Monday, May 2, 2011

ಪ್ರಶ್ನಿಸುವ ಸಂಸ್ಥೆಗಳ ಮೇಲೆಲ್ಲ ಕೆಂಗಣ್ಣು

ಭ್ರಷ್ಟಾಚಾರದ ನಿರ್ಮೂಲನೆಗಾಗಿ ‘ಅವತಾರವೆತ್ತಿ ಬರಲಿರುವ’ ಜನಲೋಕಪಾಲರ ನಿರೀಕ್ಷೆಯಲ್ಲಿ ದೇಶ ಮೈಮರೆತಿರುವಾಗಲೇ ಅದೇ ಉದ್ದೇಶಕ್ಕಾಗಿ ಬಹುಹಿಂದೆಯೇ ರಚನೆಗೊಂಡ ಸಂಸ್ಥೆಗಳಲ್ಲೊಂದಾದ ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ಯನ್ನು (ಪಿಎಸಿ) ದುರ್ಬಲಗೊಳಿಸುವ ಪ್ರಯತ್ನ ಪ್ರಾರಂಭವಾಗಿದೆ. ಇದು ಎರಡು ರಾಜಕೀಯ ಪಕ್ಷಗಳ ನಡುವಿನ ಸಂಘರ್ಷದಂತೆ ಮೇಲ್ನೋಟಕ್ಕೆ ಕಂಡರೂ ಇದರ ಆಳದಲ್ಲಿ ಪಿಎಸಿ ಸೇರಿದಂತೆ ತಮ್ಮನ್ನು ಪ್ರಶ್ನಿಸುವ ಅಧಿಕಾರ ಹೊಂದಿರುವ ಎಲ್ಲ ಸಂಸದೀಯ ಮತ್ತು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ರಾಜಕಾರಣಿಗಳು ಹೊಂದಿರುವ ಅಸಹನೆಯನ್ನು ಕಾಣಬಹುದಾಗಿದೆ.
ಸಿಬಿಐನಿಂದ ಹಿಡಿದು ಸಿವಿಸಿಯಂತಹ ಸಂಸ್ಥೆಗಳ ವರೆಗೆ, ಸ್ಪೀಕರ್‌ನಿಂದ ಹಿಡಿದು ನ್ಯಾಯಮೂರ್ತಿಗಳ ಹುದ್ದೆ ವರೆಗೆ ಎಲ್ಲವೂ ರಾಜಕಾರಣಿಗಳಿಂದ ನಿರಂತರವಾಗಿ ಚಾರಿತ್ರ್ಯಹನನಕ್ಕೆ ಒಳಗಾಗುತ್ತಾ ಬಂದಿವೆ. ಈಗ ಪಿಎಸಿ ಸರದಿ.
ಜನತೆಯ ಆಶೋತ್ತರಗಳ ಪ್ರತೀಕವಾಗಿರುವ ಸಂಸತ್, ಕಾನೂನು ರಚನೆಯ ಜತೆಯಲ್ಲಿ ಕಾರ್ಯಾಂಗದ ಕಾರ್ಯನಿರ್ವಹಣೆಯ ಮೇಲೂ ಕಣ್ಣಿಡುತ್ತದೆ. ಈ ಹೊಣೆ ನಿರ್ವಹಣೆಯಲ್ಲಿ ಸಂಸತ್‌ಗೆ ಪ್ರಧಾನ ಪಾತ್ರವಾದರೆ ಸಂಸದೀಯ ಸಮಿತಿಗಳಿಗೆ ಪೋಷಕ ಪಾತ್ರ. ಮೂರು ಹಣಕಾಸು ಸಮಿತಿಗಳಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಅಂದಾಜು ಸಮಿತಿ ಮತ್ತು ಸಾರ್ವಜನಿಕ ಉದ್ಯಮಗಳ ಸಮಿತಿ; ಜತೆಗೆ, ವಿವಿಧ ವಿಷಯಗಳ ಮೇಲಿನ 15 ಸದನ ಸಮಿತಿ, 29 ಸಚಿವ ಖಾತೆಗಳ ಸಲಹಾ ಸಮಿತಿ ಹಾಗೂ ಹದಿನೇಳು ಇಲಾಖಾವಾರು ಸಮಿತಿಗಳು ಸೇರಿದಂತೆ ಒಟ್ಟು 64 ಸಂಸದೀಯ ಸಮಿತಿಗಳಿವೆ. ಇವುಗಳ ಜತೆಗೆ ಆಗಾಗ ಕೇಳಿಬರುವ ಆರೋಪಗಳ ತನಿಖೆಗೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ.
ಪ್ರಧಾನಪಾತ್ರ ವಹಿಸಬೇಕಾಗಿರುವ ಸಂಸತ್ ಇತ್ತೀಚೆಗೆ ತನ್ನ ಕಾರ್ಯನಿರ್ವಹಣೆಯಲ್ಲಿ ವಿಫಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೋಷಕ ಪಾತ್ರಗಳಾದ ಸಂಸದೀಯ ಸಮಿತಿಗಳ ಜವಾಬ್ದಾರಿ ಹೆಚ್ಚಿದೆ. ಇದಕ್ಕಾಗಿಯೇ ಇವುಗಳ ಮೇಲೆ ರಾಜಕಾರಣಿಗಳ ಕೆಂಗಣ್ಣು ಬಿದ್ದಿರುವುದು. ಯುಪಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ದಿನಗಳಲ್ಲಿಯೇ ಕೇಂದ್ರ ಸರ್ಕಾರದ ಸಂಘರ್ಷಾತ್ಮಕ ನಿಲುವನ್ನು ಪ್ರತಿಭಟಿಸಿ ಎನ್‌ಡಿಎ ಸಂಸದೀಯ ಸಮಿತಿಗಳನ್ನು ಬಹಿಷ್ಕರಿಸುವ ಬೆದರಿಕೆ ಹಾಕಿತ್ತು. ಈಗ ಯುಪಿಎ ಸದಸ್ಯರು ಪಿಎಸಿ ಅಧ್ಯಕ್ಷರನ್ನೇ ಕಿತ್ತುಹಾಕಲು ಹೊರಟಿದ್ದಾರೆ.
ರಾಷ್ಟ್ರೀಯ ಹಣಕಾಸು ವ್ಯವಹಾರದ ಮೇಲಿನ ಸಂಸದೀಯ ನಿಯಂತ್ರಣದ ಮೂಲಕವೇ ಕಾರ್ಯಾಂಗವನ್ನು ಶಾಸಕಾಂಗಕ್ಕೆ  ಉತ್ತರದಾಯಿಯನ್ನಾಗಿ ಮಾಡಲು ಸಾಧ್ಯ. ಈ ಸಂಸದೀಯ ನಿಯಂತ್ರಣಕ್ಕಾಗಿ ಇರುವ ಹಲವು ಸಾಧನಗಳಲ್ಲಿ ಮುಖ್ಯವಾದುದು ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’. ಈ ಸಮಿತಿ ನಿಷ್ಪಕ್ಷಪಾತವಾಗಿ ನಿರ್ಭೀತಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗದಿದ್ದಲ್ಲಿ ಪ್ರಜಾಸತ್ತಾತ್ಮಕ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಾರದು. ಭಾರತದಲ್ಲಿ ಸ್ವಾತಂತ್ರ್ಯಪೂರ್ವದಲ್ಲೇ ಪಿಎಸಿ ರಚನೆಯಾಗಿತ್ತು. 1921ರಲ್ಲಿ ಸ್ಥಾಪನೆಗೊಂಡ ಪಿಎಸಿಗೆ ಆಗಿನ ಗವರ್ನರ್ ಜನರಲ್ ಮಂಡಳಿಯ ಹಣಕಾಸು ಸದಸ್ಯರೇ ಅಧ್ಯಕ್ಷರಾಗಿದ್ದರು.
ಲೋಕಸಭಾಧ್ಯಕ್ಷರ ನಿಯಂತ್ರಣಕ್ಕೆ ಒಳಪಡಿಸಿದ ಪಿಎಸಿ ರಚನೆಗೊಂಡದ್ದು ಸಂವಿಧಾನ ರಚನೆಯಾದ ನಂತರ. ಈಗ ವಿವಾದಕ್ಕೆ ಸಿಲುಕಿರುವ ಪಿಎಸಿ ಅಧ್ಯಕ್ಷ ಸ್ಥಾನಕ್ಕೆ 1967ರವರೆಗೆ ಆಡಳಿತ ಪಕ್ಷದ ಸದಸ್ಯರೇ ನೇಮಕಗೊಳ್ಳುತ್ತಿದ್ದರು. ಆಶ್ಚರ್ಯವೆಂದರೆ ಈ ಸಂಪ್ರದಾಯ ತಪ್ಪಿಸಿ ಪಿಎಸಿ ಅಧ್ಯಕ್ಷ ಸ್ಥಾನಕ್ಕೆ ವಿರೋಧಪಕ್ಷದ ನಾಯಕರನ್ನು ಮೊದಲು ನೇಮಕಮಾಡಿದ್ದು ನಂತರದ ದಿನಗಳಲ್ಲಿ ವಿರೋಧಪಕ್ಷಗಳಿಂದ ಸರ್ವಾಧಿಕಾರಿ ಎಂದು ದೂಷಣೆಗೊಳಗಾದ ಆಗಿನ ಪ್ರಧಾನಿ ಇಂದಿರಾಗಾಂಧಿ. ಆ ರೀತಿ ನೇಮಕಗೊಂಡವರು ಹಿರಿಯ ಸಂಸದೀಯಪಟು ಎಂ.ಎಚ್.