Showing posts with label ಲಿಂಗಾಯತರು. Show all posts
Showing posts with label ಲಿಂಗಾಯತರು. Show all posts

Wednesday, May 1, 2013

ಕುಸಿದು ಬೀಳುತ್ತಿರುವ ಮುಂಬೈ ಕರ್ನಾಟಕದ ಬಿಜೆಪಿ ಕೋಟೆ

ಬಳ್ಳಾರಿ:  ಮುಂಬೈ ಕರ್ನಾಟಕ ಮತ್ತು ಬಳ್ಳಾರಿ, 2008ರ ವಿಧಾನಸಭಾ ಚುನಾವಣೆಯ `ಆಟ ಬದಲಿಸಿದ' ಪ್ರದೇಶ. ಕಾಂಗ್ರೆಸ್ ದೂಳಿಪಟವಾಗಿದ್ದು ಮತ್ತು ಬಿಜೆಪಿಗೆ ಅಧಿಕಾರಕ್ಕೆ ಬರುವ ಸಂಖ್ಯಾಬಲವನ್ನು ತಂದುಕೊಟ್ಟ ಪ್ರದೇಶ ಇದು. ಬಿಜಾಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳನ್ನೊಳಗೊಂಡ ಈ ಪ್ರದೇಶಕ್ಕೆ ಬಳ್ಳಾರಿಯನ್ನೂ ಸೇರಿಸಿದರೆ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 59 ಆಗುತ್ತದೆ.
ಇದರಲ್ಲಿ 44 ಕ್ಷೇತ್ರಗಳು ಬಿಜೆಪಿ ಪಾಲಾಗಿದ್ದರೆ ಕಾಂಗ್ರೆಸ್ ಉಳಿಸಿಕೊಳ್ಳಲು ಸಾಧ್ಯವಾಗಿದ್ದು ಕೇವಲ ಹದಿಮೂರು ಮಾತ್ರ. ಜೆಡಿ(ಎಸ್) ಪಕ್ಷದಿಂದ ಗೆದ್ದಿದ್ದ ಇಬ್ಬರು ಶಾಸಕರು ಕೂಡಾ ನಂತರ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಈ ಭಾಗದಲ್ಲಿ ಕಾಂಗ್ರೆಸ್‌ನ ಮಾನ ಉಳಿಸಿದ್ದು, ಏಳು ಶಾಸಕರನ್ನು ನೀಡಿದ ಬೆಳಗಾವಿ ಜಿಲ್ಲೆ ಮಾತ್ರ. ಈ ಬಾರಿ ವಿಧಾನಸಭಾ ಚುನಾವಣೆಯ `ಆಟ ಬದಲಿಸಲಿರುವ' ಪ್ರದೇಶ ಕೂಡಾ ಇದೇ ಎನ್ನುವುದರಲ್ಲಿ ಅನುಮಾನ ಇಲ್ಲ.
ರಾಜ್ಯದ ಕರಾವಳಿ ಇಲ್ಲವೆ ಮಧ್ಯ ಕರ್ನಾಟಕದ ಶಿವಮೊಗ್ಗ ಜಿಲ್ಲೆಯಂತೆ ಮುಂಬೈಕರ್ನಾಟಕ ಬಿಜೆಪಿಯ ಸಾಂಪ್ರದಾಯಿಕ ನೆಲೆ ಅಲ್ಲ. ಹೀಗಿದ್ದರೂ ಕಳೆದ ಚುನಾವಣೆಯಲ್ಲಿ ಇಲ್ಲಿ ಬಿಜೆಪಿಯ ಚೈತ್ರಯಾತ್ರೆಗೆ ಮುಖ್ಯವಾಗಿ ಕಾರಣಗಳು ಮೂರು. ಮೊದಲನೆಯದಾಗಿ ಈ ಭಾಗದಲ್ಲಿ ಸಾಂಪ್ರದಾಯಿಕವಾಗಿ ಇರುವ ಕಾಂಗ್ರೆಸ್ ವಿರೋಧಿ ಮತಗಳು, ಎರಡನೆಯದಾಗಿ ವಚನಭಂಗದಿಂದಾಗಿ ಸಾಮೂಹಿಕವಾಗಿ ಸಿಡಿದೆದ್ದ ಲಿಂಗಾಯತ ಸಮುದಾಯ, ಮೂರನೆಯದಾಗಿ ಬಳ್ಳಾರಿಯ ರೆಡ್ಡಿ ಸೋದರರ ದುಡ್ಡು ಮತ್ತು ಶ್ರಿರಾಮುಲು ಅವರಿಗೆ ವ್ಯಕ್ತವಾದ ಜಾತಿ ಮತದಾರರ ಬೆಂಬಲ.
