ ನೀಲಿನಕ್ಷೆಗಳನ್ನು ನಮ್ಮ ಸರ್ಕಾರ ಸಿದ್ದ ಮಾಡಿಟ್ಟುಕೊಂಡಿದೆ?
ಕೊನೆಯದಾಗಿ ಅಂತಿಮ ಐತೀರ್ಪಿನ ಅಧಿಸೂಚನೆ ಹೊರಡಿಸಿದ ಕೂಡಲೇ `ಕಾವೇರಿ ನಿರ್ವಹಣಾ ಮಂಡಳಿ' ಅಸ್ತಿತ್ವಕ್ಕೆ ಬಂದು ನಮ್ಮ ಜಲಾಶಯಗಳ ಮೇಲಿನ ಅಧಿಕಾರವನ್ನು ರಾಜ್ಯ ಕಳೆದುಕೊಳ್ಳಲಿದೆ ಎಂಬ ಆತಂಕದಲ್ಲಿ ಏನಾದರೂ ಹುರುಳಿದೆಯೇ? ವಾಸ್ತವ ಸಂಗತಿ ಏನೆಂದರೆ ಅಧಿಸೂಚನೆ ಹೊರಡಿಸಲಿಕ್ಕಷ್ಟೇ ಸುಪ್ರೀಂಕೋರ್ಟ್ ಹೇಳಿದೆ, `ಮಂಡಳಿ' ರಚನೆಯಾಗಬೇಕಾದರೆ ಕೇಂದ್ರ ಸರ್ಕಾರ ಅಂತರರಾಜ್ಯ ಜಲ ವಿವಾದ ಕಾಯಿದೆಯ 6 (ಎ) ಪ್ರಕಾರ ಇನ್ನೊಂದು ಅಧಿಸೂಚನೆ ಹೊರಡಿಸಬೇಕಾಗುತ್ತದೆ.
ಅದಕ್ಕೆ ಸಂಸತ್ ಅಂಗೀಕಾರ ನೀಡಬೇಕಾಗಿರುವುದರಿಂದ ಅದೊಂದು ಪ್ರತ್ಯೇಕ ಕಸರತ್ತು. ಮಂಡಳಿ ಸ್ಥಾಪನೆಯಾದರೂ ಅದೇನು ಪ್ರಧಾನಿ ಅಧ್ಯಕ್ಷರಾಗಿರುವ ಮತ್ತು ರಾಜ್ಯದ ಮುಖ್ಯಮಂತ್ರಿಗಳು ಸದಸ್ಯರಾಗಿರುವ ಕಾವೇರಿ ನದಿ ಪ್ರಾಧಿಕಾರ (ಸಿಆರ್‌ಎ) ಇಲ್ಲವೆ ಕೇಂದ್ರ ಜಲಸಂಪನ್ಮೂಲ ಖಾತೆಯ ಕಾರ್ಯದರ್ಶಿ ಅಧ್ಯಕ್ಷರಾಗಿರುವ ಮತ್ತು ರಾಜ್ಯದ ಮುಖ್ಯಕಾರ್ಯದರ್ಶಿಗಳು ಸದಸ್ಯರಾಗಿರುವ ಕಾವೇರಿ ಉಸ್ತುವಾರಿ ಸಮಿತಿ (ಸಿಎಂಸಿ)ಗಿಂತಲೂ ಹೆಚ್ಚು ಶಕ್ತಿಶಾಲಿಯಾಗಿ ಇರಲಾರದು.
ನ್ಯಾಯಮಂಡಳಿಯ ಶಿಫಾರಸಿನ ಪ್ರಕಾರ ಅಸ್ತಿತ್ವಕ್ಕೆ ಬರಲಿರುವ `ಕಾವೇರಿ ನಿರ್ವಹಣಾ ಮಂಡಳಿ' ಮತ್ತು `ಕಾವೇರಿ ನದಿ ನಿಯಂತ್ರಣಾ ಸಮಿತಿ'ಯಲ್ಲಿ ಯಾವ ಜನಪ್ರತಿನಿಧಿಗೂ ಪ್ರಾತಿನಿಧ್ಯ ಇಲ್ಲ. ನೀರಾವರಿ,ಕೃಷಿ, ಹವಾಮಾನ ತಜ್ಞರು ಮತ್ತು ಕೆಲವು ಅಧಿಕಾರಿಗಳನ್ನೊಳಗೊಂಡ ಈ `ಬಿಳಿ ಆನೆ'ಯ ರಚನೆಗೆ ಸಂಸತ್ ಅಂಗೀಕಾರ ನೀಡಬೇಕು. ತಮಗೆ ಪ್ರಾತಿನಿಧ್ಯ ಇಲ್ಲದ ಈ `ಮಂಡಳಿ', `ಸಮಿತಿ'ಗಳ ರಚನೆಗೆ ಕಾವೇರಿ ನದಿ ಕಣಿವೆಯ ರಾಜ್ಯಗಳ ಜನಪ್ರತಿನಿಧಿಗಳು ಅಷ್ಟೊಂದು ಸುಲಭದಲ್ಲಿ ಅವಕಾಶ ಮಾಡಿಕೊಡಲಿದ್ದಾರೆ ಎಂದು ಹೇಳುವ ಹಾಗಿಲ್ಲ.
ಆದುದರಿಂದ `ಇಂದು ಅಧಿಸೂಚನೆ ಜಾರಿಯಾಗಿ, ನಾಳೆಯೇ ಮಂಡಳಿ ರಚನೆಯಾಗಿ, ನಾಡಿದ್ದು ಜಲಾಶಯಗಳ ಮೇಲಿನ ಅಧಿಕಾರವನ್ನು ರಾಜ್ಯ ಕಳೆದುಕೊಳ್ಳಲಿದೆ' ಎಂಬ ಆತಂಕಕ್ಕೆ ಯಾವ ಆಧಾರಗಳೂ ಇಲ್ಲ. ಒಂದೊಮ್ಮೆ ಕಾವೇರಿ ನದಿನೀರು ನಿರ್ವಹಣೆಗೆ ಅಂತಹದ್ದೊಂದು ಸ್ವತಂತ್ರ ವ್ಯವಸ್ಥೆ ಅಸ್ತಿತ್ವಕ್ಕೆ ಬಂದರೂ ಹೆದರಬೇಕಾಗಿರುವುದು ಕಾವೇರಿ ನದಿ ನೀರು ಹಂಚಿಕೆಯ ವಿಷಯದಲ್ಲಿ ಬಹುಪಾಲು ಸತ್ಯವನ್ನೇ ಹೇಳುತ್ತಾ ಬಂದಿರುವ ಕರ್ನಾಟಕ ಅಲ್ಲ, ಬಹುಪಾಲು ಸುಳ್ಳುಗಳನ್ನೇ ಹೇಳುತ್ತಾ ಬಂದಿರುವ ತಮಿಳುನಾಡು. ಇತ್ತೀಚೆಗೆ ಸುಪ್ರೀಂಕೋರ್ಟಿನಲ್ಲಿಯೇ ತಮಿಳುನಾಡಿನ ಸುಳ್ಳು ಬಯಲಾಗಿದೆ. ಆದುದರಿಂದ ಅಧಿಸೂಚನೆಯ ಪ್ರಕಟಣೆ ಎಂದಾಕ್ಷಣ ಅದು ಬದುಕಿನ ಕೊನೆ ಎಂದು ಭೀತಿಪಡಬೇಕಾಗಿಲ್ಲ, ಅದರಾಚೆಗೂ ಬದುಕಿದೆ.

Thursday, October 18, 2012

ಮನಸ್ಸಿದ್ದರೆ ವಿವಾದ ಇತ್ಯರ್ಥಕ್ಕೆ ಮಾರ್ಗವೂ ಇದೆ October 15, 2012

ಕಾವೇರಿ ನೀರು ಹಂಚಿಕೆಯ ವಿಷಯ ರಾಷ್ಟ್ರದ ಗಮನ ಸೆಳೆಯುವುದು ವಿವಾದ ಉಲ್ಬಣಗೊಂಡಾಗ ಮಾತ್ರ. ಈ ಸಂದರ್ಭದಲ್ಲಿ  ದಿಢೀರ್ `ಕಾವೇರಿ ತಜ್ಞ`ರಾಗಿಬಿಡುವ ರಾಜಕಾರಣಿಗಳು, ಕನ್ನಡ ಹೋರಾಟಗಾರರು ಮತ್ತು ಚಲನಚಿತ್ರ ನಟ-ನಟಿಯರ ಅರೆಬೆಂದ ತಿಳಿವಳಿಕೆ ಮಾತುಗಳ ಮೂಲಕವೇ ಈ ವಿವಾದವನ್ನು ಇತರರು ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. 

`ಪ್ರಾಣ ಕೊಡುವ` `ರಕ್ತ ಹರಿಸುವ`... ಇವರ ವೀರಾವೇಶದ ಮಾತುಗಳ ಅಬ್ಬರದ ನಡುವೆ ಸಮಚಿತ್ತದ ಮತ್ತು ಪ್ರಜ್ಞಾವಂತಿಕೆಯ ಮಾತುಗಳು ನಮ್ಮವರಿಗೂ ರುಚಿಸುವುದಿಲ್ಲ. ಬೆಂಕಿ ಕಾರುವ ಮಾತುಗಳನ್ನೆಲ್ಲ ಕೇಳುವಾಗ ಸಂಘರ್ಷದ ಹಾದಿಯಲ್ಲದೆ ವಿವಾದ ಇತ್ಯರ್ಥಕ್ಕೆ ಬೇರೆ ದಾರಿಯೇ ಇಲ್ಲವೇನೋ ಎಂದು ಅನಿಸುವ ಅಪಾಯ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಯ ಪ್ರಮುಖ ಅಭಿವ್ಯಕ್ತಿಯಾದ ಬಂದ್, ಧರಣಿ, ಮುಷ್ಕರ-  ಒಂದು ಹಂತದವರೆಗೆ ಅವಶ್ಯಕವಾದರೂ ಅದರಿಂದಲೇ ವಿವಾದ ಇತ್ಯರ್ಥ ಸಾಧ್ಯ ಇಲ್ಲ.  ಬೇರೆ ಮಾರ್ಗಗಳೂ ಇವೆ, ಮನಸ್ಸು ಮಾಡಬೇಕು ಅಷ್ಟೆ. ಅಂತಹ  ಏಳು ಮಾರ್ಗಗಳು ಇಲ್ಲಿವೆ:

1. ನೀರನ್ನು ಮಂತ್ರದ ಮೂಲಕ ಸೃಷ್ಟಿಸಲಾಗುವುದಿಲ್ಲ, ಯಂತ್ರದ ಮೂಲಕ ಉತ್ಪಾದಿಸಲೂ ಆಗುವುದಿಲ್ಲ. ನೀರಿಗೆ ಇರುವ ಏಕೈಕ ಮೂಲ ಮಳೆ ಮಾತ್ರ. ಇದರಿಂದಾಗಿ ನಮ್ಮ ಬಳಕೆಗೆ ಅಗತ್ಯ ಇರುವಷ್ಟು ನೀರನ್ನು ಪಡೆಯಲು ಇರುವುದು ಎರಡೇ ಮಾರ್ಗ - ಒಂದು ಮಳೆ, ಇನ್ನೊಂದು ಮಳೆಯಿಂದ ಪಡೆದ ನೀರಿನ ವೈಜ್ಞಾನಿಕ ಬಳಕೆ. ಕಾವೇರಿ ಉಳಿದ ನದಿಗಳಂತಲ್ಲ, ಇದರಲ್ಲಿ ಲಭ್ಯ ಇರುವ ನೀರು ಕೇವಲ 740 ಟಿಎಂಸಿ. ಎಷ್ಟೇ ಮಳೆ ಬಂದರೂ ಕಾವೇರಿ ಕಣಿವೆಯ ನಾಲ್ಕು ರಾಜ್ಯಗಳು ಕೇಳುತ್ತಿರುವ ಸುಮಾರು 1200 ಟಿಎಂಸಿಗಳಷ್ಟು ನೀರನ್ನು ಒದಗಿಸುವುದು ಸಾಧ್ಯವೇ ಇಲ್ಲ. 