ಮಸಾನಿ. ಆಗಿನ ಲೋಕಸಭಾಧ್ಯಕ್ಷ ನೀಲಂ ಸಂಜೀವ ರೆಡ್ಡಿ ಅವರು ಮಸಾನಿಯವರ ಕಾರ್ಯಪಟುತ್ವ, ನಿಷ್ಪಕ್ಷಪಾತ ನಡವಳಿಕೆ ಮತ್ತು ಬದ್ಧತೆಯನ್ನು ಕೊಂಡಾಡಿರುವುದು ಲೋಕಸಭೆ ದಾಖಲೆಯಲ್ಲಿವೆ. ಮೊನ್ನೆ ಅದೇ ‘ಪಿಎಸಿಯ ಅಧ್ಯಕ್ಷರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದೇವೆ’ ಎಂದು ಬಹುಸಂಖ್ಯಾತ ಸದಸ್ಯರು ಕೂಗಾಡಿದ್ದಾರೆ. ಅಧ್ಯಕ್ಷರು ಪಟ್ಟುಹಿಡಿದು ಸಮಿತಿ ಅಂಗೀಕಾರ ನೀಡದ ಕರಡು ವರದಿಯನ್ನೇ ಲೋಕಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಸಾಮಾನ್ಯವಾಗಿ ವರ್ಷಕ್ಕೊಮ್ಮೆ ಮಂಡಿಸಲಾಗುವ ಬಜೆಟ್‌ನ ನಂತರ ಜನತೆ ಕೂಡಾ ದೇಶದ ಆಯವ್ಯಯದ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಬಹುಕೋಟಿ  ರೂಪಾಯಿ ಲೆಕ್ಕದ ಈ ಆರ್ಥಿಕ ವ್ಯವಹಾರ ಸಾಮಾನ್ಯ ಜನರ ತಲೆಗೆ ಹತ್ತುವುದು ಕೂಡಾ ಕಷ್ಟ. ಈ ಹಿನ್ನೆಲೆಯಲ್ಲಿಯೇ ಸಿಎಜಿ ಮತ್ತು ಪಿಎಸಿಯ ಪಾತ್ರ ಮಹತ್ವದ್ದು. ಬಜೆಟ್‌ನಲ್ಲಿ ನಿಗದಿಪಡಿಸಿದ ಅನುದಾನದ ಖರ್ಚಿನ ವಿವರವನ್ನು ಹೊಂದಿರುವ ಧನ ವಿನಿಯೋಗ ಲೆಕ್ಕಪತ್ರವನ್ನು ಸರ್ಕಾರದ ಪ್ರತಿಯೊಂದು ಇಲಾಖೆ ಸಂಸತ್‌ಗೆ ಸಲ್ಲಿಸಬೇಕಾಗುತ್ತದೆ.
ಈ ಲೆಕ್ಕಪತ್ರದ ಪರಿಶೋಧನೆ ನಡೆಸುವ ಮಹಾಲೇಖಪಾಲರು ಇಲಾಖಾವಾರು ವರದಿಗಳನ್ನು ತಯಾರಿಸಿ ಪಿಎಸಿಗೆ ಸಲ್ಲಿಸುತ್ತಾರೆ. ಸಂಸತ್‌ನ ಧನವಿನಿಯೋಗ ನಿಯಮಾವಳಿಗಳಿಗೆ ಅನುಗುಣವಾಗಿ ಸರ್ಕಾರಿ ಇಲಾಖೆಗಳು ಹಣ ಖರ್ಚು ಮಾಡಿವೆಯೇ ಎಂಬುದನ್ನು ಪರಿಶೀಲಿಸುವುದು ಪಿಎಸಿಯ ಕರ್ತವ್ಯ. ಸಿಎಜಿ ಮತ್ತು ಪಿಎಸಿ ಇಂತಹ ಪರಿಶೀಲನೆ ನಡೆಸುವಾಗಲೇ ಭ್ರಷ್ಟರ ಭಾನಗಡಿಗಳು ಹೊರಬೀಳುವುದು.
ವರದಿ ನೀಡುವವರೆಗೆ ಎಲ್ಲವೂ ಸರಿ. ನಂತರ? ಈಗಿನ ವಿವಾದವನ್ನೇ ಉದಾಹರಣೆಗಾಗಿ ತೆಗೆದುಕೊಂಡರೆ ಮುರಳಿ ಮನೋಹರ ಜೋಷಿ ಸಲ್ಲಿಸಿರುವ ವರದಿಯನ್ನು ಲೋಕಸಭಾಧ್ಯಕ್ಷರು ತಿರಸ್ಕರಿಸುವ ಎಲ್ಲ ಸಾಧ್ಯತೆಗಳಿವೆ. ಯಾಕೆಂದರೆ ಅದು ಸಮಿತಿಯ ಅಂಗೀಕಾರ ಇಲ್ಲದ ಕರಡು ವರದಿ. ಪಿಎಸಿಯ ಅಂತಿಮ ವರದಿಗಳೇ ಶೈತ್ಯಾಗಾರದಲ್ಲಿರುವಾಗ ಈ ಕರಡು ವರದಿಯನ್ನು ಕೇಳುವವರಾರು? ಸಂಸತ್‌ಗೆ ಐವತ್ತು ವರ್ಷ ತುಂಬಿದ್ದ ಸಂದರ್ಭದಲ್ಲಿ ಪಿಎಸಿ ವರದಿಗಳ ಬಗ್ಗೆ ಒಂದು ಸಮೀಕ್ಷೆ ನಡೆದಿತ್ತು. ಅದರ ಪ್ರಕಾರ ಏಳನೇ ಲೋಕಸಭೆಯಿಂದ ಹದಿಮೂರನೇ ಲೋಕಸಭೆಯ ವರೆಗಿನ ಅವಧಿಯಲ್ಲಿ ಪಿಎಸಿ ಮಾಡಿರುವ 6113 ಶಿಫಾರಸುಗಳಲ್ಲಿ ಸರ್ಕಾರ ಒಪ್ಪಿಕೊಂಡಿದ್ದು 3709 ಮಾತ್ರ.
ಮುಕ್ತ ಮಾರುಕಟ್ಟೆಯಿಂದ ಪಡೆಯುವ ಸಾಲದ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಪಿಎಸಿ ನಿರಂತರವಾಗಿ ಶಿಫಾರಸು ಮಾಡುತ್ತಾ ಬಂದ ಕಾರಣದಿಂದಾಗಿಯೇ 2000ನೇ ವರ್ಷದಲ್ಲಿ ‘ಹಣಕಾಸು ಜವಾಬ್ದಾರಿ ಮಸೂದೆ’ ಮಂಡನೆಯಾಗಿದ್ದು. ಲೋಕಸಭೆಯ ಅವಧಿಯಲ್ಲಿ ಸಾರ್ವಜನಿಕ ಉದ್ಯಮಗಳ ಷೇರುವಿಕ್ರಯದ ಬಗ್ಗೆ ನೀಡಿದ ವರದಿಯಲ್ಲಿ ಪಿಎಸಿ ‘ಈ ವ್ಯವಹಾರದಲ್ಲಿ ಪಾರದರ್ಶಕತೆಯ ಅವಶ್ಯಕತೆಯಿದ್ದು ಇದರಲ್ಲಿ ತೊಡಗಿರುವ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ನಿಗದಿಗೊಳಿಸಬೇಕಾಗುತ್ತದೆ’ ಎಂದು ಹೇಳಿತ್ತು.
ಇದನ್ನು ಒಪ್ಪಿಕೊಂಡ ಆಗಿನ ಕೇಂದ್ರ ಸರ್ಕಾರ, ತನಿಖಾ ಸಮಿತಿಯನ್ನು ನೇಮಿಸಿತ್ತು. ವಸತಿ ಮಂಜೂರಾತಿಯಲ್ಲಿ ವಸತಿ ಸಚಿವರ ವಿವೇಚನಾಧಿಕಾರದ ದುರ್ಬಳಕೆ ತಡೆಯಬೇಕೆಂಬ ಪಿಎಸಿ ಶಿಫಾರಸನ್ನು ಸರ್ಕಾರ ಒಪ್ಪಿಕೊಂಡು ಹೊಸ ನೀತಿಯೊಂದನ್ನು ರೂಪಿಸಿತ್ತು. ಇವು ಪಿಎಸಿ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡ ಕೆಲವು ಉದಾಹರಣೆಗಳು. ಇತ್ತೀಚಿನ ದಿನಗಳಲ್ಲಿ ಪಿಎಸಿ ಶಿಫಾರಸುಗಳನ್ನು ಒಪ್ಪಿಕೊಂಡಿದ್ದಕ್ಕಿಂತ ತಿರಸ್ಕರಿಸಿರುವುದೇ ಹೆಚ್ಚು. ಪಿಎಸಿ ದೊಡ್ಡಕುಳಗಳತ್ತ ಕಣ್ಣು ಹಾಕಿದಾಗೆಲ್ಲ ಪ್ರತಿರೋಧ ಎದುರಾಗುತ್ತದೆ. ಕಾರ್ಗಿಲ್ ಯುದ್ಧದ ಕಾಲದಲ್ಲಿ ನಡೆದ ಶವಪೆಟ್ಟಿಗೆ ಖರೀದಿ ಅವ್ಯವಹಾರವನ್ನು ಸಿಎಜಿ ಬಯಲುಗೊಳಿಸಿದರೂ ಆಗಿನ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರನ್ನು ಎನ್‌ಡಿಎ ಸರ್ಕಾರ ಬಿಟ್ಟುಕೊಡಲಿಲ್ಲ.
ಈಗ 2ಜಿ ತರಂಗಾಂತರದ ವ್ಯವಹಾರದಲ್ಲಿನ ಅಕ್ರಮದಲ್ಲಿ ಪ್ರಧಾನಿ ಕಾರ್ಯಾಲಯದ ಪಾತ್ರ ಉಲ್ಲೇಖಿಸಿದ ಕೂಡಲೇ ಪಿಎಸಿಯನ್ನೇ ಬರ್ಖಾಸ್ತುಗೊಳಿಸುವ ಪ್ರಯತ್ನ ನಡೆದಿದೆ.
ರಾಜ್ಯಗಳದ್ದೂ ಇದೇ ಸ್ಥಿತಿ. ಯಾವ ರಾಜ್ಯದಲ್ಲಿಯೂ ಪಿಎಸಿ ಕಾರ್ಯನಿರ್ವಹಣೆ ಸಮಾಧಾನಕರವಾಗಿಲ್ಲ. ಬಹಳಷ್ಟು ರಾಜ್ಯಗಳಲ್ಲಿ ಸರ್ಕಾರಿ ಇಲಾಖೆಗಳು ಬಜೆಟ್ ಅನುದಾನವನ್ನು ಮೀರಿ ಖರ್ಚು ಮಾಡಿವೆ. ಈ ಮಿತಿಮೀರಿದ ಖರ್ಚಿಗೆ ವಿಧಾನಮಂಡಲದ ಅಂಗೀಕಾರ ಅನಿವಾರ್ಯವಾದರೂ ಯಾರೂ ಆ ಬಗ್ಗೆ  ತಲೆಕೆಡಿಸಿಕೊಂಡಿಲ್ಲ. ಈ ಲೋಪವೇ ಹಣಕಾಸು ಅವ್ಯವಹಾರದ ಹಗರಣಗಳಿಗೆ ದಾರಿಮಾಡಿಕೊಡುತ್ತಿರುವುದು.