ಪ್ರಾರಂಭದಲ್ಲಿ ಎಸ್.ನಿಜಲಿಂಗಪ್ಪ ಅವರ ನೇತೃತ್ವದ ಸಂಸ್ಥಾ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದ ಈ ಭಾಗದ ಲಿಂಗಾಯತರು ನಿಧಾನವಾಗಿ ಜನತಾ ಪರಿವಾರದ ಭಾಗವಾಗಿ ಹೋಗಿದ್ದರು. ಎಂಬತ್ತರ ದಶಕದಲ್ಲಿ ಉಚ್ಛ್ರಾಯಸ್ಥಿತಿಯಲ್ಲಿದ್ದ ಜನತಾ ಪರಿವಾರದಲ್ಲಿ ಎಸ್.ಆರ್.ಬೊಮ್ಮಾಯಿ ಅವರಂತಹ ಹಿರಿಯರ ಜತೆ ಧಾರವಾಡ ಜಿಲ್ಲೆಯ ಚಂದ್ರಕಾಂತ ಬೆಲ್ಲದ, ಬಿ.ಆರ್.ಯಾವಗಲ್, ಬಿ.ಜಿ.ಬಣಕಾರ್, ಬಿ.ಎಚ್.ಬನ್ನಿಕೋಡ್, ಪಿ.ಸಿ.ಸಿದ್ದನಗೌಡರ್, ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲೆಯ ಶಿವಾನಂದ ಕೌಜಲಗಿ, ಉಮೇಶ್ ಕತ್ತಿ, ಎ.ಬಿ.ಪಾಟೀಲ್, ಡಿ.ಬಿ.ಇನಾಂದಾರ್, ಲೀಲಾದೇವಿ ಪ್ರಸಾದ್. ಬಿಜಾಪುರ ಜಿಲ್ಲೆಯ ರಮೇಶ್ ಜಿಗಜಿಣಗಿ, ಗೋವಿಂದಪ್ಪ ಕಾರಜೋಳ, ಎಚ್.ವೈ.ಮೇಟಿ, ಜಗಜೀವನರಾವ್ ದೇಶಮುಖ್ ಮೊದಲಾದ ನಾಯಕರಿದ್ದರು.
ಇವರಲ್ಲಿ ಬಹಳಷ್ಟು ಮಂದಿ ಶಾಸಕರಾಗಿ ಚುನಾಯಿತರಾಗಿ ನಂತರ ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದವರು. ಜನತಾ ಪರಿವಾರ ಅಳಿಯುತ್ತಾ ಬಂದಂತೆ ಆ ಜಾಗವನ್ನು ಆಕ್ರಮಿಸಿಕೊಂಡದ್ದು ಬಿಜೆಪಿ. ನಿಧಾನವಾಗಿ ಮುಂಬೈ ಕರ್ನಾಟಕ ಭಾಗದ ಕಾಂಗ್ರೆಸ್ ವಿರೋಧಿ ಮತಗಳನ್ನು ನುಂಗುತ್ತಾ ಬಿಜೆಪಿ ಬೆಳೆಯುತ್ತಾ ಹೋಗಿದ್ದು ಈಗ ಇತಿಹಾಸ. ಅದರ ಅತ್ಯುನ್ನತ ಸ್ಥಿತಿಯನ್ನು ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಣಬಹುದು.
ಇಡೀ ಕರ್ನಾಟಕದಲ್ಲಿ ಲಿಂಗಾಯತ ಬಾಹುಳ್ಯ ಇರುವ ಪ್ರದೇಶ ಮುಂಬೈ ಕರ್ನಾಟಕ. ಲಿಂಗಾಯತರ ಜನಸಂಖ್ಯೆ ರಾಜ್ಯದಲ್ಲಿ ಶೇಕಡಾ ಹದಿನೇಳರಷ್ಟಿದ್ದರೂ ಮುಂಬೈ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಇದು 20ರಿಂದ 30ರಷ್ಟಿದೆ. ಇದರಿಂದಾಗಿಯೇ ಇಲ್ಲಿನ ಹೆಚ್ಚಿನ ಕ್ಷೇತ್ರಗಳ ಮೇಲೆ ಅಪ್ಪಳಿಸಿದ ವಚನಭಂಗದ ವಿರೋಧಿ ಅಲೆಯ ಮೇಲೇರಿ ಬಿಜೆಪಿ ಅಭ್ಯರ್ಥಿಗಳು ಸುಲಭದಲ್ಲಿ ಗೆಲುವಿನ ದಡ ಸೇರಿದ್ದರು. ರಾಜ್ಯದಾದ್ಯಂತ ಬಳ್ಳಾರಿಯ ರೆಡ್ಡಿ ಸೋದರರ ದುಡ್ಡು ಹರಿದಾಡಿದರೂ ಹೈದರಾಬಾದ್ ಮತ್ತು ಮುಂಬೈ ಕರ್ನಾಟಕದಲ್ಲಿ ಹಣದ ಹೊಳೆ  ದಡಮೀರಿ ಹರಿದಿತ್ತು.
ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶ್ರಿರಾಮುಲು ಅವರು ಸಂಘಟಿಸಿದ್ದ ಜಾತಿಮೂಲದ ಬೆಂಬಲ ಕೂಡಾ ಇಲ್ಲಿ ಬಿಜೆಪಿ ಗೆಲುವಿಗೆ  ನೆರವಾಯಿತು.  ಇದರಿಂದಾಗಿಯೇ ಬಳ್ಳಾರಿಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟರಲ್ಲಿ ಬಿಜೆಪಿ ಗೆದ್ದಿತ್ತು. ಆ ಎಂಟರಲ್ಲಿ ಐವರು ಶಾಸಕರು ರಾಮುಲು ಜಾತಿಯಾದ ನಾಯಕ ಸಮಾಜದವರು ಎಂಬುದು ಗಮನಾರ್ಹ. ಇದರ ಜತೆಯಲ್ಲಿ ಗದಗ ಕ್ಷೇತ್ರದ ಉಸ್ತುವಾರಿ ಸಚಿವರಾಗಿದ್ದ ಶ್ರಿರಾಮುಲು ಆ ಜಿಲ್ಲೆಯ ಎಲ್ಲ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಬಿಟ್ಟಿದ್ದರು.