ಈ ಹಿನ್ನೆಲೆಯಲ್ಲಿ ನೀರಿನ ವೈಜ್ಞಾನಿಕ ಬಳಕೆಯ ಬಗ್ಗೆ ಯೋಚಿಸಲೇಬೇಕಾಗಿದೆ. ಇದಕ್ಕೆ ಇರುವ ಒಂದು ದಾರಿ ಬೆಳೆ ಪರಿವರ್ತನೆ. ಕಾವೇರಿ ಕಣಿವೆಯಲ್ಲಿರುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಬಹುಪಾಲು ರೈತರು ಬೆಳೆಯುತ್ತಿರುವುದು ಹೆಚ್ಚು ನೀರಿನ ಅಗತ್ಯ ಇರುವ ಭತ್ತ ಮತ್ತು ಕಬ್ಬು. ಒಂದು ಅಂದಾಜಿನ ಪ್ರಕಾರ ಎರಡೂ ರಾಜ್ಯಗಳ ಕನಿಷ್ಠ ಶೇಕಡಾ 30ರಷ್ಟು ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಮತ್ತು ಕಬ್ಬು ಬೆಳೆಯ ಬದಲಿಗೆ ಕಡಿಮೆ ನೀರನ್ನು ಬಳಸಿ ಹತ್ತಿ, ಸೂರ್ಯಕಾಂತಿ ಮತ್ತು ನೆಲಗಡಲೆ ಬೆಳೆಸಲು ಸಾಧ್ಯ.

2. ಬೆಳೆ ಪರಿವರ್ತನೆ ಸಾಧ್ಯವೇ ಇಲ್ಲದ ಕಾವೇರಿ ಕೊಳ್ಳದ ಶೇಕಡಾ 70ರಷ್ಟು ಪ್ರದೇಶದಲ್ಲಿ ನೀರು ಪೋಲಾಗುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ನಮ್ಮಲ್ಲಿ ಕೃಷಿನೀರು ಬಳಕೆಯ ಬಗ್ಗೆ `ಸಾಮಾಜಿಕ ಲೆಕ್ಕಪರಿಶೋಧನೆ` (ಸೋಷಿಯಲ್ ಅಡಿಟ್) ನಡೆದೇ ಇಲ್ಲ.

 ಹೆಚ್ಚಿನ ನೀರಾವರಿ ಯೋಜನೆಗಳಲ್ಲಿ ರೈತರ ಗದ್ದೆಗಳಿಗೆ ಹರಿಯುವುದಕ್ಕಿಂತ ಹೆಚ್ಚು ನೀರು ಕಾಲುವೆಗಳಲ್ಲಿ ಪೋಲಾಗುತ್ತದೆ. ಶೇಕಡಾ 40ರಷ್ಟು ನೀರು ಇಂಗಿ ನಷ್ಟವಾಗುತ್ತಿದೆ ಎಂದು ಅಂದಾಜು ಮಾಡಲಾಗಿದೆ. ಕಾಲುವೆಗಳ ಸಿಮೆಂಟ್ ಲೈನಿಂಗ್, ಸ್ಲ್ಯೂಸ್‌ಗಳ ದುರಸ್ತಿ, ಬೇಕಾಬಿಟ್ಟಿ ಕೆರೆಗಳಿಗೆ ಹರಿಸುವ ಬದಲಿಗೆ ಗದ್ದೆಕಾಲುವೆಗಳ (ಫೀಲ್ಡ್ ಚಾನೆಲ್) ನಿರ್ಮಾಣ ಇತ್ಯಾದಿ ಕ್ರಮಗಳ ಮೂಲಕ ನೀರು ಉಳಿಸಲು ಸಾಧ್ಯ. ಸಹಜವಾಗಿಯೇ ಇದಕ್ಕೆ ಹಣ ಎಲ್ಲಿದೆ ಎನ್ನುವ ಪ್ರಶ್ನೆ ಎದುರಾಗುತ್ತದೆ. ಇದಕ್ಕೂ ದಾರಿಗಳಿವೆ. ಅಂತಹದ್ದೊಂದು ದಾರಿ ಅಂದಾಜು 5,100 ಕೋಟಿ ರೂಪಾಯಿ ವೆಚ್ಚದ ವಿಶ್ವಸಂಸ್ಥೆ ನೆರವಿನ `ಕಾವೇರಿ ಆಧುನೀಕರಣ ಯೋಜನೆ`. ಇದು ಮೂರು ದಶಕಗಳಿಂದ ದೂಳು ತಿನ್ನುತ್ತಾ ಬಿದ್ದಿದೆ. ನ್ಯಾಯಮಂಡಳಿ ಮತ್ತು ನ್ಯಾಯಾಲಯದಲ್ಲಿ ಕಾವೇರಿ ವಿವಾದ ಇರುವವರೆಗೆ ಈ ಯೋಜನೆಯನ್ನು ಜಾರಿಗೆ ತರುವುದು ಸಾಧ್ಯ ಇಲ್ಲ. 

3. ಕಾವೇರಿ ನ್ಯಾಯಮಂಡಳಿಯಿಂದ ರಾಜ್ಯದ ಕುಡಿಯುವ ನೀರಿನ ಪಾಲಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂಕೋರ್ಟ್‌ಗೆ ಮೊರೆಹೋಗಲು ಅವಕಾಶ ಇದೆ. ರಾಷ್ಟ್ರೀಯ ಜಲನೀತಿಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗಿದೆ. ಆದರೆ ನ್ಯಾಯಮಂಡಳಿ ಇದಕ್ಕೆ ಕೊನೆಯ ಆದ್ಯತೆ ನೀಡಿರುವುದು ಮಾತ್ರವಲ್ಲ ನೀರಿನ ಲೆಕ್ಕಾಚಾರದಲ್ಲಿಯೂ ಎಡವಿದೆ.  ಬೆಂಗಳೂರು ಮಹಾನಗರ ಸೇರಿದಂತೆ ಕಾವೇರಿ ಕಣಿವೆಯ ಎಲ್ಲ ಹಳ್ಳಿ-ಪಟ್ಟಣಗಳ ಕುಡಿಯುವ ನೀರಿಗಾಗಿ ಕರ್ನಾಟಕ ಕೇಳಿದ್ದು 50 ಟಿಎಂಸಿ. ನ್ಯಾಯಮಂಡಳಿ ಗುರುತಿಸಿರುವುದು 17.22 ಟಿಎಂಸಿ. 

ಇದರಲ್ಲಿ ಬೆಂಗಳೂರಿಗೆ 8.70 ಮತ್ತು ಇತರ ಪ್ರದೇಶಕ್ಕೆ 8.52 ಟಿಎಂಸಿ. ಈ 17.22 ಟಿಎಂಸಿಯಲ್ಲಿ ಅರ್ಧದಷ್ಟು ನೀರು ಅಂತರ್ಜಲದಿಂದ ಲಭ್ಯ ಎಂದು ನ್ಯಾಯಮಂಡಳಿ ಹೇಳಿದೆ. ಅಷ್ಟಕ್ಕೆ ಸುಮ್ಮನಾಗದೆ ನೀರು ಬಳಕೆಯಾದ ನಂತರ ಶೇಕಡಾ 80 ಭಾಗ ಭೂಮಿ ಸೇರಿ ಅಂತರ್ಜಲವಾಗುವುದರಿಂದ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶದ ಕುಡಿಯುವ ನೀರಿನ ಅವಶ್ಯಕತೆ  1.75 ಟಿಎಂಸಿ ಮಾತ್ರ ಎಂದು ಹೇಳಿ ಗಾಯದ ಮೇಲೆ ಬರೆ ಹಾಕಿದೆ. ಈ ಅನ್ಯಾಯಕ್ಕೆ ಅವೈಜ್ಞಾನಿಕವಾದ ಲೆಕ್ಕಾಚಾರ ಮಾತ್ರ ಕಾರಣ ಅಲ್ಲ, ಬೆಂಗಳೂರು ನಗರದ ಮೂರನೆ ಎರಡು ಭಾಗ ಪೆನ್ನಾರ್ ನದಿ ಕಣಿವೆಯಲ್ಲಿದೆ ಎಂಬ ಅಭಿಪ್ರಾಯವೂ ಕಾರಣ. 

ಇಷ್ಟು ಮಾತ್ರವಲ್ಲ ಕುಡಿಯುವ ನೀರನ್ನು ಲೆಕ್ಕಹಾಕುವಾಗ ಬೆಂಗಳೂರು ಮಹಾನಗರದ 2011ರ ಜನಸಂಖ್ಯೆಯನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗಿದೆ. ಯಾವ ಕೋನದಿಂದ ಈ ನೀರು ವಿತರಣೆಯ ಕ್ರಮವನ್ನು ನೋಡಿದರೂ ಇದರಿಂದ ಅನ್ಯಾಯವಾಗಿರುವುದು ಸ್ಪಷ್ಟ. 

ಕುಡಿಯುವ ನೀರಿನ ವಿಚಾರದಲ್ಲಿ ನದಿ ಕಣಿವೆಯ ಗಡಿಗಳನ್ನು ಎಂದೋ ಉಲ್ಲಂಘಿಸಿಯಾಗಿದೆ. ಕಾವೇರಿ ನ್ಯಾಯಮಂಡಳಿ ಕಾರ್ಯನಿರ್ವಹಿಸುತ್ತಿದ್ದ ದೆಹಲಿ ಮಹಾನಗರ ಯಮುನಾ ನದಿ ಕಣಿವೆಗೆ ಸೇರಿದ್ದು, ಅಲ್ಲಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿರುವುದು ರಾವಿ-ಬಿಯಾಸ್‌ನಿಂದ ಎಂಬುದನ್ನು ನ್ಯಾಯಮೂರ್ತಿಗಳು ಹೇಗೆ ಮರೆತರೋ ಗೊತ್ತಿಲ್ಲ. ಆಂಧ್ರಪ್ರದೇಶ ಮತ್ತು ಕರ್ನಾಟಕ ತಮ್ಮ ಪಾಲನ್ನೂ ಮದ್ರಾಸ್ ನಗರದ ಕುಡಿಯುವ ನೀರಿಗಾಗಿ ನೀಡಿಲ್ಲವೇ? ಕಾವೇರಿ ಕಣಿವೆಯಿಂದ ಬೆಂಗಳೂರು ನಗರಕ್ಕೆ ನೀರು ಪೂರೈಸಲು ಕಣಿವೆಯ ಗಡಿ ಅಡ್ಡಿ ಆಗಲೇ ಬಾರದು.ಇದರ ಜತೆಗೆ ನ್ಯಾಯಮಂಡಳಿಯೇ ಬೆಂಗಳೂರು ನಗರದ ಮೂರನೆ ಎರಡು ಭಾಗ ಪೆನ್ನಾರ್ ನದಿ ಕಣಿವೆಗೆ ಸೇರಿದೆ ಎಂದು ಹೇಳಿರುವ ಕಾರಣ ಪೆನ್ನಾರ್-ಕಾವೇರಿ ನದಿಗಳ ಜೋಡಣೆಯ ಯೋಜನೆಗೆ ಚಾಲನೆ ನೀಡಬಹುದು.

4. ಈಗಿನ ವ್ಯವಸ್ಥೆಯಲ್ಲಿ ಕೃಷ್ಣರಾಜ ಸಾಗರದಿಂದ ಬಿಟ್ಟನೀರು ಬಿಳಿಗುಂಡ್ಲು ಮೂಲಕ ನೇರವಾಗಿ ಮೆಟ್ಟೂರು ಜಲಾಶಯಕ್ಕೆ ಹೋಗುತ್ತದೆ, ಅಲ್ಲಿಂದ ಸಮುದ್ರಕ್ಕೆ. ಕೆ.ಆರ್.ಸಾಗರದಿಂದ ಬಿಳಿಗುಂಡ್ಲು ವರೆಗಿನ ನಡುಹಾದಿಯಲ್ಲಿ ಯಾವ ಬ್ಯಾರೇಜ್ ಇಲ್ಲವೆ ಆಣೆಕಟ್ಟು ಇಲ್ಲ. ಈ ನಡುಮಾರ್ಗದಲ್ಲಿ ಬರುವ ಮೇಕೆದಾಟು, ಶಿವನಸಮುದ್ರ, ಹೊಗೆನಕಲ್ ಮತ್ತು ರಾಸಿಮಲೆಯಲ್ಲಿ ಆಣೆಕಟ್ಟುಗಳನ್ನು ನಿರ್ಮಿಸಿ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ರಾಷ್ಟ್ರೀಯ ಜಲವಿದ್ಯುತ್ ನಿಗಮ ತಯಾರಿಸಿತ್ತು. ಮೇಕೆದಾಟು ಮತ್ತು ಶಿವನಸಮುದ್ರ ಕರ್ನಾಟಕದ ಗಡಿಯೊಳಗೆ ಬರುವುದರಿಂದ ಇವುಗಳನ್ನು ನಾವೇ ಅನುಷ್ಠಾನಗೊಳಿಸುತ್ತೇವೆ ಎಂದು ಕರ್ನಾಟಕ ಸರ್ಕಾರ ಬಹಳ ಹಿಂದೆಯೇ ಹೇಳಿತ್ತು. 