1987-88ರಿಂದ 1995-96ರ ವರೆಗೆ ಬಿಹಾರ ರಾಜ್ಯದ ಪಶುಸಂಗೋಪನಾ ಇಲಾಖೆ ಬಜೆಟ್ ನಿಗದಿಪಡಿಸಿದ್ದ ಅನುದಾನ ಮೀರಿ ಖರ್ಚು ಮಾಡುತ್ತಲೇ ಇತ್ತು. ಉದಾಹರಣೆಗೆ  1993-94 ರ ಅವಧಿಯಲ್ಲಿ ಬಜೆಟ್ ಅನುದಾನ 77 ಕೋಟಿ ರೂಪಾಯಿಗಳಾದರೆ ಖರ್ಚಾಗಿರುವುದು 199 ಕೋಟಿ ರೂಪಾಯಿ, 1995-96ರಲ್ಲಿ ಬಜೆಟ್ ಅನುದಾನ 82 ಕೋಟಿ ರೂಪಾಯಿಗಳಾದರೆ ಖರ್ಚಾಗಿರುವುದು 228 ಕೋಟಿ ರೂಪಾಯಿ. ಕೊನೆಗೊಂದು ದಿನ ಎಲ್ಲವೂ ಬಯಲಾಯಿತು. 1999ರ ಮಾರ್ಚ್ ತಿಂಗಳ ವರೆಗಿನ ಅವಧಿಯ ದಾಖಲೆಗಳ ಪ್ರಕಾರ ಬಜೆಟ್ ಮಿತಿಯನ್ನು ಮೀರಿ ರಾಜ್ಯಗಳಲ್ಲಿ ಖರ್ಚಾಗಿರುವ ಹಣದ ಮೊತ್ತ 93,000 ಕೋಟಿ ರೂಪಾಯಿ.
ರಾಜಕೀಯ ದಾಳಿಗಳನ್ನು ಸಮರ್ಥವಾಗಿ ಎದುರಿಸಲು ಪಿಎಸಿಗೆ ಸಾಧ್ಯವಾಗದೆ ಇರುವುದಕ್ಕೆ ಅದರ ರಚನೆಯಲ್ಲಿನ ದೋಷ ಮತ್ತು ಕಾರ್ಯನಿರ್ವಹಣೆಯಲ್ಲಿನ ಇತಿಮಿತಿಗಳೂ ಕಾರಣ. ಉದಾಹರಣೆಗೆ ಲೆಕ್ಕಪತ್ರವನ್ನು ಪರಿಶೀಲಿಸುವಾಗ ಸಂಬಂಧಿತ ಇಲಾಖೆಯ ಕಾರ್ಯದರ್ಶಿಗಳು ಪಿಎಸಿ ಮುಂದೆ ಹಾಜರಾಗಿ ಸಾಕ್ಷ್ಯ ನೀಡಬೇಕೆಂದು ಹೇಳುತ್ತದೆ ನಿಯಮ. ಆದರೆ ನಿರ್ದಿಷ್ಟ ಪ್ರಕರಣವನ್ನು ನಿರ್ವಹಿಸಿದ ಅಧಿಕಾರಿಗಳ ಸಾಕ್ಷ್ಯ ಕಡ್ಡಾಯ ಅಲ್ಲ. ಇದರಿಂದಾಗಿ ಅಧಿಕಾರಿಗಳ ಮೇಲೆ ಜವಾಬ್ದಾರಿಯನ್ನು ಹೊರಿಸಲು ಸಾಧ್ಯವಾಗುತ್ತಿಲ್ಲ. ಅಮೆರಿಕದಲ್ಲಿ ಅಧಿಕಾರಿಗಳು ಮಾತ್ರವಲ್ಲ, ಅವಶ್ಯಕ ಸಂದರ್ಭಗಳಲ್ಲಿ  ಸಾರ್ವಜನಿಕ ವ್ಯಕ್ತಿಗಳಿಂದಲೂ ಸಾಕ್ಷ್ಯ ಸಂಗ್ರಹಿಸಬಹುದಾಗಿದೆ. ಪಿಎಸಿ ವರದಿ ನೀಡುವಾಗ ಆಗುತ್ತಿರುವ ವಿಳಂಬಕ್ಕೆ ಇನ್ನೊಂದು ಕಾರಣ ಸಾವಿರಾರು ಪುಟಗಳ ಸಿಎಜಿ ವರದಿ. ಇದರ ಬದಲಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಮಹತ್ವದೆನಿಸಿದ ಪ್ರಕರಣಗಳ ಲೆಕ್ಕಪತ್ರಗಳ ವರದಿಯನ್ನಷ್ಟೇ ಸಿಎಜಿ ಸಲ್ಲಿಸಿದರೆ ಪಿಎಸಿ ಪರಿಶೀಲನೆಗೂ ಅನುಕೂಲವಾಗಬಹುದು ಎನ್ನುವ ಅಭಿಪ್ರಾಯ ಇದೆ.
ಪಿಎಸಿಯ ಕಾರ್ಯನಿರ್ವಹಣೆಯಲ್ಲಿನ ಮತ್ತೊಂದು ಸಮಸ್ಯೆ ವಿಳಂಬವಾಗಿ ಸಲ್ಲಿಸಲಾಗುವ ಲೆಕ್ಕಪತ್ರಗಳು. ಈಗ ವಿವಾದ ಸೃಷ್ಟಿಸಿರುವ 2ಜಿ ತರಂಗಾಂತರ ಹಗರಣ ನಡೆದಿದ್ದು 2007-2008ರ ಹಣಕಾಸು ವರ್ಷದಲ್ಲಿ. ಅಂದರೆ ಮೂರುವರ್ಷಗಳ ಹಿಂದಿನ ಲೆಕ್ಕಪತ್ರಗಳನ್ನು ಪಿಎಸಿ ಈಗ ಪರಿಶೀಲನೆ ನಡೆಸುತ್ತಿದೆ. ನಮ್ಮಲ್ಲಿನ ಪಿಎಸಿಗೆ ಬ್ರಿಟನ್ ಸಂಸತ್ ಮಾದರಿಯಾದರೂ ಅಲ್ಲಿನ ಎಲ್ಲ ನಿಯಮಾವಳಿಗಳನ್ನು ಇಲ್ಲಿ ಅಳವಡಿಸಲಾಗಿಲ್ಲ.

ಬ್ರಿಟನ್‌ನಲ್ಲಿ ಸರ್ಕಾರಿ ಇಲಾಖೆಗಳು ಪ್ರತಿವರ್ಷದ ಸೆಪ್ಟೆಂಬರ್ 30ರೊಳಗೆ ಲೆಕ್ಕಪತ್ರವನ್ನು ಸಿಎಜಿಗೆ ಸಲ್ಲಿಸುವುದು ಕಾನೂನು ಪ್ರಕಾರ ಕಡ್ಡಾಯ. ಮುಂದಿನ ಜನವರಿ ಅಂತ್ಯದೊಳಗೆ ದೃಢೀಕೃತ ಲೆಕ್ಕಪತ್ರವನ್ನು ಸಿಎಜಿ ಸಲ್ಲಿಸಬೇಕಾಗುತ್ತದೆ. ಆ ವರದಿಗಳನ್ನು ಎರಡು ತಿಂಗಳೊಳಗೆ ಪರಿಶೀಲನೆ ನಡೆಸಿ ಪಿಎಸಿ ತನ್ನ ವರದಿ ಸಲ್ಲಿಸಬೇಕೆಂಬ ನಿಯಮ ಇದೆ.
ಪಿಎಸಿಯ ಸುಧಾರಣೆ ನಡೆಯಬೇಕೆಂಬ ಕೂಗು ಬಹಳ ಕಾಲದಿಂದ ಕೇಳಿಬರುತ್ತಿದೆ. 
ಇದಕ್ಕೊಂದು ಸ್ಪಷ್ಟ ರೂಪು ನೀಡಿದ್ದು ನ್ಯಾಯಮೂರ್ತಿ ವೆಂಕಟಾಚಲಯ್ಯ ಅಧ್ಯಕ್ಷತೆಯ ಸಂವಿಧಾನ ಕಾರ್ಯನಿರ್ವಹಣೆಯ ಪುನರ್‌ಪರಿಶೀಲನೆಯ ರಾಷ್ಟ್ರೀಯ ಆಯೋಗ. ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯನ್ನು ಸಾಂವಿಧಾನಿಕ ಸಂಸ್ಥೆಯಾಗಿ ಪುನರ್‌ರಚಿಸಿ ಹಕ್ಕುಬಾಧ್ಯತೆಗಳನ್ನು ಸ್ಪಷ್ಟಪಡಿಸಬೇಕು, ಪಿಎಸಿಯ ಅಧಿಕಾರವಧಿಯನ್ನು ಲೋಕಸಭೆ ಮತ್ತು ವಿಧಾನಸಭೆಯ ರೀತಿಯಲ್ಲಿ ಐದು ವರ್ಷಗಳಿಗೆ ನಿಗದಿಗೊಳಿಸಬೇಕು ಹಾಗೂ ರಾಜ್ಯಸಭೆಯಲ್ಲಿರುವ ವ್ಯವಸ್ಥೆಯಂತೆ ಪ್ರತಿ ಎರಡು ವರ್ಷಗಳಿಗೊಮ್ಮೆ ಮೂರನೇ ಒಂದರಷ್ಟು ಸಮಿತಿ ಸದಸ್ಯರು ನಿವೃತ್ತರಾಗಿ ಹೊಸ ಸದಸ್ಯರ ನೇಮಕ ನಡೆಯಬೇಕು ಎಂದು ಆಯೋಗ ಶಿಫಾರಸು ಮಾಡಿದೆ.