ಬಿಜೆಪಿಗೆ ನಿರಾಯಾಸವಾಗಿ ಗೆಲುವು ತಂದುಕೊಟ್ಟ ಮುಂಬೈ ಕರ್ನಾಟಕ ಮತ್ತು ಬಳ್ಳಾರಿಯ ಈಗಿನ ಚಿತ್ರ ಬದಲಾಗಿರುವುದು ಮಾತ್ರವಲ್ಲ ಹೆಚ್ಚುಕಡಿಮೆ ತಲೆಕೆಳಗಾಗಿ ಬಿಟ್ಟಿದೆ. ರಾಜ್ಯದಲ್ಲಿ ಬಿಜೆಪಿಗೆ ಮಾರಣಾಂತಿಕ ಹೊಡೆತ ನೀಡಲಿರುವುದು ಈ ಪ್ರದೇಶ ಎನ್ನುವುದರಲ್ಲಿ ಅನುಮಾನ ಬೇಡ. ಏಳು ಜಿಲ್ಲೆಗಳಲ್ಲಿದ್ದ 46 ಬಿಜೆಪಿ ಶಾಸಕರ ಪೈಕಿ ಹಾವೇರಿಯಿಂದ ನಾಲ್ಕು (ಸಿ.ಎಂ.ಉದಾಸಿ, ನೆಹರೂ ಓಲೇಕಾರ್,ಜಿ.ಶಿವಣ್ಣ ಮತ್ತು ಸುರೇಶ್‌ಗೌಡ) ಮತ್ತು ಬಿಜಾಪುರ ಹಾಗೂ ಧಾರವಾಡದಿಂದ ತಲಾ ಒಬ್ಬ ಶಾಸಕರು ( ವಿಠ್ಠಲ ಕಟಕದೊಂಡ ಮತ್ತು ಚಿಕ್ಕನಗೌಡರ್)  ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಸೇರಿದ್ದಾರೆ. ಇವರಲ್ಲಿ ಸುರೇಶ್‌ಗೌಡ ಪಾಟೀಲ್ ಅವರನ್ನು ಹೊರತುಪಡಿಸಿ ಉಳಿದವರೆಲ್ಲರೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.  ಬಿಜೆಪಿ ಶಾಸಕರ ಒಟ್ಟು ಸಂಖ್ಯೆಗೆ ಹೋಲಿಸಿದರೆ ಕೆಜೆಪಿಗೆ ಪಕ್ಷಾಂತರಗೊಂಡಿರುವ ಶಾಸಕರ ಸಂಖ್ಯೆ ಕಡಿಮೆ ಎಂದು ಅನಿಸಿದರೂ ಪರಿಣಾಮ ಅಷ್ಟಕ್ಕೆ ಸೀಮಿತವಾಗಿರಲಾರದು.
ಬಿಜೆಪಿಯ ಕುಸಿತವನ್ನು ತಡೆದು ನಿಲ್ಲಿಸುವಂತಹ ಬಲಿಷ್ಠ ನಾಯಕರು ಇಲ್ಲದಿರುವುದು ಕೂಡಾ ಆ ಪಕ್ಷದ ಹಿನ್ನಡೆಗೆ ಕಾರಣವಾಗಿದೆ. ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿದ್ದರೂ ಮುಂಬೈ ಇಲ್ಲವೆ ಹೈದರಾಬಾದ್ ಕರ್ನಾಟಕದ ಲಿಂಗಾಯತರು ಅವರನ್ನು ಹೆಚ್ಚು ಗಂಭೀರವಾಗಿ ಸ್ವೀಕರಿಸಿದಂತೆ ಕಾಣುತ್ತಿಲ್ಲ.
ಇನ್ನೊಂದೆಡೆ ಕೆಜೆಪಿಯ ದಾಳಿಯನ್ನು ಬಿಜೆಪಿಯಲ್ಲಿ ಅಳಿದುಳಿದ ಜನತಾ ಪರಿವಾರದ ನಾಯಕರಾದ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ರಮೇಶ್ ಜಿಗಜಿಣಗಿ, ಗೋವಿಂದ ಕಾರಜೋಳ ಮೊದಲಾದವರು ಎದುರಿಸುವ ಪ್ರಯತ್ನ ಮಾಡುತ್ತಿದ್ದರೂ ಅದು ಪರಿಣಾಮಕಾರಿಯಾಗಿಲ್ಲ. ಅವರ ಪ್ರಭಾವ ಸ್ವಂತ ಕ್ಷೇತ್ರಗಳಿಗಷ್ಟೇ ಸೀಮಿತವಾಗಿದೆ. ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿಯಲ್ಲಿದ್ದಾಗ ಯಡಿಯೂರಪ್ಪನವರನ್ನು ಬೆಂಬಲಿಸುತ್ತಾ ಬಂದ ಲಿಂಗಾಯತರ ಜತೆ, ಬಿಜೆಪಿಯಲ್ಲಿದ್ದಾರೆ ಎನ್ನುವ ಕಾರಣಕ್ಕಾಗಿ ಅವರನ್ನು ವಿರೋಧಿಸುತ್ತಿದ್ದ ಲಿಂಗಾಯತರು ಕೂಡಾ ಈ ಬಾರಿ ಕೆಜೆಪಿ ಬೆಂಬಲಿಸುತ್ತಿರುವುದನ್ನು ಕಾಣಬಹುದು. ಇವರಲ್ಲಿ ಬಹಳಷ್ಟು ಲಿಂಗಾಯತ ಬುದ್ದಿಜೀವಿಗಳೆನ್ನುವುದು ಆಶ್ಚರ್ಯಕರವಾದರೂ ನಿಜ.