ಆದರೆ ಈ ಯೋಜನೆಗಳಿಗೆ ನಮ್ಮಿಂದ ಅನುಮತಿ ಪಡೆಯಬೇಕೆಂದು ತಮಿಳುನಾಡು ಹಟ ಹಿಡಿದು ಕೂತಿದೆ. ಮೇಕೆದಾಟುವಿನಲ್ಲಿ 60ರಿಂದ 80 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಿದರೆ ಅವಶ್ಯಕತೆ ಇದ್ದಾಗ ಮೆಟ್ಟೂರಿಗೆ ಅಲ್ಲಿಂದ ನೀರು ಹರಿಸಬಹುದು ಇಲ್ಲದಿದ್ದರೆ ಅದರಿಂದ ವಿದ್ಯುತ್ ಉತ್ಪಾದನೆ ಮಾಡಬಹುದು. ಈ ಯೋಜನೆಗಳಿಗೆ ತಮಿಳುನಾಡು ರಾಜ್ಯದ ಒಪ್ಪಿಗೆ ಪಡೆಯಲು ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸಬೇಕೆಂದು ಕರ್ನಾಟಕ ಸರ್ಕಾರ ಕೋರಬಹುದು.

5. ಮೆಟ್ಟೂರು ಆಣೆಕಟ್ಟು ಮತ್ತು ಅದರ ಮೂಲಕ ನಿರ್ಮಿಸಲಾಗಿರುವ ಸ್ಟಾನ್ಲಿ ಜಲಾಶಯ ಸುಮಾರು 78 ವರ್ಷಗಳಷ್ಟು ಹಳೆಯದು. ಇತ್ತೀಚಿನ ವರ್ಷಗಳಲ್ಲಿ ಹೂಳು ತುಂಬಿ ಜಲಾಶಯದ ಸಂಗ್ರಹ ಸಾಮರ್ಥ್ಯ ಗಣನೀಯವಾಗಿ ಕುಸಿದಿದ್ದು ದುರಸ್ತಿ ಮಾಡುವ ಪ್ರಯತ್ನ ನಡೆದಿಲ್ಲ. ಇದರಿಂದಾಗಿ ತನ್ನ ಮೂಲ ಸಾಮರ್ಥ್ಯದಷ್ಟನ್ನು ಸಂಗ್ರಹಿಸಿಟ್ಟುಕೊಳ್ಳಲಾಗದೆ ಜಲಾಶಯದಿಂದ ಬಿಟ್ಟ ನೀರು ಸಮುದ್ರದ ಪಾಲಾಗುತ್ತಿದೆ. ಜಲಾಶಯದ ಹೂಳು ತೆಗೆದು ದುರಸ್ತಿ ಮಾಡುವ ಮೂಲಕ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸಬಹುದು.

6. `ಕಾವೇರಿ ಕುಟುಂಬ`ವನ್ನು ಸಕ್ರಿಯಗೊಳಿಸುವ ಪ್ರಯತ್ನಕ್ಕೆ ಚಾಲನೆ ನೀಡಬೇಕಾಗಿದೆ. ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ರೈತರ ಮುಖಂಡರನ್ನೊಳಗೊಂಡ ಈ ಸಂಘಟನೆಯನ್ನು ಹುಟ್ಟುಹಾಕಿದ್ದು `ಮದ್ರಾಸ್ ಅಭಿವೃದ್ಧಿ ಅಧ್ಯಯನ ಸಂಸ್ಥೆ`. 2003-04ರಲ್ಲಿ ಎರಡೂ ರಾಜ್ಯಗಳ ನಡುವಿನ ನೀರಿನ ವ್ಯಾಜ್ಯ ತಾರಕಕ್ಕೇರಿದಾಗ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಈ ಸಂಘಟನೆ ಶ್ರಮಿಸಿತ್ತು. 

ತಮಿಳುನಾಡಿನ ರೈತ ನಾಯಕ ರಂಗನಾಥನ್ ನೇತೃತ್ವದ ತಂಡ ಕರ್ನಾಟಕದ ಕಾವೇರಿ ಕಣಿವೆ ಪ್ರದೇಶಕ್ಕೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಪುಟ್ಟಣ್ಣಯ್ಯ, ಸಾಹಿತಿ ಎಚ್.ಎಲ್. ಕೇಶವಮೂರ್ತಿ, ಬೋರಯ್ಯ ಮತ್ತಿತರನ್ನೊಳಗೊಂಡ ತಂಡ ತಮಿಳುನಾಡಿನ ಕಾವೇರಿ ಕಣಿವೆ ಪ್ರದೇಶಕ್ಕೆ ಭೇಟಿ ನೀಡಿತ್ತು. ಎರಡೂ ರಾಜ್ಯಗಳ ರೈತನಾಯಕರು ಸೇರಿ ಈಗಾಗಲೇ ಹದಿನಾಲ್ಕು ಸಭೆಗಳನ್ನು ನಡೆಸಿದ್ದಾರೆ. ಈ ವರ್ಷದ ಆಗಸ್ಟ್ ತಿಂಗಳಲ್ಲಿ ನಿಗದಿಗೊಳಿಸಲಾಗಿದ್ದ ಸಭೆ ನಡೆದಿದ್ದರೆ ಈಗಿನ ಸಂಘರ್ಷದ ಕಾವು ಕಡಿಮೆಯಾಗುತ್ತಿತ್ತೋ ಏನೋ?

7. ಕಾವೇರಿ ನದಿ ನೀರಿನ ವಿವಾದವೂ ಸೇರಿದಂತೆ ರಾಜ್ಯದ ನೆಲ-ಜಲ-ಭಾಷೆಗಳ ರಕ್ಷಣೆಯ ಜವಾಬ್ದಾರಿ ಆಯಾ ಕ್ಷೇತ್ರಗಳ ಹೋರಾಟಗಾರರಿಗೆ ಒಪ್ಪಿಸಿಬಿಟ್ಟು ಉಳಿದವರು ಆರಾಮವಾಗಿ ಇದ್ದು ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಕೆಟ್ಟುಹೋಗಿದೆ, ವಾಹನ ದಟ್ಟಣೆ ಹೆಚ್ಚಾಗಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಎಂಟು ವರ್ಷಗಳ ಹಿಂದೆ ಭೂಮಿ-ಆಕಾಶ ಒಂದು ಮಾಡಿಬಿಟ್ಟಿದ್ದರು.
 
ದೆಹಲಿಯ ಪತ್ರಿಕೆಗಳಲ್ಲಿಯೂ ಇದು ದೊಡ್ಡ ಸುದ್ದಿಯಾಗಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎನ್.ಧರ್ಮಸಿಂಗ್ ಎದ್ದೆನೋ, ಬಿದ್ದೆನೋ ಎಂದು ದೆಹಲಿಗೆ ಓಡಿಹೋಗಿ ಪ್ರಧಾನಿಯಿಂದ ಹಿಡಿದು ಅವರ ಪಕ್ಷದ ನಾಯಕ-ನಾಯಕಿಯರವರೆಗೆ ಎಲ್ಲರಿಗೂ ಸ್ಪಷ್ಟೀಕರಣ ಕೊಟ್ಟಿದ್ದರು. ಪತ್ರಿಕಾ ಸಂಪಾದಕರನ್ನು ಭೇಟಿ ಮಾಡಿ ಕೈಜೋಡಿಸಿ ಬೇಡಿಕೊಂಡಿದ್ದರು. ರಸ್ತೆಗಳು ಇಂದಿಗೂ ಹಾಗೆಯೇ ಇವೆ ಎನ್ನುವುದು ಬೇರೆ ಮಾತು. ನಾರಾಯಣ ಮೂರ್ತಿಗಳು ಮಾತ್ರ ನಂತರ ಯಾಕೋ ಮೌನವಾಗಿಬಿಟ್ಟರು. 

ಈ ರೀತಿಯ ಪ್ರಭಾವಶಾಲಿ ಗಣ್ಯರ ದೊಡ್ಡ ದಂಡು ನಮ್ಮಲ್ಲಿದೆ. (ತಮಿಳುನಾಡಿನಲ್ಲಿ ಇಲ್ಲ). ರಾಜಕಾರಣಿಗಳ ವಿಶ್ವಾಸಾರ್ಹತೆ ಪಾತಾಳ ತಲುಪಿರುವುದರಿಂದ ಅವರನ್ನು ನೆಚ್ಚಿಕೊಳ್ಳುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ನಾರಾಯಣಮೂರ್ತಿ, ಅಜೀಂ ಪ್ರೇಮ್‌ಜಿ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಯು.ಆರ್.ಅನಂತಮೂರ್ತಿ, ಚಂದ್ರಶೇಖರ ಕಂಬಾರ, ಗಿರೀಶ್ ಕಾರ್ನಾಡ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಡಾ.ದೇವಿಪ್ರಸಾದ್ ಶೆಟ್ಟಿ ಮೊದಲಾದವರು ನಿಯೋಗ ಹೋಗಿ ಕಾವೇರಿ ನದಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಪ್ರಧಾನಿ ಮನಮೋಹನ್‌ಸಿಂಗ್ ಅವರಿಗೆ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಮನವರಿಕೆ ಮಾಡಿಕೊಡಬಾರದೇಕೆ? ಕಾವೇರಿ ಕಣಿವೆಯ ಕುಡಿಯುವ ನೀರಿಗೆ 1.75 ಟಿಎಂಸಿ, ಕೈಗಾರಿಕಾ ಬಳಕೆಗಾಗಿ 0.10 ಟಿಎಂಸಿ ನೀಡಿರುವುದು ನ್ಯಾಯವೇ ಎಂದಾದರೂ ಕೇಳಬಹುದಲ್ಲವೇ?

ಬೇಕಾಗಿರುವುದು ಸುಡುವ ಬೆಂಕಿ ಅಲ್ಲ; ಅರಿವಿನ ಬೆಳಕು - ದಿನೇಶ್ ಅಮೀನ್ ಮಟ್ಟು October 08, 2012


ಗೋಡೆಯವರೆಗೆ ತಳ್ಳಿಸಿಕೊಂಡ ಮನುಷ್ಯನಿಗೆ ತಿರುಗಿ ಬೀಳುವುದನ್ನು ಬಿಟ್ಟು ಬೇರೆ ಆಯ್ಕೆಗಳಿರುವುದಿಲ್ಲ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ರೈತರದ್ದು ಈಗ ಇದೇ ಸ್ಥಿತಿ. ಅಸಹಾಯಕತೆಯಿಂದಾಗಿ ಹತಾಶರಾಗಿರುವ ಅವರು ಎಲ್ಲರ ಮೇಲೆ ಎರಗಿ ಬೀಳುತ್ತಿದ್ದಾರೆ.
ಅನ್ಯಾಯದ ಪರಂಪರೆಗೆ ಸಿಕ್ಕಿ ಸೋತುಹೋದವರಿಗೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳು, ಅಲ್ಲಿ ವಾದ ಮಂಡಿಸುವ ನಮ್ಮ ವಕೀಲರು, ಕಾವೇರಿ ನದಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಪ್ರಧಾನಿಗಳು, ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಕೊನೆಗೆ ಬೀದಿಯಲ್ಲಿ ತಮ್ಮ ಪಾಡಿಗೆ ಹೋಗುತ್ತಿರುವ ಅಮಾಯಕ ಜನ.. ಎಲ್ಲರೂ ತಮ್ಮ ಶತ್ರುಗಳಂತೆಯೇ ಕಾಣಿಸುವುದು ಸಹಜ.
(ಇವರಲ್ಲಿ ಕೆಲವರು ಶತ್ರುಗಳೆನ್ನುವುದೂ ನಿಜ). ಈ ರೀತಿಯ ಭಾವಾವೇಶದ ಉಗ್ರ ಅಭಿವ್ಯಕ್ತಿ ವೈಯಕ್ತಿಕವಾದ ಹತಾಶೆಯನ್ನು ಕಡಿಮೆ ಮಾಡಿ  ಒಂದಷ್ಟು ಸಮಾಧಾನವನ್ನು ತಂದುಕೊಡಬಹುದು, ಆದರೆ ನ್ಯಾಯವನ್ನು ಪಡೆಯಲು ಸಾಧ್ಯವಾಗಬಹುದೇ?
ಈ ರೋಷ-ದ್ವೇಷಗಳ  ಪ್ರದರ್ಶನ ಹೆಚ್ಚೆಂದರೆ ಈ ತಿಂಗಳ ಅಂತ್ಯದವರೆಗೆ ಇರಬಹುದು.
ತಮಿಳುನಾಡಿನಲ್ಲಿ ಈಶಾನ್ಯ ಮಾರುತ ಸುರಿಯಲಾರಂಭಿಸುತ್ತಿದ್ದಂತೆ ಆ ಕಡೆಯ ಒತ್ತಡ ಕಡಿಮೆಯಾಗುತ್ತದೆ. ಅಷ್ಟರಲ್ಲಿ ದೇವೇಗೌಡರ ಕಣ್ಣೀರು ಆರಿಹೋಗುತ್ತದೆ, ನಟ ಅಂಬರೀಷ್ ಅವರ ಅಭಿನಯವೂ ಮುಗಿದಿರುತ್ತದೆ, ಮಾದೇಗೌಡರ ಸಿಟ್ಟು ತಣ್ಣಗಾಗುತ್ತದೆ, ಕನ್ನಡ ಹೋರಾಟಗಾರರು ಹಳೆಯ ಭಿತ್ತಿಪತ್ರಗಳನ್ನು ಕಿತ್ತುಹಾಕಿ ಹೊಸ ಹೋರಾಟದ ಭಿತ್ತಿಪತ್ರಗಳನ್ನು ಅಂಟಿಸಲು ಗೋಡೆಗಳನ್ನು ಹುಡುಕುತ್ತಿರುತ್ತಾರೆ.