ಇದರ ಜತೆಗೆ ಸರ್ಕಾರಿ ಇಲಾಖೆಗಳು ಧನವಿನಿಯೋಗ ಲೆಕ್ಕಪತ್ರಗಳನ್ನು ಸಂಸತ್ ಮತ್ತು ವಿಧಾನಮಂಡಲಗಳಿಗೆ ಹಣಕಾಸು ವರ್ಷದ ಅಂತ್ಯದೊಳಗೆ  ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು. ಒಂದೊಮ್ಮೆ ಬಜೆಟ್ ನಿಗದಿಪಡಿಸಿದ್ದ ಅನುದಾನದ ಮಿತಿ ಮೀರಿ ಖರ್ಚು ಮಾಡಿದ್ದರೆ ಅದಕ್ಕೆ ಆ ಹಣಕಾಸು ವರ್ಷದೊಳಗೆ ಅಂಗೀಕಾರ ಪಡೆಯಬೇಕು ಎಂಬ ಸಲಹೆಗಳು ಕೂಡಾ ಇವೆ. ಈ ರೀತಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಬಲವರ್ಧನೆ ನಡೆಸಬೇಕೆಂದು ಚರ್ಚೆ ನಡೆಯುತ್ತಿರುವಾಗಲೇ ಅದನ್ನು  ಇನ್ನಷ್ಟು ದುರ್ಬಲಗೊಳಿಸುವ ಪ್ರಯತ್ನ ಪ್ರಾರಂಭವಾಗಿದೆ. ಇದು ಸಂಚಲ್ಲದೆ ಮತ್ತೇನು?

Monday, April 25, 2011

ಕಲ್ಲೆಸೆದು ಕೆಸರು ಸಿಡಿಸಿಕೊಂಡವರು

‘ಕೆಸರಿಗೆ ಕಲ್ಲೆಸೆದು ಮುಖಕ್ಕೆ ಯಾಕೆ ಸಿಡಿಸಿಕೊಳ್ಳುತ್ತೀರಿ?’ ಎಂದು ಭ್ರಷ್ಟರ ವಿರುದ್ಧ ಹೋರಾಟಕ್ಕೆ ಹೊರಟ ಉತ್ಸಾಹಿಗಳಿಗೆ ಹಿರಿಯರು ಬುದ್ದಿ ಹೇಳುವುದುಂಟು. ಅಣ್ಣಾ ಹಜಾರೆ ಅವರಿಗೂ ಹಿರಿಯರು ಈ ಬುದ್ದಿ ಮಾತನ್ನು ಹಲವಾರು ಬಾರಿ ಹೇಳಿರಬಹದು.

ಅದಕ್ಕೆ ಕಿವಿಗೊಡದೆ ಅಣ್ಣಾ ಹಜಾರೆ ಅವರು ಭ್ರಷ್ಟಾಚಾರದ ವಿರುದ್ಧದ ತಮ್ಮ ಆಂದೋಲವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ. ಅವರ ಹೋರಾಟ ಒಂದು ರಾಜ್ಯಕ್ಕಷ್ಟೇ ಸೀಮಿತವಾ ಗಿತ್ತು. ಅಲ್ಲಿಯೂ  ಶರದ್ ಪವಾರ್ ಅವರಂತಹ ಬಲಿಷ್ಠ ರಾಜಕಾರಣಿಯನ್ನು ಎದುರು ಹಾಕಿಕೊಂಡು ಮುಖಕ್ಕೆ ಒಂದಷ್ಟು ಕೆಸರು ಸಿಡಿಸಿಕೊಂಡಿದ್ದರು.ಈಗ ನೂರಾರು ‘ಪವಾರ್’ಗಳನ್ನು ಎದುರು ಹಾಕಿಕೊಂಡಿದ್ದಾರೆ.
‘ಸಾಮ್ರಾಜ್ಯ’ ತಿರುಗಿ ಹೊಡೆದಿದೆ. ಭ್ರಷ್ಟತೆಯ ಕೆಸರಲ್ಲಿ ಮುಳುಗಿ ಹೋಗಿರುವ ರಾಜಕೀಯ ವ್ಯವಸ್ಥೆಯನ್ನು ತೊಳೆಯಲು ಹೊರಟಿರುವ ಅಣ್ಣಾ ಮತ್ತು ಬೆಂಬಲಿಗರ ಮುಖದ ಮೇಲೆಲ್ಲ ಈಗ ಸಿಡಿದ ಕೆಸರಿನ ಕಲೆಗಳು. ಹಿಂದಡಿ ಇಡುವಂತಿಲ್ಲ, ಮುಂದೆ ಹೋಗಲು ದಾರಿಗಳು ಬಹಳ ಇಲ್ಲ.
ಇವೆಲ್ಲ ಅನಿರೀಕ್ಷಿತವೇ? ಬಹುಶಃ ಅಲ್ಲ. ‘....ರಾಜಕೀಯ ಪಕ್ಷಗಳು  ಮೈಯೆಲ್ಲ ಕಣ್ಣಾಗಿ ಅಣ್ಣಾ ಹಜಾರೆ ಮತ್ತು ಬೆಂಬಲಿಗರ ತಪ್ಪು ಹೆಜ್ಜೆಗಾಗಿ ಕಾಯುತ್ತಾ ಕೂತ ಹಾಗೆ ಕಾಣುತ್ತಿದೆ....’ ಎಂದು ಎರಡು ವಾರಗಳ ಹಿಂದೆ ಇದೇ ಅಂಕಣದಲ್ಲಿ ಬರೆದದ್ದನ್ನು ಓದಿ ‘ನಿರಾಶವಾದ ಅತಿಯಾಯಿತು’ ಎಂದವರೂ ಇದ್ದರು.
ಆದರೆ ಈ ದೇಶದ ರಾಜಕೀಯ ವ್ಯವಸ್ಥೆಯನ್ನು ತುಸು ಹತ್ತಿರದಿಂದ ನೋಡಿದ ಯಾರೂ ಅಣ್ಣಾ ಹಜಾರೆ  ಎದುರು ಸರ್ಕಾರ ಸೋಲು ಒಪ್ಪಿಕೊಂಡಿತು ಎಂದು ಸಂಭ್ರಮಿಸುವ ಆತುರ ತೋರಿಸಲಾರರು.

ಜನ ಲೋಕಪಾಲ ಮಸೂದೆ ರಚನಾ ಸಮಿತಿಯಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳನ್ನು ಸೇರಿಸಿಕೊಳ್ಳಲು ಒಪ್ಪಿಕೊಂಡದ್ದನ್ನೇ ದೊಡ್ಡ ಗೆಲುವೆಂದು ಭ್ರಮಿಸಿ ಅಣ್ಣಾ ಹಜಾರೆ ಅವರ ಕೆಲ ಮುಗ್ಧ ಬೆಂಬಲಿಗರು ಕುಣಿದಾಡಿದ್ದರು.
ಆದರೆ ಆಗಲೇ ‘ಸಾಮ್ರಾಜ್ಯ’ ತನ್ನ ಹತಾರುಗಳನ್ನು ಸಾಣೆ ಹಿಡಿಯುತ್ತಿತ್ತು ಎಂದು ಅವರಿಗೆ ತಿಳಿದಿರಲಿಲ್ಲ. ಅಣ್ಣಾ ಹಜಾರೆ ಅವರ ಉಪವಾಸ ಸತ್ಯಾಗ್ರಹದ ಬಾಣದಿಂದ ಪ್ರಾಣ ಉಳಿಸಿಕೊಳ್ಳಲು ಸರ್ಕಾರ ತಲೆಯನ್ನು ಒಂದಿಷ್ಟು ಕೆಳಗೆ ತಗ್ಗಿಸಿತ್ತು ಅಷ್ಟೆ.  ಅದು ಪ್ರತಿ ದಾಳಿ ಪೂರ್ವದ ಸಮರ ತಂತ್ರ.
ಭಾರತದ ರಾಜಕಾರಣದಲ್ಲಿ ಕುಟುಂಬ ರಾಜಕೀಯ ಹಳೆಯ ವಿವಾದ. ಇದರಿಂದಾಗಿ ಈ ವಿವಾದದ ಸುತ್ತಲಿನ ಚರ್ಚೆ ಬಹಳ ಬೇಗ ಸಾರ್ವಜನಿಕರ ಗಮನ ಸೆಳೆಯುತ್ತದೆ.ಈಗ ವಿವಾದದ ಕೇಂದ್ರಬಿಂದುವಾಗಿರುವ ಹಿರಿಯ ವಕೀಲ ಶಾಂತಿಭೂಷಣ್ ಕೂಡಾ ಒಂದು ಕಾಲದಲ್ಲಿ ಇಂದಿರಾ ಗಾಂಧಿ ಅವರ ಕುಟುಂಬ ರಾಜಕೀಯದ ವಿರುದ್ಧ ದನಿ ಎತ್ತಿದವರು. ಇಷ್ಟೆಲ್ಲ ಗೊತ್ತಿದ್ದೂ ಅಣ್ಣಾ ಹಜಾರೆ ಆಗಲೇ ಒಂದು ತಪ್ಪು ಹೆಜ್ಜೆ ಇಟ್ಟಿದ್ದರು.