ಬಿ.ಎಸ್.ಯಡಿಯೂರಪ್ಪನವರ ವಿರುದ್ಧದ  ಮುಖ್ಯ ಆರೋಪವಾದ ಭ್ರಷ್ಟಾಚಾರ ಈ ಚುನಾವಣೆಯಲ್ಲಿ  ಮುಖ್ಯವಿಷಯವಾಗಿ ಚರ್ಚೆಗೊಳಗಾಗದೆ ಇರುವುದು ಅವರನ್ನು ಬೆಂಬಲಿಸುತ್ತಿರುವವರ ಮುಜುಗರವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿದೆ.
ಆದರೆ ಹೈದರಾಬಾದ್ ಕರ್ನಾಟಕದಂತೆ ಇಲ್ಲಿಯೂ ಕೂಡಾ ಕೆಜೆಪಿಗೆ ವ್ಯಕ್ತವಾಗುತ್ತಿರುವ ಬೆಂಬಲ ಸ್ಥಾನಗಳಾಗಿ ಪರಿವರ್ತನೆಯಾಗುವ ಸಾಧ್ಯತೆಗಳು ಕಡಿಮೆ.  ಬಿ.ಎಸ್.ಯಡಿಯೂರಪ್ಪನವರು ಸ್ವಂತ ಪಕ್ಷ ಕಟ್ಟಿದಾಗ ಆಧಾರಸ್ತಂಭಗಳಾಗುತ್ತಾರೆಂದು ನಿರೀಕ್ಷಿಸಿದ್ದ ಸಂಪನ್ಮೂಲಭರಿತ ನಾಯಕರೆಲ್ಲರೂ ಜತೆಯಲ್ಲಿ ಉಳಿದುಕೊಂಡಿದ್ದರೆ ಆಟ ಬದಲಾಗುತ್ತಿತ್ತು.
ಕೊನೆಗಳಿಗೆಯ ವರೆಗೆ ಜತೆಯಲ್ಲಿದ್ದ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಮತ್ತು ಉಮೇಶ್ ಕತ್ತಿಯವರು ಕೈಕೊಟ್ಟದ್ದು ಕೆಜೆಪಿಗೆ ದೊಡ್ಡ ಹೊಡೆತ. ಇದರಿಂದಾಗಿ ಕೆಜೆಪಿಯ  ಬಲ ಬಿಜೆಪಿಯನ್ನು ಸೋಲಿಸಲು ವ್ಯಯವಾಗಬಹುದೇ ಹೊರತು ಹೆಚ್ಚಿನ ಸಂಖ್ಯೆಯ ಶಾಸಕರನ್ನು ವಿಧಾನಸಭೆಗೆ ಕಳುಹಿಸಲು  ನೆರವಾಗಲಾರದು. ಇಲ್ಲಿಯೂ ಇಬ್ಬರ ನಡುವಿನ ಜಗಳದ    ಆದಾಯ ತಮಗೆ ಆಗಬಹುದೆಂಬ ನಿರೀಕ್ಷೆಯಲ್ಲಿದೆ ಕಾಂಗ್ರೆಸ್. ಇದರಿಂದಾಗಿ ಕಳೆದ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಸಂಖ್ಯೆ ಅದಲುಬದಲಾದರೂ ಆಶ್ಚರ್ಯ ಪಡಬೇಕಾಗಿಲ್ಲ.

Monday, April 29, 2013

ಹೈದರಾಬಾದ್ ಕರ್ನಾಟಕದ ಬಾಗಿಲು ಬಡಿಯುತ್ತಿರುವ ಕೆಜೆಪಿ

ಗುಲ್ಬರ್ಗ:   ಹೈದರಾಬಾದ್ ಕರ್ನಾಟಕ ಭಾಗದಲ್ಲಿ ರಾಜಕೀಯವಾಗಿ ನೇಪಥ್ಯಕ್ಕೆ ಸರಿಯುತ್ತಿರುವ ಲಿಂಗಾಯತರು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಮೂಲಕ ರಾಜಕೀಯ ನೆಲೆಯನ್ನು ಮರಳಿ ಪಡೆಯುವ ಪ್ರಯತ್ನದಲ್ಲಿದ್ದಾರೆಯೇ? ರಾಜಕೀಯವಾಗಿ ಅವಕಾಶ ವಂಚಿತರಾಗುತ್ತಿದ್ದೇವೆ ಎಂಬ ಈ ಭಾಗದ ಲಿಂಗಾಯತ ಸಮುದಾಯದಲ್ಲಿರುವ ಅತೃಪ್ತಿಯನ್ನು ಬಳಸಿಕೊಂಡು ಕೆಜೆಪಿ ಇಲ್ಲಿ ಕಾಲೂರುವ ಸನ್ನಾಹದಲ್ಲಿ ತೊಡಗಿದೆಯೇ? ಇಲ್ಲಿನ ಚುನಾವಣಾ ರಾಜಕೀಯದ ವಿದ್ಯಮಾನಗಳ ಒಳಗೊಂದು ನೋಟ ಹರಿಸಿದರೆ ಇಂತಹ ಪ್ರಶ್ನೆಗಳು ಸಹಜವಾಗಿಯೇ ಮೂಡುತ್ತವೆ.