ಮಾಧ್ಯಮಗಳು ಮತ್ತೊಂದು ರೋಚಕ ಸುದ್ದಿಯ ಬೆನ್ನು ಹತ್ತಿರುತ್ತವೆ. ಕಾವೇರಿ ಕಣಿವೆಯ ರೈತರು ರಾಗಿಮುದ್ದೆ ತಿಂದು ಕಂಬಳಿ ಹೊದ್ದುಕೊಂಡು ಮಲಗಿಬಿಡುತ್ತಾರೆ.
ಮುಂದಿನವರ್ಷದ ಜುಲೈ ತಿಂಗಳ ಹೊತ್ತಿಗೆ ಜಯಲಲಿತಾ ಇಲ್ಲವೇ ಕರುಣಾನಿಧಿ  `ಕರ್ನಾಟಕ ನೀರು ಬಿಡುತ್ತಿಲ್ಲ` ಎಂದು ಪ್ರಧಾನಮಂತ್ರಿಗೆ ಪತ್ರ ಬರೆದಾಗ  ನಿದ್ದೆ ಹೋದ ರೈತರಾದಿಯಾಗಿ ವಿರಮಿಸುತ್ತಿದ್ದ ಪ್ರತಿಭಟನೆಯ ಹಳೆಯ ಪಾತ್ರಧಾರಿಗಳೆಲ್ಲ  ಮೈಮುರಿದು ಕೊಡವಿಕೊಂಡು ಎದ್ದು ನಿಲ್ಲುತ್ತಾರೆ.
ನೆಲ-ಜಲದ ಪ್ರೇಮ ಭೋರ್ಗರೆದು ಹರಿಯುತ್ತದೆ. ಮತ್ತೆ ಪ್ರತಿಭಟನೆ, ಬಂದ್, ಒಂದಷ್ಟು ಆರೋಪ ನಂತರ ಎಲ್ಲವೂ ಯಥಾಸ್ಥಿತಿ. ಇಪ್ಪತ್ತೊಂದು ವರ್ಷಗಳ ಹಿಂದೆ ಕಾವೇರಿ ನ್ಯಾಯಮಂಡಳಿ ಮಧ್ಯಂತರ ಐತೀರ್ಪು ನೀಡಿದ ದಿನದಿಂದ ಇಲ್ಲಿಯ ವರೆಗೆ ನಡೆಯುತ್ತಾ ಬಂದದ್ದು ಇದೇ  ನಾಟಕ.
(ಪುರಾವೆಗಳು ಬೇಕು ಎನ್ನುವವರು ಈ 21 ವರ್ಷಗಳ ಪತ್ರಿಕೆಗಳನ್ನು ಹುಡುಕಿ ಜುಲೈ ನಿಂದ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ ಪ್ರಕಟವಾದ ಸುದ್ದಿಗಳ ಮೇಲೆ ಕಣ್ಣುಹಾಯಿಸಬಹುದು.)

ಪ್ರತಿಬಾರಿ ತಮಿಳುನಾಡು ಕರ್ನಾಟಕವನ್ನು ಈ ರೀತಿಯ `ಖೆಡ್ಡಾ`ಕ್ಕೆ ಬೀಳಿಸಿ ಚಂದ ನೋಡುತ್ತಾ ತಣ್ಣಗೆ ಕೂತಿರುತ್ತದೆ. ಗುಂಡಿಗೆ ಬಿದ್ದವರು ಸಹಜವಾಗಿಯೇ ಲಬೋಲಬೋ ಎಂದು ಎದೆಬಡಿದುಕೊಳ್ಳುತ್ತಾರೆ.
ತಮಿಳುನಾಡಿನ ರಾಜಕಾರಣಿಗಳು ಈ ರೀತಿ ಕೂಗಾಡುತ್ತಿರುವ ಕನ್ನಡಿಗರನ್ನು ತೋರಿಸಿ `ಕನ್ನಡಿಗರಿಗೆ ನ್ಯಾಯಾಲಯ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆ ಹೀಗೆ ಯಾವುದರ ಮೇಲೆಯೂ ನಂಬಿಕೆ ಇಲ್ಲ. ಇವರು ಜಗಳಗಂಟರು, ಭಾಷಾಂಧರು....` ಎಂಬ ಆರೋಪಗಳನ್ನು ಮಾಡುತ್ತಾರೆ.
ಈ ಆರೋಪವನ್ನು ಸಾಬೀತುಪಡಿಸುವಂತೆ ಕನ್ನಡಿಗರು ಇನ್ನಷ್ಟು ಉಗ್ರರೀತಿಯಲ್ಲಿ ಭಾಷಣ ಮಾಡುತ್ತಾರೆ, ಘೋಷಣೆ ಕೂಗುತ್ತಾರೆ. ರಕ್ತ ಹರಿಸುವ, ನೀರಿಗೆ ಧುಮುಕುವ ವೀರಾವೇಶದ ಮಾತುಗಳನ್ನಾಡುತ್ತಾರೆ. ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ತಿಳಿದುಕೊಳ್ಳಲು ತನಿಖಾ ಸಮಿತಿ ನೇಮಿಸಬೇಕಾಗಿಲ್ಲ.
ಕಾವೇರಿ ನದಿಯ ಇತಿಹಾಸವನ್ನು ತೆಗೆದುನೋಡಿದರೆ ಸಾಕು, ಆಗಿರುವ ಅನ್ಯಾಯಕ್ಕೆ ಪುಟಪುಟಗಳಲ್ಲಿ ಸಾಕ್ಷಿ ಸಿಗುತ್ತದೆ. ಆದರೆ ಕರ್ನಾಟಕದಿಂದ ಹೊರಗೆ ಮುಖ್ಯವಾಗಿ ರಾಜಧಾನಿ ದೆಹಲಿಯಲ್ಲಿ ಜನಾಭಿಪ್ರಾಯ ಅನ್ಯಾಯಕ್ಕೊಳಗಾದ ಕರ್ನಾಟಕದ ಪರವಾಗಿ ಇಲ್ಲ, ಕರ್ನಾಟಕದ ಪ್ರಾಂತೀಯ ಧೋರಣೆಗೆ ಬಲಿಯಾಗುತ್ತಿದ್ದೇವೆ ಎಂದು ಸುಳ್ಳುಸುಳ್ಳೇ ರೋದಿಸುತ್ತಿರುವ ತಮಿಳುನಾಡು ಪರವಾಗಿ ಇದೆ.
ಹೀಗೆಂದು ಹೇಳಲು ನನಗೆ ಯಾವ ಹಿಂಜರಿಕೆಯೂ ಇಲ್ಲ. (ದೆಹಲಿಯಲ್ಲಿದ್ದಷ್ಟು ಕಾಲ ಅಲ್ಲಿನ ಪತ್ರಕರ್ತರು, ಅಧಿಕಾರಿಗಳು ಮತ್ತು ರಾಜಕಾರಣಿಗಳ ಜತೆಗಿನ ಒಡನಾಟದ ಆಧಾರದಲ್ಲಿ, ಜವಾಬ್ದಾರಿಯಿಂದಲೇ ಇದನ್ನು ಹೇಳುತ್ತಿದ್ದೇನೆ.)

ಯಾಕೆ ಹೀಗಾಗುತ್ತಿದೆ ?ಕಾವೇರಿ ನ್ಯಾಯಮಂಡಳಿ ಸ್ಥಾಪನೆಯ ಹಿಂದಿನ ಇತಿಹಾಸವನ್ನು ಕೆದಕುವುದು ಬೇಡ, ಅದರ ನಂತರದ ಬೆಳವಣಿಗೆಗಳನ್ನು ಗಮನಿಸುತ್ತಾ ಬಂದರೂ ಕರ್ನಾಟಕ ಮತ್ತೆಮತ್ತೆ ಎಡವಿ ಬಿದ್ದ ಹೆಗ್ಗುರುತುಗಳು ಕಾಣಸಿಗುತ್ತವೆ.
ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಯಾವಾಗಲೂ ನಮಗೆ ಅನ್ಯಾಯವಾಗಿದೆ ಎಂಬ ಭಾವನೆಯನ್ನು ಹುಟ್ಟಿಸುವಂತಹ ತೀರ್ಪುಗಳನ್ನೇ ಯಾಕೆ ನೀಡುತ್ತಿದೆ ಎಂಬ ಪ್ರಶ್ನೆಗೂ ಹೆಜ್ಜೆ ತಪ್ಪಿದ ಕರ್ನಾಟಕದ ನಡವಳಿಕೆಯಲ್ಲಿ ಉತ್ತರ ಇದೆ. 