ಶಾಂತಿಭೂಷಣ್ ಮತ್ತು ಅವರ ಮಗ ಪ್ರಶಾಂತ್ ಭೂಷಣ್ ಅವರನ್ನು ಲೋಕಪಾಲ ಮಸೂದೆ ರಚನಾ ಸಮಿತಿಗೆ ಸೇರಿಸಿಬಿಟ್ಟಿದ್ದರು. ನೂರು ಕೋಟಿ ನಾಗರಿಕ ಸಮಾಜದ ಪ್ರತಿನಿಧಿಗಳಾಗಿ ನೇಮಕಗೊಂಡ ಐವರು ಸದಸ್ಯರಲ್ಲಿ ಒಂದೇ ಕುಟುಂಬದ ಇಬ್ಬರು. ಕಾರಣಗಳೇನೇ ಇರಬಹುದು, ಸಾರ್ವಜನಿಕವಾಗಿ ಇದನ್ನು ಸಮರ್ಥಿಸಿಕೊಳ್ಳುವುದು ಕಷ್ಟ. ಅಲ್ಲಿಂದ ಪ್ರಾರಂಭವಾಯಿತು ಪ್ರತಿ ದಾಳಿ.

ಇವೆಲ್ಲವೂ ಕೇವಲ ಆಡಳಿತಾರೂಢರ ಹುನ್ನಾರ ಎಂದು ತಿಳಿದುಕೊಳ್ಳಬೇಕಾಗಿಲ್ಲ.ಬಹಿರಂಗವಾಗಿ ಅಣ್ಣಾ ಹಜಾರೆ ಚಳವಳಿಗೆ ಬೆಂಬಲ ಘೋಷಿಸಿರುವ ವಿರೋಧ ಪಕ್ಷಗಳು ಕೂಡಾ ಅಂತರಂಗದಲ್ಲಿ ಅದನ್ನು ಮುರಿಯಲು ಗುಪ್ತ ಬೆಂಬಲ ನೀಡುತ್ತಿವೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಮತ ಪಡೆದು ಅಧಿಕಾರಕ್ಕೆ ಬಂದಿದ್ದ ಎನ್‌ಡಿಎ ಸರ್ಕಾರದ ಮೊದಲ ಆದ್ಯತೆಯೇ ಲೋಕಪಾಲ ಮಸೂದೆಗೆ ಕಾನೂನಿನ ರೂಪ ಕೊಡುವುದು ಆಗಬೇಕಾಗಿತ್ತು.

ಆದರೆ ಹಾಗಾಗಲಿಲ್ಲ. ಆಗಲೂ ಪ್ರಧಾನಿಯನ್ನು ಲೋಕಪಾಲರ ವ್ಯಾಪ್ತಿಯಿಂದ ಹೊರಗಿಡಬೇಕೆಂಬುದು ಬಿಜೆಪಿಯ ಅಧಿಕೃತ ನಿಲುವಾಗಿತ್ತು ಎನ್ನುವುದನ್ನು ಈಗ ಎಲ್ಲರೂ ಮರೆತುಬಿಟ್ಟಿದ್ದಾರೆ.
ಅಣ್ಣಾ ಹಜಾರೆ ವಿರುದ್ಧ ಮೊದಲು ಎರಗಿಬಿದ್ದವರು ಕೂಡಾ ಕಾಂಗ್ರೆಸ್ ಪಕ್ಷದ ಪ್ರಮುಖ ಟೀಕಾಕಾರರಾದ ಯೋಗಗುರು ಬಾಬಾ ರಾಮ್‌ದೇವ್. ಇವರಿಗೆ ಸಲಹೆಗಾರರಾಗಿರುವವರು ಬಿಜೆಪಿಯಿಂದ ಹೊರ ಹೋಗಿದ್ದರೂ ಸಂಘ ಪರಿವಾರದ ಜತೆ ಸಂಬಂಧ ಇಟ್ಟುಕೊಂಡಿರುವ ಗೋವಿಂದಾಚಾರ್ಯ ಮತ್ತು ಹವ್ಯಾಸಿ ಪತ್ರಕರ್ತ ಎಸ್.ಗುರುಮೂರ್ತಿ. ಎರಡು ದಿನಗಳ ಮೊದಲು ಹೋಗಿ ಅಣ್ಣಾ ಹಜಾರೆ ಅವರನ್ನು ಅಪ್ಪಿಕೊಂಡಿದ್ದ ರಾಮ್‌ದೇವ್ ಯಾಕೆ ತಿರುಗಿಬಿದ್ದರು ಎನ್ನುವುದಕ್ಕೂ ಹಿನ್ನೆಲೆ ಇದೆ.
ಮೊದಲನೆಯದಾಗಿ ರಾಜಕೀಯ ಪಕ್ಷ ಕಟ್ಟಲು ಹೊರಟಿದ್ದ ರಾಮ್‌ದೇವ್ ಅವರ ಪ್ರಯತ್ನಕ್ಕೆ ಅಣ್ಣಾ ಹಜಾರೆ ಅವರ ದಿಢೀರ್ ರಂಗಪ್ರವೇಶದಿಂದಾಗಿ ಹಿನ್ನಡೆಯಾಗಿದೆ. ಕಳೆದೆರಡು ವಾರಗಳಲ್ಲಿ ಅವರ ದನಿ ಬದಲಾಗಿರುವುದನ್ನು ಗಮನಿಸಬಹುದು.

‘ಹೊಸ ರಾಜಕೀಯ ಪಕ್ಷ ಕಟ್ಟುವುದಿಲ್ಲ, ಈಗಿರುವ ಪಕ್ಷಗಳಿಂದಲೇ ಒಳ್ಳೆಯ ಕೆಲಸ ಮಾಡಿಸಲು ಜನಬಲದ ಮೂಲಕ ಒತ್ತಡ ಹಾಕುತ್ತೇವೆ’ ಎಂದು ಯೋಗಗುರು ಹೇಳುತ್ತಿದ್ದಾರೆ. ಗೋವಿಂದಾಚಾರ್ಯರ ಶಿಷ್ಯೆ ಉಮಾಭಾರತಿ ಅವರನ್ನು ಅಣ್ಣಾ ಹಜಾರೆ ಬೆಂಬಲಿಗರು ಹತ್ತಿರಕ್ಕೆ ಬಿಟ್ಟು ಕೊಡದಿರುವುದು ಕೂಡಾ ರಾಮ್‌ದೇವ್ ಅಸಮಾಧಾನಕ್ಕೆ ಕಾರಣ ಆಗಿರಬಹುದು.
ಬಾಬಾ ರಾಮ್‌ದೇವ್ ಅವರು ನೇಪಥ್ಯಕ್ಕೆ ಸರಿಯುತ್ತಿದ್ದಂತೆಯೇ ಇಂತಹ ಆಟಗಳಲ್ಲಿ ಪಳಗಿರುವ ಅಮರ್ ಸಿಂಗ್ ಎಂಬ ರಾಜಕೀಯ ದಲ್ಲಾಳಿಯ ಪ್ರವೇಶವಾಗಿದೆ. ಇದು ಕೂಡಾ ರಾಜಕೀಯ ಸಮರದ ಹಳೆಯ ತಂತ್ರ. ಯುದ್ಧಭೂಮಿಯಲ್ಲಿ ಭೀಷ್ಮಾಚಾರ್ಯರ ಎದುರು ಶಿಖಂಡಿಯನ್ನು ತಂದು ನಿಲ್ಲಿಸಿದ ಹಾಗೆ.
ಅಮರ್‌ಸಿಂಗ್ ಅವರಿಗೆ ಶಾಂತಿಭೂಷಣ್ ಬಗ್ಗೆ ಮೊದಲೇ ಹಳೆಯ ದ್ವೇಷ ಇತ್ತು. ಇದಕ್ಕಿಂತಲೂ ಮಿಗಿಲಾಗಿ ಮುಲಾಯಂ ಸಿಂಗ್ ಕೈಬಿಟ್ಟ ನಂತರ ಮೂಲೆಗುಂಪಾಗಿದ್ದ ಅವರಿಗೆ ರಾಜಕೀಯವಾಗಿ ಜೀವದಾನ ಬೇಕಾಗಿತ್ತು. ಉತ್ತರಪ್ರದೇಶದಲ್ಲಿ ಕಾಲೂರಲು ಪ್ರಯತ್ನಿಸುತ್ತಲೇ ಇರುವ ಕಾಂಗ್ರೆಸ್ ಪಕ್ಷಕ್ಕೆ ಮಾಯಾವತಿ ಮತ್ತು ಮುಲಾಯಂ ಸಿಂಗ್ ಅವರನ್ನು ಎದುರು ಹಾಕಿಕೊಂಡಿರುವ ಜತೆಗೆ ಠಾಕೂರ್ ಸಮುದಾಯದ ಮತಗಳನ್ನು ಸೆಳೆಯಬಲ್ಲ ನಾಯಕನೊಬ್ಬ ಬೇಕಿತ್ತು.