ಈ ಭಾಗದ ಹಿರಿಯ ರಾಜಕಾರಣಿಯಾಗಿದ್ದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ನಂತರ ತಮ್ಮನ್ನು ಪ್ರತಿನಿಧಿಸಬಲ್ಲ ಸಮರ್ಥ ನಾಯಕರು ಹುಟ್ಟಿಬರಲಿಲ್ಲ ಎಂಬ ಕೊರಗು ಇಲ್ಲಿನ ಲಿಂಗಾಯತ ಸಮುದಾಯದಲ್ಲಿ ಬಹಳ ಕಾಲದಿಂದಲೂ ಇದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ಧರ್ಮಸಿಂಗ್ ಎಂಬ ಅವಳಿ ನಾಯಕರು ಈ ಪ್ರದೇಶದಲ್ಲಿ ಬಹುಸಂಖ್ಯೆಯಲ್ಲಿರುವ ಲಿಂಗಾಯತೇತರ ಸಮುದಾಯದ ಬೆಂಬಲದೊಂದಿಗೆ ಪ್ರಭಾವಶಾಲಿ ಕಾಂಗ್ರೆಸ್ ನಾಯಕರಾಗಿ ಬೆಳೆಯುತ್ತಾ ಹೋದಂತೆ ಲಿಂಗಾಯತರು ಸಹಜವಾಗಿಯೇ ಪಕ್ಕಕ್ಕೆ ಸರಿದು ನಿಲ್ಲಬೇಕಾಯಿತು.
ನಾಯಕತ್ವದ ಈ ನಿರ್ವಾತವನ್ನು ಬಳಸಿಕೊಳ್ಳಲು ರಾಮಕೃಷ್ಣ ಹೆಗಡೆಯವರು ಹೊರಟಾಗ ಲಿಂಗಾಯತರು ಹೆಚ್ಚುಕಡಿಮೆ ಅವರ ನಾಯಕತ್ವವನ್ನು ಒಪ್ಪಿಕೊಂಡೇ ಬಿಟ್ಟಿದ್ದರು. ಅದರ ನಂತರ ಕಾಣಿಸಿಕೊಂಡವರು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ. ಇವರನ್ನು ಈ ಭಾಗದ ಲಿಂಗಾಯತರು ಬೆಂಬಲಿಸಿರುವುದಕ್ಕೆ 2008ರ ವಿಧಾನಸಭಾ ಚುನಾವಣಾ ಫಲಿತಾಂಶ ಸಾಕ್ಷಿ. ಆಶ್ಚರ್ಯದ ಸಂಗತಿಯೆಂದರೆ ಆ ಚುನಾವಣೆಯಲ್ಲಿ ಲಿಂಗಾಯತ ಮತದಾರರು ಅಭ್ಯರ್ಥಿಗಳ ಜಾತಿಯನ್ನು ನೋಡದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಏಕೈಕ ಗುರಿಯಿಂದ ಲಿಂಗಾಯತೇತರ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿರುವುದು ಫಲಿತಾಂಶದ ವಿಶ್ಲೇಷಣೆಯಿಂದ ಕಂಡುಬರುತ್ತದೆ.
ಕಳೆದ ಚುನಾವಣೆಯಲ್ಲಿ ಗುಲ್ಬರ್ಗ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಯಲ್ಲಿ ಬರುವ ನಲ್ವತ್ತು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಹತ್ತೊಂಬತ್ತನ್ನು ಗೆದ್ದಿದ್ದರೂ, ಇವರಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರು ಐದು ಶಾಸಕರು ಮಾತ್ರ. ಉಳಿದವರೆಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಜಾತಿಗೆ ಸೇರಿದವರು. ಕಾಂಗ್ರೆಸ್ ಪಕ್ಷ ಈ ಭಾಗದ 15 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದ್ದರೂ ಅವರಲ್ಲಿನ ಲಿಂಗಾಯತ ಶಾಸಕರ ಸಂಖ್ಯೆ ಬಿಜೆಪಿಗಿಂತ ಎರಡು ಹೆಚ್ಚು. ಲಿಂಗಾಯತೇತರ ಅಭ್ಯರ್ಥಿಗಳಿದ್ದ ಕ್ಷೇತ್ರಗಳಲ್ಲಿಯೂ ಲಿಂಗಾಯತರು ಬಿಜೆಪಿಗೆ ಮತದಾನ ಮಾಡಿರುವುದು ಇದರಿಂದ ಸ್ಪಷ್ಟ.