ಕರ್ನಾಟಕದ ಆಯ್ಕೆ ನ್ಯಾಯಮಂಡಳಿ ಖಂಡಿತ ಆಗಿರಲಿಲ್ಲ, ಮಾತುಕತೆಯ ಮೂಲಕವೇ ವಿವಾದವನ್ನು ಬಗೆಹರಿಸಿಕೊಳ್ಳಬೇಕೆಂಬುದು ರಾಜ್ಯದ ಬಯಕೆಯಾಗಿತ್ತು. ಇದರ ಹೊರತಾಗಿಯೂ ಸುಪ್ರೀಂಕೋರ್ಟ್ 1990ರಲ್ಲಿ ಕಾವೇರಿ ನ್ಯಾಯಮಂಡಳಿ ಸ್ಥಾಪನೆಗೆ ಆದೇಶ ನೀಡಿದ್ದರಿಂದ ಸಹಜವಾಗಿಯೇ ಕರ್ನಾಟಕಕ್ಕೆ ಅಸಮಾಧಾನವಾಗಿತ್ತು.
ಮರುವರ್ಷವೇ ನ್ಯಾಯಮಂಡಳಿ ನೀಡಿದ ಮಧ್ಯಂತರ ಐತೀರ್ಪು ಈ ಅಸಮಾಧಾನವನ್ನು ಇನ್ನಷ್ಟು ಹೆಚ್ಚಿಸಿತ್ತು.  ಸರ್ಕಾರ ಬದಲಾದರೂ, ಆಡಳಿತ ಪಕ್ಷಗಳು ಬದಲಾದರೂ ನ್ಯಾಯಮಂಡಳಿಯ ಬಗೆಗಿನ ಕರ್ನಾಟಕದ ಅಸಹನೆ ಕಡಿಮೆಯಾಗಲೇ ಇಲ್ಲ.
1991ರಲ್ಲಿ ಕಾವೇರಿ ಕಣಿವೆಗೆ ಭೇಟಿ ನೀಡಿದ್ದ ನ್ಯಾಯಮಂಡಳಿಯ ನ್ಯಾಯಮೂರ್ತಿಗಳನ್ನು ರಾಜ್ಯದ ಜನತೆ ಸ್ವಾಗತಿಸಿದ್ದು ಕಪ್ಪುಬಾವುಟ ಮತ್ತು `ಗೊ ಬ್ಯಾಕ್` ಎಂಬ ಘೋಷಣೆಗಳ ಮೂಲಕ. ಇಷ್ಟು ಮಾತ್ರವಲ್ಲ, ನ್ಯಾಯಮಂಡಳಿ ಕಾವೇರಿ ಕಣಿವೆಯ ರಾಜ್ಯಗಳಿಗೆ ಭೇಟಿ ನೀಡಿದಾಗ ತಮಿಳುನಾಡಿನಲ್ಲಿ ನ್ಯಾಯಮೂರ್ತಿಗಳ ಪತ್ನಿಯರಿಗೆ ಸೀರೆ-ಬಳೆ ಕೊಟ್ಟರು ಎಂದು ಗುಲ್ಲೆಬ್ಬಿಸಿ ಕೊನೆಗೆ ಸುಪ್ರೀಂಕೋರ್ಟ್‌ವರೆಗೆ ದೂರು ಕೊಂಡೊಯ್ದದದ್ದು ಕೂಡಾ ಕರ್ನಾಟಕ.
ರಾಜ್ಯಕ್ಕೆ ನ್ಯಾಯಮಂಡಳಿ ಭೇಟಿ ನೀಡಿದ್ದಾಗ ವಿಧಾನಸಭೆಯ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಔತಣಕೂಟಕ್ಕೆ  ನ್ಯಾಯಮೂರ್ತಿಗಳೊಬ್ಬರು ನಗರದಲ್ಲಿರುವ ತಮ್ಮ ಸಂಬಂಧಿಕರನ್ನು ಆಹ್ಹಾನಿಸಲು ಬಯಸಿದಾಗ ಕೆಲವು ಅಧಿಕಾರಿಗಳು ನಿರಾಕರಿಸಿ ಮುಜುಗರಕ್ಕೆ ಈಡು ಮಾಡಿದ್ದರು.
ಆಗ ಇದ್ದ ಮೂವರು ನ್ಯಾಯಮೂರ್ತಿಗಳಲ್ಲಿ ಒಬ್ಬರು ಅಂತಿಮ ಐತೀರ್ಪು ನೀಡಿದ ನ್ಯಾಯಮಂಡಳಿಯಲ್ಲಿಯೂ ಇದ್ದರು. ಈ ರೀತಿ ನ್ಯಾಯಮೂರ್ತಿಗಳನ್ನು ಕೆಣಕಿದ ಹಲವಾರು ಉದಾಹರಣೆಗಳಿವೆ. ತಮಿಳುನಾಡಿನ ನಡವಳಿಕೆ ಇದಕ್ಕಿಂತ ಸಂಪೂರ್ಣ ಭಿನ್ನವಾಗಿತ್ತು.
ನ್ಯಾಯಮಂಡಳಿಯ ಸದಸ್ಯರು ಸಾಗುವ ಹಾದಿಯಲ್ಲೆಲ್ಲ ಅವರನ್ನು ಸ್ವಾಗತಿಸುವ ಬ್ಯಾನರ್‌ಗಳು, ಕಮಾನುಗಳನ್ನು ಹಾಕಲಾಗಿತ್ತು. ತಂಜಾವೂರಿನ ಜಿಲ್ಲಾಧಿಕಾರಿಗಳು ನ್ಯಾಯಮೂರ್ತಿಗಳ ಕಾಲಿಗೆ ಬಿದ್ದುಬಿಟ್ಟಿದ್ದರು. ಜಯಲಲಿತಾ ಆಗ ಅಧಿಕಾರದಲ್ಲಿ ಇಲ್ಲದೆ ಇದ್ದರೂ ಬಂದು ನ್ಯಾಯಮೂರ್ತಿಗಳನ್ನು ಎದುರುಗೊಂಡಿದ್ದರು. ಇದು ತಮಿಳುನಾಡು ಶೈಲಿ.ಅದೆಂದೂ ನ್ಯಾಯಮಂಡಳಿಯನ್ನು ಕೆಣಕಲು ಹೋಗಿಲ್ಲ.

ಇನ್ನೇನು ನ್ಯಾಯಮಂಡಳಿ ಅಂತಿಮ ಐತೀರ್ಪು ನೀಡುವ ಕೆಲವೇ ತಿಂಗಳುಗಳ ಮೊದಲು ಇಬ್ಬರು ಸದಸ್ಯ ನ್ಯಾಯಮೂರ್ತಿಗಳು ಕಾವೇರಿ ಕಣಿವೆಯಲ್ಲಿ ಪ್ರವಾಸ ಹೋಗಲು ಇಚ್ಚಿಸಿದಾಗಲೂ ವಿರೋಧಿಸಿದ್ದು ಕರ್ನಾಟಕ.
ಈ ಪ್ರವಾಸಕ್ಕೆ ನ್ಯಾಯಮಂಡಳಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಎನ್.ಪಿ.ಸಿಂಗ್ ವ್ಯಕ್ತಪಡಿಸಿದ್ದ ವಿರೋಧವನ್ನೇ ಪ್ರಸ್ತಾಪಿಸಿ `ಅಧ್ಯಕ್ಷರು ಮತ್ತು ಸದಸ್ಯರ ನಡುವಿನ ಜಗಳದಿಂದ ನ್ಯಾಯಮಂಡಳಿ ಮುರಿದುಬಿದ್ದಿದೆ.
ಈ ಪರಿಸ್ಥಿತಿಯಲ್ಲಿ ನ್ಯಾಯಮಂಡಳಿಯನ್ನು ಪುನರ‌್ರಚಿಸಬೇಕು` ಎಂದು ಬೆಂಗಳೂರಿನ ಗಾಂಧಿ ಸಾಹಿತ್ಯ ಸಂಘ ಸುಪ್ರೀಂಕೋರ್ಟಿಗೆ ಮೊರೆ ಹೋಗಿತ್ತು. ಅದರ ಹಿಂದೆ ರಾಜ್ಯದ ಪ್ರಭಾವಶಾಲಿ ನಾಯಕರೊಬ್ಬರಿದ್ದರು ಎನ್ನುವುದು  ಗುಟ್ಟಿನ ಸಂಗತಿಯಾಗಿರಲಿಲ್ಲ.

ಅಂತಿಮವಾಗಿ ನ್ಯಾಯಮಂಡಳಿಯನ್ನು ಪುನರ‌್ರಚಿಸಬೇಕು ಎಂದು ರಾಜ್ಯ ಸರ್ಕಾರವೇ ಸುಪ್ರೀಂಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿತ್ತು. ಈ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ್ದು ಮಾತ್ರವಲ್ಲ ಕರ್ನಾಟಕಕ್ಕೆ ಮಾತಿನ ಚಾಟಿಯಿಂದ ಬಾರಿಸಿತ್ತು.

ಈ ರೀತಿಯ `ಅಧಿಕ ಪ್ರಸಂಗತನ`ದ ನಡವಳಿಕೆಯನ್ನು ಅತೀ ಎಚ್ಚರಿಕೆಯ ಸ್ವಭಾವದ ಎಸ್.ಎಂ.ಕೃಷ್ಣ ಅಧಿಕಾರದಲ್ಲಿದ್ದಾಗಲೂ ಮುಂದುವರಿಸಿದರು. 1.25 ಟಿಎಂಸಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಮತ್ತು 0.8 ಟಿಎಂಸಿ ನೀರು ಹರಿಸಬೇಕೆಂದು ಕಾವೇರಿ ನದಿಪ್ರಾಧಿಕಾರ ನೀಡಿದ್ದ ಆದೇಶಗಳೆರಡನ್ನೂ ಧಿಕ್ಕರಿಸಿದ್ದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾವೇರಿ ಕಣಿವೆಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಜನಪ್ರಿಯ ರಾಜಕೀಯದ ದೌರ್ಬಲ್ಯಕ್ಕೆ ಬಿದ್ದು ಬಿಟ್ಟರು.
ಇದರಿಂದ ಕೆರಳಿದ ಸುಪ್ರೀಂಕೋರ್ಟ್ ಅವರ ವಿರುದ್ಧ ನ್ಯಾಯಾಂಗ ನಿಂದನೆಯ ಮೊಕದ್ದಮೆಯನ್ನೂ ದಾಖಲಿಸಿತ್ತು. ಆ ಕಾಲದಲ್ಲಿ ಸುಪ್ರೀಂಕೋರ್ಟ್‌ನ ಸಂದರ್ಶಕರ ಬಾಕ್ಸ್‌ನಲ್ಲಿ ಖಾದಿ ಬಟ್ಟೆಧರಿಸಿದ್ದ ರಾಜಕಾರಣಿಗಳನ್ನು ನೋಡಿದ ಕೂಡಲೇ ನ್ಯಾಯಮೂರ್ತಿಗಳು ಕೆಂಡಾಮಂಡಲವಾಗುತ್ತಿದ್ದರು.
ಇದರಿಂದ ತಪ್ಪಿಸಿಕೊಳ್ಳಲಿಕ್ಕಾಗಿಯೇ ಆಗಿನ ಆಡಳಿತ ಪಕ್ಷದ ಹಲವು ನಾಯಕರು ಕಪ್ಪುಕೋಟ್ ಧರಿಸಿ ನ್ಯಾಯಾಲಯಕ್ಕೆಬರುತ್ತಿದ್ದರು. ಸುಪ್ರೀಂಕೋರ್ಟ್‌ಗೆ  ಕರ್ನಾಟಕದ ಬಗ್ಗೆ ಅಷ್ಟೊಂದು ಸಿಟ್ಟಿತ್ತು.  ಈ ರೀತಿ ಕಾವೇರಿ ನದಿನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿ ಮತ್ತು ನ್ಯಾಯಾಲಯಗಳನ್ನು ಎದುರುಹಾಕಿಕೊಳ್ಳುವ ಯಾವ ಅವಕಾಶವನ್ನು ರಾಜ್ಯದ ರಾಜಕಾರಣಿಗಳು ಬಿಟ್ಟುಕೊಟ್ಟಿಲ್ಲ.
ತಮಿಳುನಾಡು ಎಂದೂ ಈ ರೀತಿ ವರ್ತಿಸದೆ ಉಪಾಯದಿಂದ ಎಲ್ಲರನ್ನೂ ಒಲಿಸಿಕೊಂಡು ಕೆಲಸ ಸಾಧಿಸಿಕೊಳ್ಳುತ್ತಾ ಬಂದಿದೆ. ರಾಜ್ಯವನ್ನು ಆಳಿದ ರಾಜಕೀಯ ಪಕ್ಷಗಳೆಲ್ಲವೂ ಕಾವೇರಿ ವಿವಾದದ ಬಗೆಗಿನ ತೀರ್ಮಾನಗಳನ್ನು ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರದ ಆಧಾರದಲ್ಲಿಯೇ ಕೈಗೊಳ್ಳುತ್ತಾ ಬಂದಿವೆಯೇ ಹೊರತು ಕಾನೂನು ಮತ್ತು ನೀರಾವರಿ ತಜ್ಞರ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ.
ಈಗಿನ ವಿವಾದವನ್ನೇ ನೋಡುವುದಾದರೆ, `ಸದ್ಭಾವನೆಯ ಸಂಕೇತವಾಗಿ ಕಾವೇರಿ ನದಿ ಪ್ರಾಧಿಕಾರದ ಸಭೆ ನಡೆಯುವ ವರೆಗೆ ಹತ್ತುಸಾವಿರ ಕ್ಯೂಸೆಕ್ ನೀರು ಬಿಡಲು ತಯಾರು` ಎಂದು ಹೇಳಿ ತನ್ನ ಕೊರಳನ್ನು ಪ್ರಾಧಿಕಾರಕ್ಕೆ ಒಪ್ಪಿಸಿದ್ದು ಯಾರು? 

ಇಷ್ಟೊಂದು ನೀರು ಬಿಟ್ಟುಬಿಟ್ಟರೆ ಕರ್ನಾಟಕದ ರೈತರಿಗೆ ತೊಂದರೆಯಾಗುತ್ತದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಿಗಾಗಲಿ, ಮುಖ್ಯಮಂತ್ರಿಗಳಿಗಾಗಲಿ ಗೊತ್ತಾಗಲಿಲ್ಲವೇ? ಮುಖ್ಯಮಂತ್ರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಲೆಂದೇ ಜಲಸಂಪನ್ಮೂಲ ಸಚಿವರು ಹೀಗೆ ಮಾಡಿದರೇ?