ಇವೆಲ್ಲವೂ ಒಟ್ಟಾಗಿ ಅಮರ್‌ಸಿಂಗ್ ಕಾಂಗ್ರೆಸ್ ನಾಯಕರ ಕೈ ದಾಳವಾಗಿ ಬಿಟ್ಟರು.ಅಮರ್‌ಸಿಂಗ್ ಮೊದಲು ‘ಸಿಡಿ’ಯೊಂದನ್ನು ಹೊರಹಾಕಿದರು. ಅದರಲ್ಲಿ ಶಾಂತಿಭೂಷಣ್ ಅವರು ಮಗನ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಒಲಿಸಿಕೊಳ್ಳುವ ಭರವಸೆ ನೀಡಿರುವ ಸಂಭಾಷಣೆ ಇದೆ.
ಅದರ ಬೆನ್ನಲ್ಲೇ ಉತ್ತರಪ್ರದೇಶದ ಮಾಯಾವತಿ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಪಡೆದಿರುವ ಪ್ರಕರಣ ಬಯಲಾಗಿದೆ. ಈಗ ಆಸ್ತಿ ಖರೀದಿಯಲ್ಲಿ ಸರ್ಕಾರಕ್ಕೆ ಮುದ್ರಾಂಕ ಶುಲ್ಕ ವಂಚಿಸಿರುವ ಆರೋಪ ಎದುರಾಗಿದೆ.
ಹಿರಿಯ ವಕೀಲರಾದ ಶಾಂತಿಭೂಷಣ್ ಮತ್ತು ಮಕ್ಕಳು ಕೇವಲ ದುಡ್ಡು ಸಂಪಾದನೆಗಾಗಿಯೇ ವಕೀಲಿ ವೃತ್ತಿ ಮಾಡಿಕೊಂಡವರಲ್ಲ. ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನೆತ್ತಿಕೊಂಡು ಕಾನೂನು ಹೋರಾಟ ನಡೆಸುತ್ತಾ ಬಂದವರು.
ನ್ಯಾಯಮೂರ್ತಿಗಳ ಭ್ರಷ್ಟಾಚಾರದ ವಿರುದ್ಧವೂ ದನಿ ಎತ್ತಿ ಅಪಾಯವನ್ನು ಮೈಮೇಲೆ ಎಳೆದುಕೊಂಡವರು. ಅವರು ಹೇಳುತ್ತಿರುವಂತೆ ಅಮರ್‌ಸಿಂಗ್ ಸಿಡಿ ನಕಲಿಯೂ ಇರಬಹುದು, ಉತ್ತರಪ್ರದೇಶ ದಲ್ಲಿ ಪಡೆದಿರುವ ಜಮೀನು ಮಾರುಕಟ್ಟೆ ಬೆಲೆಗೆ ಖರೀದಿಸಿರಬಹುದು. ಮುದ್ರಾಂಕ ಶುಲ್ಕ ವಂಚಿಸದೆಯೂ ಇರಬಹುದು.
ಆದರೆ ಯಾವುದೇ ಚುನಾವಣೆ ಇಲ್ಲದೆ ನೂರು ಕೋಟಿ ನಾಗರಿಕರ ಪ್ರತಿನಿಧಿಗಳಾಗಿ ಲೋಕಪಾಲ ರಚನಾ ಸಮಿತಿಯ ಸದಸ್ಯರಾಗಿ ನೇಮಕ ಗೊಂಡವರ ಮೇಲೆ ಈ ರೀತಿಯ ಸಂಶಯದ ನೆರಳೂ ಚಾಚಬಾರದಲ್ಲವೇ? ಯಾಕೆಂದರೆ ಅಣ್ಣಾ ಹಜಾರೆ ಅವರ ಹೋರಾಟ ಕಾನೂನಿ ನದ್ದಲ್ಲ, ಅದು ನೈತಿಕತೆಯದ್ದು.

ಶರದ್‌ಪವಾರ್ ಸೇರಿದಂತೆ ಅಣ್ಣಾ ಹಜಾರೆ ಅವರು ಗುರಿ ಇಟ್ಟಿರುವ ರಾಜಕಾರಣಿಗಳು ಹೊಂದಿರುವ ಕೋಟ್ಯಂತರ ರೂಪಾಯಿ ಮೌಲ್ಯದ  ಆಸ್ತಿ ಅಕ್ರಮವಾಗಿ ಗಳಿಸಿದ್ದೆಂದು ಎಲ್ಲಿ ಸಾಬೀತಾಗಿದೆ? ಲೋಕಪಾಲರ ನೇಮಕ ಕೂಡಾ ಭ್ರಷ್ಟರ ವಿರುದ್ಧದ ನೈತಿಕ ಹೋರಾಟದ ಒಂದು ಭಾಗ ಅಲ್ಲವೇ?
ಶಾಂತಿಭೂಷಣ್ ಮತ್ತು ಪ್ರಶಾಂತ್ ಭೂಷಣ್ ನಂತರ ಕೆಸರೆರಚಾಟಕ್ಕೆ ಬಲಿಯಾದವರು ಕರ್ನಾಟಕದ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ. ಕರ್ನಾಟಕದಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸಲು ಲೋಕಾಯುಕ್ತರಿಗೆ ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ಸಿಂಗ್ ಕೆಣಕಿದ್ದೇ ತಡ, ನ್ಯಾ.ಹೆಗ್ಡೆ ಅವರು ಕೆಂಡಾಮಂಡಲವಾಗಿಬಿಟ್ಟರು.
ಇದೇ ಅಭಿಪ್ರಾಯವನ್ನು ಇನ್ನೊಂದು ರೀತಿಯಲ್ಲಿ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯಿಲಿ ಅವರು ಕೆಲವು ವಾರಗಳ ಹಿಂದೆ ಹೇಳಿದ್ದಾಗಲೂ ವಿವಾದ ಸೃಷ್ಟಿಯಾಗಿತ್ತು. ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ವೈಯಕ್ತಿಕವಾದ ಪ್ರಾಮಾಣಿಕತೆಯನ್ನಾಗಲಿ, ಕ್ಷಮತೆಯನ್ನಾಗಲಿ ಯಾರೂ ಪ್ರಶ್ನಿಸುವ ಹಾಗಿಲ್ಲ.
ಹಾಗಿದ್ದರೂ ಯಾಕೆ ಅವರನ್ನು ಕೆಣಕುವಂತಹ ಚುಚ್ಚುಮಾತುಗಳು ತೂರಿಬರುತ್ತಿವೆ? ಇದಕ್ಕೆ ಸ್ವಲ್ಪಮಟ್ಟಿಗೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರೂ ಕಾರಣ.ರಾಜ್ಯ ಸರ್ಕಾರದ ಅಸಹಕಾರದಿಂದ ನೊಂದು ಹತ್ತು ತಿಂಗಳ ಹಿಂದೆ ಲೋಕಾಯುಕ್ತ ಹುದ್ದೆಗೆ ರಾಜೀನಾಮೆ ನೀಡಿದಾಗ ನ್ಯಾ. ಸಂತೋಷ್‌ಹೆಗ್ಡೆ ದೇಶದ ಗಮನ ಸೆಳೆದಿದ್ದರು. ಅದು ಅವರ ಜನಪ್ರಿಯತೆಯ ಉತ್ತುಂಗ ಸ್ಥಿತಿ.