ಜನಪ್ರಿಯ ಜಾತಿ ನಾಯಕರಲ್ಲಿ ಕಾಣಬಹುದಾದ (ಉದಾಹರಣೆಗೆ ಮಾಯಾವತಿ) ಮತವರ್ಗಾವಣೆಯ ಸಾಮರ್ಥ್ಯವನ್ನು ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ ಪ್ರದರ್ಶಿಸಿದ್ದಾರೆ. ಆದರೆ ಕೇವಲ ಈ ಶಕ್ತಿಯ ಬಲದಿಂದ ಕೆಜೆಪಿ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವೇ ಎನ್ನುವುದು ಪ್ರಶ್ನೆ. ಯಡಿಯೂರಪ್ಪ ಬಿಜೆಪಿಯಲ್ಲಿದ್ದಾಗ ಅವರ ವೈಯಕ್ತಿಕ ಜನಪ್ರಿಯತೆ (ಮುಖ್ಯವಾಗಿ ಜಾತಿ) ಮತ್ತು ಪಕ್ಷದ ಮೂಲಕ ಹರಿದು ಬಂದ ಬೆಂಬಲ ಒಟ್ಟಾಗಿ ಅಭ್ಯರ್ಥಿಗಳನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿತ್ತು. ಆದರೆ ಈ ಬಾರಿ ಕೇವಲ ತನ್ನ ಜನಪ್ರಿಯತೆಯ ಬಲದಿಂದಲೇ ಪಕ್ಷದ ಅಭ್ಯರ್ಥಿಗಳನ್ನು ಆರಿಸಿ ತರಬೇಕಾಗಿದೆ. ಹಿಂದಿನ ಚುನಾವಣೆಯ ಕಾಲದಲ್ಲಿದ್ದ ಮತವರ್ಗಾವಣೆಯ ಸಾಮರ್ಥ್ಯ ಈಗಲೂ ಯಡಿಯೂರಪ್ಪನವರಲ್ಲಿ ಉಳಿದಿದೆಯೇ?
ಆರೋಪಗಳ ಕಳಂಕದ ಹೊರತಾಗಿಯೂ ಹೈದರಾಬಾದ್ ಕರ್ನಾಟಕದ ಬಹುಸಂಖ್ಯಾತ ಲಿಂಗಾಯತರಲ್ಲಿ ಯಡಿಯೂರಪ್ಪನವರ ಬಗ್ಗೆ ಪ್ರೀತಿಯೋ, ಅನುಕಂಪವೋ ಇರುವುದು ಸ್ಪಷ್ಟ. ಆದರೆ ಈ ಮೃದು ಭಾವನೆ ಅವರ ಮತಾಧಿಕಾರವನ್ನು ನಿರ್ದೇಶಿಸುವಷ್ಟು ಪ್ರಭಾವಶಾಲಿಯಾಗಿದೆಯೇ ಎಂಬುದನ್ನು ಕಾದು ನೋಡಬೇಕು. ಈ ಭಾಗದಲ್ಲಿ ಸಮಗ್ರ ಲಿಂಗಾಯತ ಜಾತಿಯನ್ನು ಪ್ರತಿನಿಧಿಸಬಲ್ಲ ಸಾಮರ್ಥ್ಯದ ನಾಯಕರು ಇಲ್ಲದಿರುವುದು ಕೂಡಾ ಯಡಿಯೂರಪ್ಪನವರ ಬಗೆಗಿನ ಅಭಿಮಾನಕ್ಕೆ ಕಾರಣ ಇರಬಹುದು.
ಗುಲ್ಬರ್ಗ ಜಿಲ್ಲೆಯಲ್ಲಿ ವೀರೇಂದ್ರ ಪಾಟೀಲರ ನಂತರ ಕಾಣಿಸಿಕೊಂಡವರು ಜನತಾ ಪರಿವಾರಕ್ಕೆ ಸೇರಿರುವ ವೈಜನಾಥ ಪಾಟೀಲ, ಎಸ್.ಕೆ.ಕಾಂತಾ, ಬಿ.ಆರ್.ಪಾಟೀಲ ಮೊದಲಾದ ನಾಯಕರು. ಇವರಲ್ಲಿ ಯಾರೂ ಲಿಂಗಾಯತ ನಾಯಕರಾಗಿ ತಮ್ಮನ್ನು ಬಿಂಬಿಸಿಕೊಂಡವರಲ್ಲ. ಗುಲ್ಬರ್ಗ ಜಿಲ್ಲೆಯ ಸೇಡಂ ಶಾಸಕ ಡಾ.ಶರಣಪ್ರಕಾಶ ಪಾಟೀಲ ಇಲ್ಲವೆ ಯಾದಗಿರಿ ಶಾಸಕ ಡಾ.ಮಾಲಕರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷ ತಮ್ಮಲ್ಲಿರುವ ಲಿಂಗಾಯತ ನಾಯಕರೆಂದು ಬಿಂಬಿಸುತ್ತಿದ್ದರೂ ಅವರ ಪ್ರಭಾವಲಯ ಸೀಮಿತವಾದುದು.