ಕರ್ನಾಟಕದಲ್ಲಿ ಈಗಲೂ ಕಾವೇರಿ ವಿವಾದದ ಮಾಹಿತಿಯನ್ನು ಬೆರಳತುದಿಯಲ್ಲಿ ಇಟ್ಟುಕೊಂಡವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಈಗಲೂ ದೆಹಲಿಯಲ್ಲಿ ಅವರ ಮಾತಿಗೆ ತೂಕ ಇದೆ.
ಇಂತಹವರು ಎಲ್ಲ ಮುಗಿದ ಮೇಲೆ ಪತ್ರಿಕಾಗೋಷ್ಠಿ ನಡೆಸಿ ಕಣ್ಣೀರು ಹಾಕಿ ಮುತ್ಸದ್ಧಿತನ ಮೆರೆಯುವ ಬದಲಿಗೆ ಮೊದಲೇ ಹೋಗಿ ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡಬಹುದಿತ್ತಲ್ಲವೇ?
ಕೇಂದ್ರದಲ್ಲಿ ಎನ್‌ಡಿಎ ಅಧಿಕಾರದಲ್ಲಿದ್ದಾಗ ಅನಂತಕುಮಾರ್ ಅವರನ್ನು ಕಟ್ಟಿಕೊಂಡು ಹೋಗಿ ಆಗಿನ ಪ್ರಧಾನಿ ಅಟಲ ಬಿಹಾರಿ ವಾಜಪೇಯಿ ಅವರಿಗೆ ಮನವೊಲಿಸಲು ಪ್ರಯತ್ನಿಸಿರಲಿಲ್ಲವೇ? ಈ ಬಾರಿ ಯಾಕೆ ಸುಮ್ಮನಿದ್ದರು?  ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ಕಾವೇರಿ ಜನ ತಿರುಗಿಬಿದ್ದರೆ ತಮ್ಮ ಪಕ್ಷಕ್ಕೆ ಲಾಭ ಎಂಬ ರಾಜಕೀಯ ಲೆಕ್ಕಚಾರವೇನಾದರೂ ಅವರಲ್ಲಿತ್ತೇ?

ರೆಬೆಲ್‌ಸ್ಟಾರ್ ಖ್ಯಾತಿಯ ಅಂಬರೀಷ್ ಅವರು ಈಗ ಕಾವೇರಿ ಚಳವಳಿಯ ನಾಯಕರು. ಮಂಡ್ಯದ ಮತದಾರರು ಪ್ರೀತಿಯಿಂದ ಅವರನ್ನು ಆರಿಸಿ ಲೋಕಸಭೆಗೆ ಕಳುಹಿಸಿದ್ದರು. ಹತ್ತು ವರ್ಷ ಲೋಕಸಭೆಯಲ್ಲಿದ್ದ ಅವರು ರಾಜ್ಯಕ್ಕೆ ಸಂಬಂಧಿಸಿದ ಉಳಿದ ವಿಷಯ ಬಿಡಿ,ಕನಿಷ್ಠ ಕಾವೇರಿ ಬಗ್ಗೆಯಾದರೂ ಒಂದು ದಿನ ಮಾತನಾಡಿದ್ದರೇ? 
ಯುಪಿಎ ಸರ್ಕಾರ ಅವರನ್ನು ಸಚಿವರನ್ನಾಗಿ ಮಾಡಿದರೆ ಪ್ರಮಾಣವಚನ ಸ್ವೀಕರಿಸಿ ಬೆಂಗಳೂರಿಗೆ ಬಂದವರು ತಿರುಗಿ ಹೋಗಲಿಲ್ಲ.  ಕೇಂದ್ರ ಸಚಿವ ಮಂಡಳಿಯಲ್ಲಿ ರಾಜ್ಯಕ್ಕೆ ಸೇರಿರುವ ನಾಲ್ಕು ಮಂದಿ ಸಚಿವರಿದ್ದಾರೆ.  ಅವರಲ್ಲೊಬ್ಬರು ಮಂಡ್ಯದ ಮಣ್ಣಿನ ಮಗ.
ಉಳಿದವರು ಬಿಡಿ ಕನಿಷ್ಠ ಮಂಡ್ಯದ ಮಣ್ಣಿನ ಮಗನಾಗಿರುವ ಎಸ್.ಎಂ.ಕೃಷ್ಣ ಅವರಿಗೂ ರಾಜ್ಯದ ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕೆಂದು ಅನಿಸಲಿಲ್ಲವೇ? ನಮ್ಮ ರೈತರು ಎಷ್ಟೊಂದು ವಿಶಾಲಹೃದಯಿಗಳೆಂದರೆ ತಮ್ಮ ಕೈಬಿಟ್ಟವರನ್ನೇ ತಲೆಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡುತ್ತಾರೆ.
ಇನ್ನೊಂದೆಡೆ ಅನಗತ್ಯವಾಗಿ ನ್ಯಾಯಾಲಯ, ನ್ಯಾಯಮಂಡಳಿ ವಿರುದ್ಧ ಕೂಗಾಡಿ ದ್ವೇಷ ಕಟ್ಟಿಕೊಳ್ಳುತ್ತಾರೆ. ಕನ್ನಡಿಗರ ರೋಷವೇ ಹೀಗೆ, ಅದರಲ್ಲಿ ಎಲ್ಲವನ್ನೂ ಸುಟ್ಟುಹಾಕುವ ಬೆಂಕಿ ಸ್ವಲ್ಪ ಹೆಚ್ಚು, ಕತ್ತಲಲ್ಲಿಯೂ ದಾರಿ ತೋರುವ ಬೆಳಕು ಕಡಿಮೆ.  ಈ ವರ್ಷದ ಸಮಸ್ಯೆಯೇನೋ ಇನ್ನು ಕೆಲವುದಿನಗಳಲ್ಲಿ ಮುಗಿದುಹೋಗುತ್ತದೆ.

ಮುಂದಿನ ದಿನಗಳು ಇನ್ನಷ್ಟು ಗಂಡಾಂತರಕಾರಿಯಾಗಲಿವೆ. ಮುಂದೇನು? ಅರಿವಿನ ಬೆಳಕಲ್ಲಿ ನೋಡಿದರೆ ದಾರಿಗಳು ಹಲವು ಇವೆ. ಇದು ಕೇವಲ ಮೈಸೂರು-ಮಂಡ್ಯದ ರೈತರ ಸಮಸ್ಯೆ ಅಲ್ಲ. ಇದನ್ನು ತಿಳಿದುಕೊಳ್ಳಬೇಕಾದರೆ ಯಾರಾದರೂ ತೆಪ್ಪಗೆ ಕೂತು ಐದು ಸಂಪುಟಗಳಲ್ಲಿರುವ ಕಾವೇರಿ ನ್ಯಾಯಮಂಡಳಿಯ ಐತೀರ್ಪನ್ನು ಓದಬೇಕು. ಆಗಲಾದರೂ ಬುದ್ದಿ ಬರಬಹುದೇನೋ?
ರಾಜ್ಯದ ಪುನರ್‌ಪರಿಶೀಲನಾ ಅರ್ಜಿಯನ್ನೇನಾದರೂ ಸುಪ್ರೀಂಕೋರ್ಟ್ ತಿರಸ್ಕರಿಸಿ ಐತೀರ್ಪನ್ನು ಅಂತಿಮ ಎಂದು ಸಾರಿದರೆ ಮೊದಲು ನೀರಿಲ್ಲದೆ ಸಾಯುವವರು ಬೆಂಗಳೂರು ಜನ. ಈ ಮಹಾನಗರಕ್ಕಾಗಿ ನಾವು ಕೇಳಿರುವುದು 30 ಟಿಎಂಸಿಅಡಿ ಕಾವೇರಿ ನೀರು, ನ್ಯಾಯಮಂಡಳಿ ನಿಗದಿಪಡಿಸಿರುವುದು 1.75 ಟಿಎಂಸಿಅಡಿ.

ಕಷ್ಟ ಹಂಚಿಕೊಳ್ಳುವುದು ಸುಖ ಹಂಚಿಕೊಳ್ಳುವಷ್ಟು ಸುಲಭ ಅಲ್ಲ September 17, 2012

ಕಾವೇರಿ ನದಿನೀರು ಹಂಚಿಕೆಯ ವಿವಾದವನ್ನು ಕೊರಳಿಗೆ ಸುತ್ತಿಕೊಂಡು ಎರಡು ಶತಕಗಳಿಗಿಂತಲೂ ಹೆಚ್ಚು ಕಾಲ ಸುಸ್ತಾಗುವಷ್ಟು ಜಗಳವಾಡಿ, ಹಳ್ಳಿಯಿಂದ ದಿಲ್ಲಿ ವರೆಗೆ ಸುತ್ತಾಡಿ, ಇಷ್ಟ ಬಂದಷ್ಟು ಖರ್ಚು ಮಾಡಿದರೂ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಕರ್ನಾಟಕ ಮತ್ತು ತಮಿಳುನಾಡಿಗೆ ಸಾಧ್ಯವಾಗಿಲ್ಲ. 

ಈಗ ಎರಡೂ ರಾಜ್ಯಗಳು ಹೊರಟ ಜಾಗದಲ್ಲಿಯೇ ಮತ್ತೆ ಬಂದು ನಿಂತಿವೆ. 1799ರಲ್ಲಿ ಆಗಿನ ಮೈಸೂರು ರಾಜ್ಯದಲ್ಲಿ ಕೆರೆಗಳ ದುರಸ್ತಿಯನ್ನು ವಿರೋಧಿಸಿ ತಂಜಾವೂರು ಜಿಲ್ಲೆಯ ರೈತರು ಮೊದಲ ಬಾರಿ ನಡೆಸಿದ ಪ್ರತಿಭಟನೆಯ ದಿನದಿಂದ ಪ್ರಾರಂಭವಾಗಿರುವ ನೀರಿನ ಜಗಳ ಇನ್ನೂ ನಿಂತಿಲ್ಲ. 

ಇದೇ ಸೆಪ್ಟೆಂಬರ್ 19ರಂದು ನಡೆಯಲಿರುವ ಪ್ರಧಾನಿ ಅಧ್ಯಕ್ಷರಾಗಿರುವ ಮತ್ತು ಕಾವೇರಿ ಕಣಿವೆಯ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಸದಸ್ಯರಾಗಿರುವ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ಮತ್ತೊಂದು ಸುತ್ತಿನ ಕಾದಾಟಕ್ಕೆ ಎರಡೂ ರಾಜ್ಯಗಳು ತಾಲೀಮು ನಡೆಸತೊಡಗಿವೆ.

ಸುಪ್ರೀಂಕೋರ್ಟ್ ಆದೇಶದಂತೆಯೇ ರಚನೆಯಾದ ಕಾವೇರಿ ನ್ಯಾಯಮಂಡಳಿ ಅಂತಿಮ ಐತೀರ್ಪು ನೀಡಿದ ನಂತರವೂ ಮೂಲವಿವಾದ ಬಗೆಹರಿದಿಲ್ಲ ಎನ್ನುವುದಕ್ಕೆ ಈಗಿನ ಜಗಳವೇ ಸಾಕ್ಷಿ. `ಮಳೆಗಾಲದಲ್ಲಿ ನೂರಾರು ನೆಂಟರು, ಬರಗಾಲ ಅನಾಥ` ಎಂಬಂತಾಗಿದೆ ಕಾವೇರಿ ಕಣಿವೆಯ ರೈತರ ಸ್ಥಿತಿ. ಹದಿನಾರು ವರ್ಷಗಳಷ್ಟು ದೀರ್ಘಕಾಲ ಅಳೆದು, ತೂಗಿ, ಸೋಸಿ ನೀಡಿದ ಅಂತಿಮ ಐತೀರ್ಪು ಕೊನೆಗೂ ಮಳೆಬಂದ ದಿನಗಳಲ್ಲಿ ನೀರನ್ನು ಹಂಚಿಕೊಳ್ಳುವುದು ಹೇಗೆ ಎಂಬುದನ್ನಷ್ಟೇ ಹೇಳಿದ್ದು. 