ಆದರೆ ಕರ್ನಾಟಕದ ಜನತೆ ಮಾತ್ರವಲ್ಲ, ಇಡೀ ದೇಶದ ಪ್ರಜ್ಞಾವಂತರು ರಾಜೀನಾಮೆ ಹಿಂತೆಗೆದುಕೊಳ್ಳಲು ಒತ್ತಾಯಿಸಿದಾಗಲೂ ಜಗ್ಗದ ಅವರು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ಮಾತಿಗೆ ಮಣಿದು ರಾಜೀನಾಮೆ ಹಿಂತೆಗೆದುಕೊಂಡರು.
ಮರುಗಳಿಗೆಯಿಂದ ಅವರ ಜನಪ್ರಿಯತೆ ಕುಸಿಯತೊಡಗಿತ್ತು. ಅಲ್ಲಿಯ ವರೆಗೆ ಲೋಕಾಯುಕ್ತರ ಬಗ್ಗೆ ಮಾತನಾಡಲು ಹಿಂಜರಿಯುತ್ತಿದ್ದವರೂ ನಂತರದ ದಿನಗಳಲ್ಲಿ ನಾಲಿಗೆ ಸಡಿಲ ಬಿಡತೊಡಗಿದ್ದರು. ತಮ್ಮನ್ನು ಕೆಣಕಲೆಂದೇ ಇಂತಹ ಚುಚ್ಚುಮಾತುಗಳನ್ನು ತೂರಿಬಿಡಲಾಗುತ್ತಿದೆ ಎಂದು ಗೊತ್ತಿದ್ದರೂ ನ್ಯಾ.ಸಂತೋಷ್‌ಹೆಗ್ಡೆ ಅವುಗಳಿಗೆ ಭಾವಾವೇಶದಿಂದ ಪ್ರತಿಕ್ರಿಯಿಸುತ್ತಾ ಬಂದಿದ್ದಾರೆ.
ದಿಗ್ವಿಜಯ್‌ಸಿಂಗ್ ಟೀಕೆಗೆ ಪ್ರತಿಕ್ರಿಯಿಸಿದ ರೀತಿಯಲ್ಲಿಯೂ ಈ ಭಾವಾವೇಶ ಇತ್ತು.ಒಮ್ಮೊಮ್ಮೆ ಸಾತ್ವಿಕರ ಮೌನ ಕೂಡಾ ಅವರ ಟೀಕಾಕಾರರ ಬಾಯಿಮುಚ್ಚಿಸುವಷ್ಟು ಪರಿಣಾಮಕಾರಿಯಾಗಿರುತ್ತದೆ ಎಂಬುದು ಲೋಕಾಯುಕ್ತರಿಗೆ ಯಾಕೋ ಮನವರಿಕೆಯಾದಂತಿಲ್ಲ.
ಇವರನ್ನೆಲ್ಲ ಕಟ್ಟಿಕೊಂಡಿರುವ ಅಣ್ಣಾ ಹಜಾರೆ ಅವರೂ ಆರೋಪ ಮುಕ್ತರಾಗಿಲ್ಲ. ಅಣ್ಣಾ ಹಜಾರೆ ಅಧ್ಯಕ್ಷರಾಗಿರುವ ಹಿಂದ್ ಸ್ವರಾಜ್ ಟ್ರಸ್ಟ್‌ನ ಖಾತೆಯಲ್ಲಿದ್ದ 2.2 ಲಕ್ಷ ರೂಪಾಯಿಗಳನ್ನು ಅವರ ಹುಟ್ಟುಹಬ್ಬ ಆಚರಣೆಗೆ ಬಳಸಲಾಗಿತ್ತಂತೆ. ಈ ಬಗ್ಗೆ 2005ರಲ್ಲಿ ತನಿಖೆ ಮಾಡಿದ ಸಾವಂತ್ ಆಯೋಗ ಈ ಆರೋಪ ನಿಜ ಎಂದು ವರದಿ ನೀಡಿದೆ.
ರಾಜಕಾರಣಿಗಳು, ಉದ್ಯಮಿಗಳು, ಚಿತ್ರತಾರೆಯರು ತಮ್ಮ ಹುಟ್ಟುಹಬ್ಬದ ಆಚರಣೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿರುವಾಗ ಈ ಎರಡು ಲಕ್ಷ ರೂಪಾಯಿ ಯಾವ ಲೆಕ್ಕದ್ದು ಎಂದು ಪ್ರಶ್ನಿಸಬಹುದು. ಖರ್ಚಾಗಿರುವ ಹಣವನ್ನು ಅಣ್ಣಾ ಹಜಾರೆ ಸ್ವಂತಕ್ಕಾಗಿ ಬಳಸಿಕೊಳ್ಳಲಿಲ್ಲ ಎಂದು ಸಮರ್ಥಿಸಿಕೊಳ್ಳಲೂ ಬಹುದು.
ಆದರೆ ಅಣ್ಣಾ ಹಜಾರೆ ಅವರಲ್ಲಿ ಗಾಂಧೀಜಿಯನ್ನು ಕಾಣಬಯಸುವ ಕೋಟ್ಯಂತರ ಜನರ ಕಣ್ಣಿನಲ್ಲಿ ಇಂತಹ ಸಣ್ಣ ತಪ್ಪುಗಳು ಭ್ರಮನಿರಸನವನ್ನು ಉಂಟುಮಾಡಬಲ್ಲದು. ಯಾಕೆಂದರೆ ಹಣಕಾಸಿನ ವಿಷಯದಲ್ಲಿ ಗಾಂಧೀಜಿ ಇಂತಹ ಸಣ್ಣ ತಪ್ಪುಗಳನ್ನೂ ಮಾಡಿರಲಿಲ್ಲ.

ಸುಮಾರು 30 ವರ್ಷಗಳ ಕಾಲ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ್ದ ಮತ್ತು ಇದಕ್ಕಾಗಿ ಕೋಟ್ಯಂತರ ರೂಪಾಯಿ ಸಾರ್ವಜನಿಕ ದೇಣಿಗೆಯನ್ನು ಸಂಗ್ರಹಿಸಿದ್ದ ಗಾಂಧೀಜಿ ವಿರುದ್ಧ ಯಾರೂ ಹಣ ದುರುಪಯೋಗದ ಸಣ್ಣ ಸೊಲ್ಲು ಕೂಡಾ ಎತ್ತಿರಲಿಲ್ಲ.

ಇದನ್ನು ನೋಡಿಯೇ ಆಲ್‌ಬರ್ಟ್ ಐನ್‌ಸ್ಟೀನ್ ‘ರಕ್ತ ಮೂಳೆ ಮಾಂಸಗಳನ್ನು ಹೊಂದಿದ್ದ ಇಂತಹ ವ್ಯಕ್ತಿ ಜಗತ್ತಿನಲ್ಲಿ ಸಂಚರಿಸಿದ್ದನೇ, ಬದುಕಿದ್ದನೇ ಎಂದು ಮುಂಬರುವ ಪೀಳಿಗೆ ಸಂಶಯಪಡಬಹುದು’ ಎಂದು ಉದ್ಗರಿಸಿದ್ದು.

ಭ್ರಷ್ಟಾಚಾರ ನಿರ್ಮೂಲನೆ ಈಗಲೂ ಸಾಧ್ಯ. ಅದಕ್ಕಾಗಿ ಮಹಾತ್ಮ ಗಾಂಧೀಜಿಯವರಂತಹ ನಾಯಕರ ಅಗತ್ಯ ಇದೆ. ಅವರನ್ನು ಎಲ್ಲಿಂದ ತರುವುದು?