ಇದೇ ರೀತಿ ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಭೀಮಣ್ಣ ಖಂಡ್ರೆ ವೀರಶೈವ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರೂ ಸಮುದಾಯದ ಮೇಲೆ ನಿಯಂತ್ರಣ ಹೊಂದಿದವರಲ್ಲ, ಅವರ ಶ್ರಮವೆಲ್ಲ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಗ ಈಶ್ವರ ಖಂಡ್ರೆಯವರನ್ನು ಗೆಲ್ಲಿಸುವುದಕ್ಕಷ್ಟೇ ವ್ಯಯವಾಗುತ್ತಿದೆ. ಅದೇ ಜಿಲ್ಲೆಯ ಗುರುಪಾದಪ್ಪ ನಾಗಮಾರಪಳ್ಳಿ ಹಲವು ಪಕ್ಷಗಳನ್ನು ಸುತ್ತಿ ಈಗ ಕೆಜೆಪಿ ಸೇರಿದ್ದಾರೆ.
ಕೊಪ್ಪಳ ಜಿಲ್ಲೆಯ ಬಸವರಾಜ ಪಾಟೀಲ ಅನ್ವರಿ ಈಗ ಹಿಂದಿನ ಜನಪ್ರಿಯತೆಯನ್ನು ಉಳಿಸಿಕೊಂಡಿಲ್ಲ. ಆ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿರುವ ಬಸವರಾಜ ರಾಯರೆಡ್ಡಿ ಮತ್ತು ಅಮರೇಗೌಡ ಬಯ್ಯಾಪುರ ಹಾಗೂ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ತಮ್ಮ ಕ್ಷೇತ್ರಗಳ ವ್ಯಾಪ್ತಿಯನ್ನು ಮೀರಿ ಲಿಂಗಾಯತ ಮತದಾರರ ಮೇಲೆ ಹಿಡಿತ ಹೊಂದಿದವರಲ್ಲ.
ಏಳರಲ್ಲಿ ಐದು ಕ್ಷೇತ್ರಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾಗಿರುವುದರಿಂದ ರಾಯಚೂರು ಜಿಲ್ಲೆಯಲ್ಲಿ ಲಿಂಗಾಯತ ನಾಯಕರು ಬೆಳೆಯಲು ಅವಕಾಶ ಕಡಿಮೆ. ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಬೋಸರಾಜು ಮತ್ತು ಹಂಪನಗೌಡ ಬಾದರ್ಲಿ ಅವರೇ ಅಲ್ಲಿನ ನಾಯಕರು. ಬಳ್ಳಾರಿ ಜಿಲ್ಲೆಯಲ್ಲಿದ್ದ ಒಬ್ಬ ಲಿಂಗಾಯತ ನಾಯಕರಾದ ಅಲ್ಲಂ ವೀರಭದ್ರಪ್ಪನವರು ಊರು ಬಿಟ್ಟು ಬೆಂಗಳೂರು ಸೇರಿಬಿಟ್ಟಿದ್ದಾರೆ.
ಹೈದರಾಬಾದ್ ಕರ್ನಾಟಕದ ಲಿಂಗಾಯತರಲ್ಲಿರುವ ನಾಯಕತ್ವದ ಕೊರತೆ ಬಿ.ಎಸ್.ಯಡಿಯೂರಪ್ಪನವರಿಗೆ ಇರುವ ಅನುಕೂಲತೆ. ಇದನ್ನು ಅರ್ಥಮಾಡಿಕೊಂಡಿರುವ ಅವರು ಅಳಿದುಳಿದ ಲಿಂಗಾಯತ ನಾಯಕರನ್ನು  ತಮ್ಮ ಜತೆ ಸೇರಿಸಿಕೊಳ್ಳುವ ಪ್ರಯತ್ನವನ್ನು ಪ್ರಾರಂಭದಿಂದಲೇ ಮಾಡುತ್ತಾ ಬಂದಿದ್ದಾರೆ. ಈ ಪ್ರಯತ್ನದಲ್ಲಿ ಸ್ವಲ್ಪ ಯಶಸ್ಸನ್ನೂ ಕಂಡಿದ್ದಾರೆ. ಇದನ್ನು ಮುಖ್ಯವಾಗಿ ಹೈದರಾಬಾದ್ ಕರ್ನಾಟಕದ ಕೇಂದ್ರ ಸ್ಥಾನವಾದ ಗುಲ್ಬರ್ಗ ಜಿಲ್ಲೆಯಲ್ಲಿ ಕಾಣಬಹುದು. ನಂಜುಂಡಪ್ಪ ವರದಿಯ ಅನುಷ್ಠಾನದಿಂದ ಹಿಡಿದು ಸಂವಿಧಾನದ 371ನೇ ಕಲಂ ತಿದ್ದುಪಡಿಯವರೆಗಿನ ಹೈದರಾಬಾದ್ ಕರ್ನಾಟಕದ ಮುಖ್ಯ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಾ ಬಂದ ವೈಜನಾಥ ಪಾಟೀಲ, ಕಾರ್ಮಿಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಎಸ್.