ಇದಕ್ಕಿಂತಲೂ ಮುಖ್ಯವಾಗಿ ಮಳೆ ಇಲ್ಲದ ದಿನಗಳ ಸಂಕಷ್ಟವನ್ನು ಹಂಚಿಕೊಳ್ಳುವುದು ಹೇಗೆ ಎಂಬುದನ್ನು ನ್ಯಾಯಮಂಡಳಿ ಹೇಳಬೇಕಾಗಿತ್ತು. ಆದರೆ `ಮಳೆ ಕೊರತೆಯ ವರ್ಷದಲ್ಲಿ ಕಡಿಮೆಯಾಗುವ ನೀರಿನ ಉತ್ಪನ್ನದ ಅನುಪಾತಕ್ಕೆ ಅನುಗುಣವಾಗಿ ಬಿಡಬೇಕಾಗಿರುವ ನೀರಿನ ಪಾಲು ಕಡಿಮೆಯಾಗಲಿದೆ` ಎಂದಷ್ಟೇ ಹೇಳಿರುವ ನ್ಯಾಯಮಂಡಳಿ ಇದಕ್ಕೊಂದು ಸ್ಪಷ್ಟವಾದ ಸೂತ್ರ ಇಲ್ಲವೇ ಮಾರ್ಗಸೂಚಿಯನ್ನು ನೀಡದೆ ಜಾರಿಕೊಂಡಿದೆ.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ಕಾವೇರಿ ನೀರಿನ ಜಗಳವನ್ನು ಇನ್ನಷ್ಟು ಸರಳವಾಗಿ ವ್ಯಾಖ್ಯಾನಿಸುವುದಾದರೆ ಇದು ಮುಖ್ಯವಾಗಿ `ಮಳೆ ಇಲ್ಲದ ಕಷ್ಟದ ದಿನಗಳಲ್ಲಿನ ನೀರು ಹಂಚಿಕೆಯ ಸಮಸ್ಯೆ`. ಸಮೃದ್ಧವಾಗಿ ಮಳೆ ಬಿದ್ದಾಗ ನೀರು ಹರಿಸಲು ಕರ್ನಾಟಕ ತಕರಾರು ಮಾಡುವುದಿಲ್ಲ, ನೀರು ಬಿಡಲೇಬೇಕೆಂದು ತಮಿಳುನಾಡು ಕೂಡಾ ಹಟ ಹಿಡಿಯುವುದಿಲ್ಲ. 

1991ರಲ್ಲಿ ಮಧ್ಯಂತರ ಐತೀರ್ಪು ನೀಡಿದ ನಂತರದ ಇಪ್ಪತ್ತೊಂದು ವರ್ಷಗಳಲ್ಲಿ ನಾಲ್ಕು ವರ್ಷಗಳನ್ನು ( 2001-02: 189 ಟಿಎಂಸಿ, 2002-03: 109.45 ಟಿಎಂಸಿ, 2003-04: 75.87 ಟಿಎಂಸಿ ಮತ್ತು 2004-05: 185.55 ಟಿಎಂಸಿ) ಹೊರತುಪಡಿಸಿ ಉಳಿದೆಲ್ಲ ವರ್ಷಗಳಲ್ಲಿ ನ್ಯಾಯಮಂಡಳಿಯ ಐತೀರ್ಪಿನ ಪ್ರಕಾರ ಹರಿಸಬೇಕಾಗಿರುವ 192 ಟಿಎಂಸಿಗಿಂತಲೂ ಹೆಚ್ಚು ನೀರು ಕರ್ನಾಟಕದಿಂದ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಹರಿದುಹೋಗಿದೆ. 

ವಿವಾದ ಒಟ್ಟು ನೀರಿನ ಪಾಲಿಗೆ ಸಂಬಂಧಿಸಿದ್ದಲ್ಲ, ಅದು ಜೂನ್‌ನಿಂದ ಸೆಪ್ಟೆಂಬರ್ ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ಹರಿಸಬೇಕಾಗಿರುವ ನೀರಿನ ಪಾಲಿನದ್ದು. ಇದರಿಂದಾಗಿಯೇ ಮಳೆ ಇಲ್ಲದ ಸಂಕಷ್ಟದ ಕಾಲದಲ್ಲಿ ಎರಡು ರಾಜ್ಯಗಳ ನಡುವೆ ಸಂಘರ್ಷದ ಕಿಡಿಹಾರುತ್ತಿರುವುದು.

ಇದು ಗೊತ್ತಿದ್ದರೂ ಇದಕ್ಕೊಂದು ಸರ್ವಸಮ್ಮತ ಪರಿಹಾರವನ್ನು ಸೂಚಿಲು ಸಾಧ್ಯವಾಗದೆ ಇರುವುದು ಕಾವೇರಿ ನ್ಯಾಯಮಂಡಳಿಯ ದೊಡ್ಡ ವೈಫಲ್ಯ. `ಮಳೆ ಕೊರತೆಯ ದಿನಗಳಲ್ಲಿ ಬಳಸಲು ಸಾಧ್ಯವಾಗುವಂತೆ ಉತ್ತಮ ಮಳೆಯ ಸಾಮಾನ್ಯ ಜಲವರ್ಷದ ಕೊನೆಯಲ್ಲಿ ಜಲಾಶಯಗಳಲ್ಲಿ ಸಾಧ್ಯ ಇದ್ದಷ್ಟು ನೀರಿನ ಸಂಗ್ರಹ ಇಟ್ಟುಕೊಳ್ಳಬೇಕು. 

ಸತತ ಎರಡು ವರ್ಷ ಮಳೆ ಕೊರತೆ ಕಾಣಿಸಿಕೊಂಡಲ್ಲಿ ಕಾವೇರಿ ಜಲನಿರ್ವಹಣಾ ಮಂಡಳಿ ಇಲ್ಲ ಕಾವೇರಿ ನದಿ ಪ್ರಾಧಿಕಾರ ನೀರು ಬಿಡುಗಡೆಯ ಮಾಸಿಕ ಕಂತುಗಳ ಪ್ರಮಾಣವನ್ನು ಕಡಿಮೆಗೊಳಿಸಬಹುದು` ಎಂದಷ್ಟೇ ಅಂತಿಮ ಐತೀರ್ಪು ಹೇಳಿದೆ ( ಐದನೆ ಸಂಪುಟ, ಪುಟ 213). ಸ್ಪಷ್ಟ ಪರಿಹಾರದ ಮಾರ್ಗವನ್ನು ಅದು ತೋರಿಸಿಲ್ಲ.

ಜೂನ್-ಸೆಪ್ಟೆಂಬರ್ ವರೆಗಿನ ವಿವಾದಾತ್ಮಕ ನಾಲ್ಕು ತಿಂಗಳ ಅವಧಿಯಲ್ಲಿ ಕರ್ನಾಟಕ 137 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ಮಧ್ಯಂತರ ಐತೀರ್ಪು ಹೇಳಿತ್ತು. ಅದರಲ್ಲಿ ಮೂರು ಟಿಎಂಸಿಯನ್ನಷ್ಟೇ ಕಡಿಮೆ ಮಾಡಿರುವ ಅಂತಿಮ ಐತೀರ್ಪು ವಿವಾದದ ಮೂಲಕಾರಣವನ್ನು ಜೀವಂತವಾಗಿ ಇಟ್ಟಿದೆ. 

ಜೂನ್‌ನಿಂದ ಸೆಪ್ಟೆಂಬರ್ ವರೆಗೆ 100 ಟಿಎಂಸಿ ಅದರ ನಂತರ 92 ಟಿಎಂಸಿ ನೀರು ಹರಿಸಿ ಎಂದು ನ್ಯಾಯಮಂಡಳಿ ಹೇಳಿದ್ದರೂ ವಿವಾದದ ಇತ್ಯರ್ಥಕ್ಕೆ ನೆರವಾಗುತ್ತಿತ್ತೊ ಏನೋ? ತಮಿಳುನಾಡು ಖುದ್ದಾಗಿ ಒಪ್ಪಿಕೊಂಡ 20 ಟಿಎಂಸಿ ಅಂತರ್ಜಲದ ಬಳಕೆಯನ್ನು ಗಣನೆಗೆ ತೆಗೆದುಕೊಂಡಿದ್ದರೂ ಕರ್ನಾಟಕದ ಮೇಲಿನ ಅಷ್ಟು ಭಾರ ಕಡಿಮೆಯಾಗಲು ಸಾಧ್ಯ ಇತ್ತು.

ನ್ಯಾಯಮಂಡಳಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡ ಕಾರಣದಿಂದಾಗಿ ಮಧ್ಯಂತರ ಐತೀರ್ಪಿನಲ್ಲಿ ಹೇಳಿರುವಂತೆ ಮಳೆ ಇಲ್ಲದ ಕಾಲದಲ್ಲಿ ಸಂಕಷ್ಟ ಹಂಚಿಕೆ ಸೂತ್ರವನ್ನು ರೂಪಿಸುವ ಜವಾಬ್ದಾರಿ 1998ರಲ್ಲಿ ರಚನೆಗೊಂಡ ಪ್ರಧಾನಿ ಅಧ್ಯಕ್ಷತೆಯ ಕಾವೇರಿ ನದಿ ಪ್ರಾಧಿಕಾರದ್ದಾಗಿದೆ. ನ್ಯಾಯಮಂಡಳಿ ತನಗೊಪ್ಪಿಸಿರುವ ಜವಾಬ್ದಾರಿಯ ನಿರ್ವಹಣೆಗಾಗಿ ಕಾವೇರಿ ಉಸ್ತುವಾರಿ ಸಮಿತಿಯನ್ನು ಪ್ರಾಧಿಕಾರ ರಚಿಸಿದೆ. 

ಉಸ್ತುವಾರಿ ಸಮಿತಿ ಇದಕ್ಕಾಗಿ ತಾಂತ್ರಿಕ ಸಮಿತಿಯನ್ನು ರಚಿಸಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆಯ ವಿವಾದವನ್ನು ಇತ್ಯರ್ಥಗೊಳಿಸಬೇಕಾಗಿರುವ ಸುಪ್ರೀಂಕೋರ್ಟ್‌ನ ಆದೇಶದ ಮೂಲಕ ರಚನೆಗೊಂಡ ನ್ಯಾಯಮಂಡಳಿಯ ಹೊಣೆ ಅಂತಿಮವಾಗಿ ಒಂದಷ್ಟು ಅಧಿಕಾರಿಗಳನ್ನೊಳಗೊಂಡ ತಾಂತ್ರಿಕ ಸಮಿತಿಯ ಹೆಗಲ ಮೇಲೆ ಬಂದು ಕೂತಿದೆ. ಕಳೆದ ಹನ್ನೆರಡು ವರ್ಷಗಳಿಂದ ಈ ತಾಂತ್ರಿಕ ಸಮಿತಿ `ಸಂಕಷ್ಟ ಹಂಚಿಕೆಯ ಸೂತ್ರ`ಗಳನ್ನು ಹೆಣೆಯುತ್ತಲೇ ಇದ್ದರೂ ಅದಕ್ಕೆ ಕಾವೇರಿ ಕಣಿವೆಯ ನಾಲ್ಕು ರಾಜ್ಯಗಳನ್ನು ಒಪ್ಪಿಸಲು ಸಾಧ್ಯವಾಗಿಲ್ಲ. 

ಈ ಬಾರಿ ಕೂಡಾ ಕರ್ನಾಟಕದಲ್ಲಿ ನಡೆದ ಸರ್ವಪಕ್ಷಗಳ ಸಭೆ `ಸಂಕಷ್ಟ ಹಂಚಿಕೆ ಸೂತ್ರ`ವನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯದೊಂದಿಗೆ ಬರ್ಖಾಸ್ತುಗೊಂಡಿದೆ. ಇದರಿಂದಾಗಿ ವಿವಾದ ಪ್ರಾಧಿಕಾರದ ಹೊಸ್ತಿಲಲ್ಲಿ ಬಂದು ನಿಂತಿದೆ.
ತಮಿಳುನಾಡಿನ ರಾಜಕೀಯ ಒತ್ತಡಕ್ಕೆ ಈಡಾಗುತ್ತ ಬಂದಿರುವ ಕಾವೇರಿ ನದಿ ಪ್ರಾಧಿಕಾರ ಇಲ್ಲಿಯ ವರೆಗೆ ರಚಿಸಿದ ಸಂಕಷ್ಟ ಹಂಚಿಕೆಯ ಕರಡು ಸೂತ್ರಗಳೆಲ್ಲವೂ ತಮಿಳುನಾಡಿನ ರೈತರ ಹಿತವನ್ನಷ್ಟೇ ಕಾಯಲು ರೂಪುಗೊಂಡಿರುವಂತಹದ್ದು ಎಂದು ಹೇಳಲು ಆಧಾರಗಳಿವೆ. 

ಕರ್ನಾಟಕ ನೀಡಿರುವ ಸಲಹೆಗಳನ್ನು ಪ್ರಾಧಿಕಾರದಿಂದ ನೇಮಕಗೊಂಡ ತಾಂತ್ರಿಕ ಸಮಿತಿ ಪರಿಗಣಿಸಿಯೇ ಇಲ್ಲ. ಅವುಗಳು ಹೀಗಿವೆ:

-ಕರ್ನಾಟಕದಲ್ಲಿ ಬಹುಪಾಲು ಮಳೆಯನ್ನು ತಂದುಕೊಡುವ ನೈರುತ್ಯ ಮಾರುತದ ಮಳೆಯನ್ನಷ್ಟೇ ಪರಿಗಣಿಸದೆ ತಮಿಳುನಾಡಿನಲ್ಲಿ ಅಕ್ಟೋಬರ್ ಮಧ್ಯಭಾಗದಿಂದ ಜನವರಿ ವರೆಗೆ ಸುರಿಯವ ಈಶಾನ್ಯ ಮಾರುತವನ್ನೂ ಪರಿಗಣಿಸಬೇಕು. ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶದಲ್ಲಿ ರೈತರು ಕುರುವೈ ಬೆಳೆಗೆ ನೈರುತ್ಯ ಮಾರುತವನ್ನು ಅವಲಂಬಿಸಿದ್ದರೆ ನಂತರ ಬೆಳೆಯುವ ಸಾಂಬಾ ಬೆಳೆಗೆ ಬೇಕಾಗಿರುವ ಮಳೆಯ ಮೂರನೆ ಎರಡರಷ್ಟರನ್ನು ಈಶಾನ್ಯ ಮಾರುತದಿಂದ ಪಡೆಯುತ್ತಾರೆ. 

ಇಲ್ಲಿಯ ವರೆಗಿನ ಸಂಕಷ್ಟ ಹಂಚಿಕೆ ಸೂತ್ರಗಳು ಈಶಾನ್ಯ ಮಾರುತವನ್ನು ಪರಿಗಣಿಸಿಲ್ಲ. ( ಪ್ರತಿವರ್ಷ ಕಾವೇರಿ ಕಣಿವೆಯ ಎಲ್ಲ ಜಲಾಶಯಗಳ ನೀರು ಸಂಗ್ರಹ ಮತ್ತು ಜೂನ್ ಒಂದರಿಂದ ಅಕ್ಟೋಬರ್ 15ರ ವರೆಗಿನ ನೈರುತ್ಯ ಮಾರುತ ಮತ್ತು ಅಕ್ಟೋಬರ್ 16ರಿಂದ ಜನವರಿ 31ರ ವರೆಗಿನ ಈಶಾನ್ಯ ಮಾರುತದ ಮಳೆಯನ್ನು ದಾಖಲಿಸುವ ಹೊಣೆಯನ್ನು ನ್ಯಾಯಮಂಡಳಿ ಅಂತಿಮ ಐತೀರ್ಪಿನಲ್ಲಿ ಕಾವೇರಿ ನಿಯಂತ್ರಣಾ ಪ್ರಾಧಿಕಾರ ಮತ್ತು ನಿರ್ವಹಣಾ ಸಮಿತಿಗೆ ಒಪ್ಪಿಸಿರುವುದು ಕರ್ನಾಟಕದ ಈ ಸಲಹೆಗೆ ಬಲ ತಂದುಕೊಟ್ಟಿದೆ.)

-ನೈರುತ್ಯ ಮಾರುತ ಕೊನೆಗೊಳ್ಳುವ ಸೆಪ್ಟೆಂಬರ್ ತಿಂಗಳ ಅಂತ್ಯದ ವರೆಗಿನ ನೀರಿನ ಕೊರತೆಯನ್ನಷ್ಟೇ ಲೆಕ್ಕ ಹಾಕಿ ಅಲ್ಲಿಂದ ನಂತರದ ದಿನಗಳ ಸಂಕಷ್ಟವನ್ನು ಹಂಚಿಕೊಳ್ಳಬೇಕೆಂಬ ಸೂತ್ರ ಸರಿ ಅಲ್ಲ. ನ್ಯಾಯಮಂಡಳಿ ಐತೀರ್ಪು ನೀಡುವಾಗ ಜೂನ್‌ನಿಂದ ಡಿಸೆಂಬರ್ ವರೆಗೆ ಬಿಟ್ಟ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡಿದ್ದು ಸಂಕಷ್ಟ ಸ್ಥಿತಿಯ ಅಂದಾಜಿಗೆ ನೀರಿನ ಕೊರತೆಯನ್ನು ಲೆಕ್ಕ ಹಾಕುವಾಗಲೂ ಆ ಅವಧಿಯನ್ನೇ (ಜೂನ್-ಡಿಸೆಂಬರ್) ಪರಿಗಣಿಸಬೇಕು.

-ಸಂಕಷ್ಟ ಹಂಚಿಕೆ ಸೂತ್ರ ರಚಿಸುವಾಗ ಕರ್ನಾಟಕದ ನಾಲ್ಕು ಜಲಾಶಯಗಳ ಜಲಾನಯನ ಪ್ರದೇಶವನ್ನಷ್ಟೇ ಪರಿಗಣಿಸದೆ ತಮಿಳುನಾಡಿನ ಜಲಾಶಯಗಳ ನೀರು ಸಂಗ್ರಹವನ್ನೂ ಪರಿಗಣಿಸಬೇಕು. ನೀರಾವರಿ ವರ್ಷದ ಪ್ರಾರಂಭದಲ್ಲಿ ಮೆಟ್ಟೂರು ಜಲಾಶಯದಲ್ಲಿ ಸಂಗ್ರಹ ಇರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಳ್ಳಬೇಕು. 

ನರ್ಮದಾ ನದಿ ನೀರು ಹಂಚಿಕೆ ವಿವಾದವನ್ನು ಇತ್ಯರ್ಥಗೊಳಿಸಿದ್ದ ನ್ಯಾಯಮಂಡಳಿ `..ನಿರ್ದಿಷ್ಠ ನೀರಾವರಿ ವರ್ಷದಲ್ಲಿ ಬಳಕೆಗೆ ಲಭ್ಯ ಇರುವ ನೀರಿನ ಪ್ರಮಾಣದಲ್ಲಿ ಹಿಂದಿನ ವರ್ಷದ ಮಿಗತೆ ನೀರಿನ ಪ್ರಮಾಣ ಕೂಡಾ ಸೇರಿದೆ..` ಎಂದು ತನ್ನ ಐತೀರ್ಪಿನಲ್ಲಿ ಹೇಳಿದೆ.

- ಕೇಂದ್ರ ಜಲ ಆಯೋಗದ ನಿಯಂತ್ರಣದಲ್ಲಿರುವ ಬಿಳಿಗುಂಡ್ಲು ಜಲಮಾಪನ ಕೇಂದ್ರ ಮತ್ತು ಮೆಟ್ಟೂರು ಜಲಾಶಯದ ನಡುವೆ 5535 ಚದರ ಕಿ.ಮೀ. ವಿಸ್ತೀರ್ಣದ ಜಲಾನಯನ ಪ್ರದೇಶ ಇದೆ. ಸಂಕಷ್ಟದ ಸ್ಥಿತಿಯನ್ನು ಲೆಕ್ಕಹಾಕುವಾಗ ಈ ಜಲಾನಯನ ಪ್ರದೇಶದಲ್ಲಿ ಪ್ರತಿ ಜಲವರ್ಷ ಉತ್ಪತ್ತಿಯಾಗುವ ಸುಮಾರು 25 ಟಿಎಂಸಿ ನೀರನ್ನು ಗಣನೆಗೆ ತೆಗೆದುಕೊಳ್ಳಬೇಕು.

-ತಮಿಳುನಾಡಿಗೆ ಬಿಟ್ಟ ನೀರಿನ ಲೆಕ್ಕವನ್ನು ಬಿಳಿಗುಂಡ್ಲುವಿನಲ್ಲಿರುವ ಕೇಂದ್ರ ಜಲ ಆಯೋಗದ ಜಲಮಾಪನ ಕೇಂದ್ರದ ಆಧಾರದಲ್ಲಿಯೇ ನಡೆಸಬೇಕು. ಮೆಟ್ಟೂರಿನಲ್ಲಿ ಅಧಿಕೃತ ಜಲಮಾಪನ ವ್ಯವಸ್ಥೆಯೇ ಇಲ್ಲದೆ ಇರುವುದರಿಂದ ಅಲ್ಲಿನ ನೀರಿನ ದಾಖಲೆಯನ್ನು ಪರಿಗಣಿಸುವುದು ಸರಿ ಅಲ್ಲ. (ಬಿಳಿಗುಂಡ್ಲು ಜಲಮಾಪನದ ನೀರಿನ ಲೆಕ್ಕವೇ ಅಧಿಕೃತ ಎಂದು ನ್ಯಾಯಮಂಡಳಿಯ ಅಂತಿಮ ಐತೀರ್ಪಿನಲ್ಲಿ ಹೇಳಿರುವುದು ಈ ಸಲಹೆಗೆ ಪೂರಕವಾಗಿದೆ.)

-ಎರಡು ಗರಿಷ್ಠ ಮತ್ತು ಎರಡು ಕನಿಷ್ಠ ಮಳೆಯ ವರ್ಷಗಳ ಸರಾಸರಿಯನ್ನು ಪರಿಗಣಿಸದೆ, 1974ರಿಂದ ಈ ವರೆಗಿನ ಮಳೆ ಸರಾಸರಿಯನ್ನು ಗಣನೆಗೆ ತೆಗೆದುಕೊಳ್ಳಬೇಕು.
ಕಾವೇರಿ ನದಿ ಪ್ರಾಧಿಕಾರದ ಕಾರ್ಯನಿರ್ವಹಣೆಯನ್ನು ಕಳೆದ ಹನ್ನೆರಡು ವರ್ಷಗಳಿಂದ ಗಮನಿಸುತ್ತಾ ಬಂದ ಯಾರು ಕೂಡಾ ಕರ್ನಾಟಕದ ಈ ಸಲಹೆಗಳಿಗೆ ಮಾನ್ಯತೆ ಸಿಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯ ಇಲ್ಲ. 

ಸೂತ್ರ ರಚನೆ ತಾಂತ್ರಿಕ ಸ್ವರೂಪದ್ದಾಗಿದ್ದರೂ ಅಂತಿಮವಾಗಿ ಅದೊಂದು ರಾಜಕೀಯ ತೀರ್ಮಾನವಾಗಿರುವುದು ಪರಿಹಾರ ಕಗ್ಗಂಟಾಗಲು ಕಾರಣ. ಮಳೆಯ ಪ್ರಮಾಣ, ಜಲಾಶಯದಲ್ಲಿ ನೀರಿನ ಸಂಗ್ರಹ ಮತ್ತು ರೈತರ ನೀರಿನ ಅವಶ್ಯಕತೆಯನ್ನು ಗಮನದಲ್ಲಿಟ್ಟುಕೊಂಡು ಸೂತ್ರ ರಚನೆಯಾಗಬೇಕಾಗಿದ್ದರೂ ಅಲ್ಲಿ ಮುಖ್ಯವಾಗಿ ಗಣನೆಗೆ ಬರುವುದು ರಾಜಕೀಯ ಲೆಕ್ಕಾಚಾರ.

ಕೇಂದ್ರ ಸರ್ಕಾರವನ್ನು ಸದಾ ತನ್ನ ಋಣದ ಉರುಳಲ್ಲಿ ಇಟ್ಟುಕೊಂಡಿರುವ ತಮಿಳುನಾಡು, ರಾಜಕೀಯ ಬಲಾಬಲದ ಪರೀಕ್ಷೆ ಎದುರಾದಾಗೆಲ್ಲ ಸುಲಭದಲ್ಲಿ ಕರ್ನಾಟಕವನ್ನು ಹಿಂದಕ್ಕೆ ತಳ್ಳುತ್ತಾ ಬಂದಿದೆ. ಈ ಬಾರಿಯೂ ಹಾಗಾಗುವುದಿಲ್ಲ ಎನ್ನುವುದಕ್ಕೆ ಪ್ರಬಲವಾದ ಯಾವ ಕಾರಣಗಳೂ ಹೊಳೆಯುತ್ತಿಲ್ಲ. ರಾಜಕೀಯವಾಗಿ ಕರ್ನಾಟಕ ಇಂದಿನಷ್ಟು ದುರ್ಬಲ ಹಿಂದೆಂದೂ ಆಗಿರಲಿಲ್ಲ.