ಕೆ.ಕಾಂತಾ, ಜನತಾ ಪರಿವಾರದಿಂದ ಬಂದ ಸಮಾಜವಾದಿ ಹಿನ್ನೆಲೆಯ ಬಿ.ಆರ್.ಪಾಟೀಲ ಮತ್ತು ಇನ್ನೊಬ್ಬ ಹಿರಿಯ ನಾಯಕ ಎಂ.ವೈ. ಪಾಟೀಲ ಈಗ ಗುಲ್ಬರ್ಗ ಜಿಲ್ಲೆಯಲ್ಲಿ ಕೆಜೆಪಿ ಅಭ್ಯರ್ಥಿಗಳು. ಅದೇ ರೀತಿ ಕೊಪ್ಪಳ ಜಿಲ್ಲೆಯ ಬಸವರಾಜ ಅನ್ವರಿ, ಬೀದರ್ ಜಿಲ್ಲೆಯ ಗುರುಪಾದಪ್ಪ ನಾಗಮಾರಪಳ್ಳಿ ಕೂಡಾ ಕೆಜೆಪಿ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ತಮಗೆ ಇರುವ ಪ್ರಭಾವ ಸೀಮಿತವಾಗಿದ್ದರೂ ಇದು ಯಡಿಯೂರಪ್ಪನವರ ಜನಪ್ರಿಯತೆಯ ಜತೆ ಸೇರಿಕೊಂಡಾಗ ಗೆಲುವಿನ ಹಾದಿ ಹತ್ತಿರವಾಗಬಹುದು ಎಂಬ ನಿರೀಕ್ಷೆ ಕೆಜೆಪಿ ಅಭ್ಯರ್ಥಿಗಳಲ್ಲಿದೆ. ಕೆಜೆಪಿಯ ಜನಪ್ರಿಯತೆ ಅದಕ್ಕೆ ಸ್ಥಾನಗಳನ್ನು ಗೆದ್ದುಕೊಡುವಷ್ಟು ಅಗಾಧವಾಗಿದೆಯೇ? ಇಲ್ಲವೆ ಬೇರೆ ಪಕ್ಷಗಳ ಮತಗಳನ್ನು ತಿಂದುಹಾಕುವುದಕ್ಕಷ್ಟೇ ಸೀಮಿತವಾಗಲಿದೆಯೇ ಎನ್ನುವುದು ಚುನಾವಣಾ ಕಣದಲ್ಲಿರುವ ಕುತೂಹಲ. ಕೆಜೆಪಿ ಬರಿ ಬಿಜೆಪಿಗೆ ಮಾತ್ರವಲ್ಲ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೂ ಹಾನಿ ಉಂಟು ಮಾಡುವ ಸಾಧ್ಯತೆ ಇದ್ದರೂ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೆಜೆಪಿಯಿಂದ ನಷ್ಟಕ್ಕಿಂತ ಲಾಭವೇ ಹೆಚ್ಚು. ತಮ್ಮ ಅಭ್ಯರ್ಥಿಗಳು ಗೆಲ್ಲಲಾಗದ ಕಡೆಗಳಲ್ಲಿ ಕೊನೆ ಗಳಿಗೆಯಲ್ಲಿ ಕೆಜೆಪಿ ತನ್ನ ಬೆಂಬಲಿಗರಿಗೆ ಕಾಂಗ್ರೆಸ್ ಪರ ಮತಹಾಕಲು ಸೂಚನೆಯನ್ನು ನೀಡಬಹುದೆಂಬ ನಿರೀಕ್ಷೆಯೂ ಕೆಲವು ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳಲ್ಲಿದೆ.
ಬಹಿರಂಗವಾಗಿ ಚರ್ಚೆಯಾಗುತ್ತಿರುವಂತೆ ಬಿಜೆಪಿಯನ್ನು ಸೋಲಿಸುವುದೇ ಕೆಜೆಪಿಯ ಮೊದಲ ಉದ್ದೇಶವಾಗಿದ್ದರೆ ಈ ಪ್ರಯತ್ನದಲ್ಲಿ ಅದು ಈಗಾಗಲೇ ಯಶಸ್ಸು ಕಂಡಿದೆ ಎಂದು ಹೇಳಬಹುದು. ಹೈದರಾಬಾದ್ ಕರ್ನಾಟಕದಲ್ಲಿ ಕಳೆದ ಬಾರಿ ಗೆದ್ದಿರುವ 19 ಸ್ಥಾನ ಉಳಿಸಿಕೊಳ್ಳುವುದು ಬಿಜೆಪಿಗೆ ಖಂಡಿತ ಅಸಾಧ್ಯ. ಈ ಸಂಖ್ಯೆ ಅರ್ಧಕ್ಕಿಂತಲೂ ಕೆಳಗಿಳಿದರೂ ಅಚ್ಚರಿ ಪಡಬೇಕಾಗಿಲ್ಲ. ಕೆಜೆಪಿ, ಹೈದರಾಬಾದ್ ಕರ್ನಾಟಕದ ಮನೆಬಾಗಿಲು ಬಡಿಯುತ್ತಿರುವುದು ನಿಜ, ಆದರೆ ಬಾಗಿಲು ತೆರೆಯುವ ಬಗ್ಗೆ ಮನೆ ಯಜಮಾನನ ನಿರ್ಧಾರ ಏನೆಂದು ತಿಳಿದುಕೊಳ್ಳಲು ಕಾಯಬೇಕು.