Monday, April 18, 2011

ಗಾಂಧಿ,ಜೆಪಿ ಆಗುವ ಕಷ್ಟದ ಕೆಲಸ

‘ಈಗಿನ ಸನ್ನಿವೇಶದಲ್ಲಿ ಗಾಂಧೀಜಿ ಇದ್ದಿದ್ದರೆ ಅವರು ಸಾರ್ವಜನಿಕ ಜೀವನವನ್ನು ತ್ಯಜಿಸಬೇಕಾಗುತ್ತಿತ್ತು ಇಲ್ಲವೇ ಅವರೂ ಭ್ರಷ್ಟರಾಗುತ್ತಿದ್ದರು’ ಎಂದು ರಾಜ್ಯ ಜೆಡಿ (ಎಸ್) ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದಾಕ್ಷಣ ಅವರ ಮೇಲೆ ‘ಗಾಂಧಿ ಅಭಿಮಾನಿ’ಗಳೆಲ್ಲ ಮುಗಿಬಿದ್ದುಬಿಟ್ಟರು.
ಈ ರೀತಿ ದಾಳಿ ಮಾಡಿದವರಲ್ಲಿ ಗಾಂಧೀಜಿ ಅಭಿಮಾನಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕುಮಾರಸ್ವಾಮಿಗಳ  ದ್ವೇಷಿಗಳು ಇದ್ದಿರಬಹುದು. ಒಮ್ಮೊಮ್ಮೆ ಸಂದೇಶವಾಹಕನ ಚಾರಿತ್ರ್ಯ, ಸಂದೇಶದ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗುತ್ತದೆ. ಕುಮಾರಸ್ವಾಮಿಯವರು ಹೇಳಿದ್ದರಲ್ಲಿ ಅರ್ಧ ಸತ್ಯ ಇತ್ತು, ಇದಕ್ಕೆ ಗಾಂಧೀಜಿ ಬಗೆಗಿನ ಅವರ ಅರ್ಧಂಬರ್ಧ ತಿಳುವಳಿಕೆ ಕಾರಣ ಇರಬಹುದು.
ಗಾಂಧೀಜಿ ಈಗಿನ ಚುನಾವಣಾ ರಾಜಕೀಯಕ್ಕೆ ಪ್ರವೇಶ ಮಾಡಿ ಅಲ್ಲಿಯೇ ಉಳಿಯಬೇಕೆಂದು ಬಯಸಿದ್ದರೆ ಭ್ರಷ್ಟರಾಗಬೇಕಾಗುತ್ತಿತ್ತೋ ಏನೋ? ಅಷ್ಟರ ಮಟ್ಟಿಗೆ ಕುಮಾರಸ್ವಾಮಿ ಹೇಳಿರುವುದು ಸತ್ಯ. ಆದರೆ ಗಾಂಧೀಜಿ ಈಗ ನಮ್ಮ ನಡುವೆ ಇದ್ದಿದ್ದರೂ ಖಂಡಿತ ಈಗಿನ ಚುನಾವಣಾ ರಾಜಕೀಯಕ್ಕೆ ಪ್ರವೇಶ ಮಾಡುತ್ತಿರಲಿಲ್ಲ. ಹಾಗೆಯೇ ಅವರು ಸಾರ್ವಜನಿಕ ಜೀವನವನ್ನು ತ್ಯಜಿಸಿ ಓಡಿಹೋಗುತ್ತಲೂ ಇರಲಿಲ್ಲ.
ಇದು ನಾವೆಲ್ಲ ಅರ್ಥಮಾಡಿಕೊಳ್ಳಬೇಕಾದ ಪೂರ್ಣ ಸತ್ಯ. ಇಡೀ ದೇಶ ಸ್ವಾತಂತ್ರ್ಯ ಪಡೆದ ಸಂಭ್ರಮದಲ್ಲಿದ್ದಾಗ ಮತ್ತು ತಮ್ಮ ಅನುಯಾಯಿಗಳೆಲ್ಲ ಅಧಿಕಾರದ ಕುರ್ಚಿ ಹಿಡಿಯುವ ತರಾತುರಿಯಲ್ಲಿದ್ದಾಗ ಗಾಂಧೀಜಿಯವರು ನೌಕಾಲಿಯಲ್ಲಿ ಭುಗಿಲೆದ್ದಿದ್ದ ಕೋಮುದ್ವೇಷದ ಬೆಂಕಿಯನ್ನು ಶಮನಮಾಡಲು ಏಕಾಂಗಿಯಾಗಿ  ಹೆಣಗಾಡುತ್ತಿದ್ದರು. ಆಗ ದೆಹಲಿಯಲ್ಲಿದ್ದ ಗಾಂಧಿ ಅನುಯಾಯಿಗಳ ಪಾಲಿಗೆ ಸರ್ಕಾರ ರಚನೆಯೇ ರಾಜಕೀಯ ಆಗಿದ್ದರೆ, ಗಾಂಧೀಜಿ ಅವರಿಗೆ ಒಡೆದ ಮನಸ್ಸುಗಳನ್ನು ಒಗ್ಗೂಡಿಸಿ ಕೋಮುಸೌಹಾರ್ದತೆಯನ್ನು ಸ್ಥಾಪಿಸುವುದು ರಾಜಕೀಯ ಆಗಿತ್ತು. ಗಾಂಧೀಜಿ ಈಗ ಬದುಕಿದ್ದರೂ ಅವರು ಸಂಸತ್‌ನೊಳಗೆ ಪ್ರವೇಶಿಸಿ ರಾಜಕೀಯ ಮಾಡುತ್ತಿರಲಿಲ್ಲ, ಅಲ್ಲಿಗೆ ಸಮೀಪದಲ್ಲಿಯೇ ಇರುವ ಜಂತರ್‌ಮಂತರ್‌ನ ಸತ್ಯಾಗ್ರಹದ ಶಿಬಿರದಲ್ಲಿ ಕುಳಿತು ರಾಜಕೀಯ ಮಾಡುತ್ತಿದ್ದರು.
ಸಾರ್ವಜನಿಕ ಜೀವನ, ಚುನಾವಣಾ ರಾಜಕೀಯ, ಹೋರಾಟದ ರಾಜಕೀಯ, ಚಳುವಳಿ, ಸತ್ಯಾಗ್ರಹಗಳೆಲ್ಲವನ್ನೂ ಒಂದೇ ಬಗೆಯ ‘ರಾಜಕೀಯ’ ಎಂದು ತಿಳಿದುಕೊಂಡಿರುವುದೇ ಕುಮಾರಸ್ವಾಮಿ ಮತ್ತು ಅವರಂತಹವರ ಗೊಂದಲಕಾರಿ ಹೇಳಿಕೆಗಳಿಗೆ ಕಾರಣ. ಅವರು ಮಾತ್ರವಲ್ಲ ಲಾಲ್‌ಕೃಷ್ಣ ಅಡ್ವಾಣಿಯವರಂತಹ ಅನುಭವಿ ರಾಜಕಾರಣಿ ಕೂಡಾ ಹಜಾರೆ ಅವರ ಚಳುವಳಿ ರಾಜಕೀಯದ ಬಗ್ಗೆ ದ್ವೇಷ-ಸಿನಿಕತನ ಹುಟ್ಟಿಸುತ್ತಿದೆಯೇನೋ ಎಂದು ಆತಂಕ ವ್ಯಕ್ತಪಡಿಸುವಷ್ಟು ಮಟ್ಟಿಗೆ ಗೊಂದಲಕ್ಕೆಡಾಗಿದ್ದಾರೆ. ಇದರ ಜತೆಗೆ ಅಣ್ಣಾ ಹಜಾರೆ ಅವರು ರಾಜಕೀಯ ಪ್ರವೇಶ ಮಾಡಬಾರದೆಂದು ಹೇಳುವುದು ಎಷ್ಟು ಸರಿ?
ಹಾಗಿದ್ದರೆ ಪ್ರಾಮಾಣಿಕರೆಲ್ಲರೂ ರಾಜಕೀಯವನ್ನು ಭ್ರಷ್ಟರಿಗೆ ಬಿಟ್ಟುಕೊಟ್ಟು ಮೂಕಪ್ರೇಕ್ಷಕರಾಗಬೇಕೇ? ಪ್ರಜಾಪ್ರಭುತ್ವದಲ್ಲಿ ರಾಜಕೀಯ ಚಟುವಟಿಕೆಯ ಮೂಲಕವೇ ಬದಲಾವಣೆ ತರಬೇಕಲ್ಲವೇ? ಎಂಬೀತ್ಯಾದಿ ಪ್ರಶ್ನೆಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಇವು ರಾಜಕೀಯವನ್ನು ತೀರಾ ಸರಳೀಕರಿಸಿ ನೋಡುವ ಮುಗ್ಧಪ್ರಶ್ನೆಗಳು ಎಂದು ತಳ್ಳಿಹಾಕಬಹುದು. ಆದರೆ ಈ ರೀತಿ ಪ್ರಶ್ನಿಸುತ್ತಿರುವವರಲ್ಲಿ ಹೆಚ್ಚಿನವರು ಯುವಕರು, ಭ್ರಷ್ಟಾಚಾರವನ್ನು ಹೊಡೆದೋಡಿಸಬೇಕು ಎಂಬ ರೋಷದ ಜತೆಯಲ್ಲಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ರಾಜಕೀಯ ಬದಲಾವಣೆ ಮಾಡಬೇಕೆಂಬ ಹಂಬಲ ಉಳ್ಳ ಅಮಾಯಕರು. ಆದ್ದರಿಂದಲೇ ಈ ಪ್ರತಿಕ್ರಿಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಈ ಗೊಂದಲಗಳಿಗೆ ಮೂಲ ಕಾರಣ ಏನೆಂದರೆ ರಾಜಕೀಯ ಎಂದಾಕ್ಷಣ ನಮ್ಮ ಕಣ್ಣೆದುರು ಮೂಡುವ ಶಾಸಕರು,ಸಂಸದರು, ಸ್ಥಳೀಯ ಸಂಸ್ಥೆಗಳ ಸದಸ್ಯರು ಇಲ್ಲವೇ ರಾಜಕೀಯ ಪಕ್ಷಗಳ ಕಾರ್ಯಕರ್ತರ ಚಿತ್ರಗಳು. ರಾಜಕೀಯ ಎಂದಾಕ್ಷಣ ಯಾರ ಕಣ್ಣಮುಂದೆಯೂ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮಗಾಂಧೀಜಿ ಇಲ್ಲವೇ ಆ ಸ್ವಾತಂತ್ರ್ಯ ಗಂಡಾಂತರ ಸ್ಥಿತಿಯಲ್ಲಿದ್ದಾಗ ಅದನ್ನು ರಕ್ಷಿಸಿಕೊಟ್ಟ ಜಯಪ್ರಕಾಶ್ ನಾರಾಯಣ್ ಚಿತ್ರಗಳು ಕಣ್ಣಮುಂದೆ ಮೂಡುವುದಿಲ್ಲ. ಆದರೆ ಈ ಇಬ್ಬರೂ ನಾಯಕರು ದೇಶ ಕಂಡ ಅತ್ಯಂತ ಬುದ್ದಿವಂತ ಮತ್ತು ಯಶಸ್ವಿ ರಾಜಕಾರಣಿಗಳು ಎನ್ನುವುದನ್ನು ಮರೆಯಬಾರದು.
ಗಾಂಧೀಜಿ ರಾಜಕೀಯ ಮಾಡಿರಲಿಲ್ಲವೇ? ಸ್ವಾತಂತ್ರ್ಯಹೋರಾಟ ಎನ್ನುವುದು ರಾಜಕೀಯ ಚಟುವಟಿಕೆಯಲ್ಲದೆ ಮತ್ತೇನು? ಆದರೆ ಅವರು ಚುನಾವಣಾ ರಾಜಕೀಯದಲ್ಲಿ ತೊಡಗಿಸಿಕೊಂಡಿರಲಿಲ್ಲ. ಬಯಸಿದ್ದರೆ ದೇಶದ ಪ್ರಧಾನಿಯಾಗಲು ಗಾಂಧೀಜಿಯವರಿಗೇನು  ಸಾಧ್ಯ ಇರಲಿಲ್ಲವೇ? ಗಾಂಧೀಜಿಯವರಿಗೆ ಚುನಾವಣಾ ರಾಜಕೀಯದ ಶಕ್ತಿ-ದೌರ್ಬಲ್ಯಗಳು ಮಾತ್ರವಲ್ಲ ಅದರ ಇತಿಮಿತಿಯೂ ತಿಳಿದಿತ್ತು. ಆದ್ದರಿಂದಲೇ ಅವರು ಅದರಿಂದ ದೂರ ಇದ್ದರು ಮತ್ತು ಜನರಿಗೆ ಹತ್ತಿರವಾಗಿದ್ದರು. ಅಣ್ಣಾ ಹಜಾರೆಯವರು ಮಾಡಬಹುದಾದ ರಾಜಕೀಯ ಇದು.
ಜಯಪ್ರಕಾಶ್ ನಾರಾಯಣ್ ಕೂಡಾ ಗಾಂಧೀಜಿ ಮಾದರಿಯ ರಾಜಕೀಯವನ್ನೇ ನಡೆಸಿದವರು. ಸ್ವತಂತ್ರಭಾರತದಲ್ಲಿ ಗಾಂಧೀಜಿಯವರ ನಿಜವಾದ ಉತ್ತರಾಧಿಕಾರಿಯಂತೆ ನಡೆದುಕೊಂಡವರು ಜೆಪಿ. ಗಾಂಧೀಜಿಯವರಿಗೆ ನೆಹರೂ ಬಗೆಗಿನ ದೌರ್ಬಲ್ಯ ಇಲ್ಲದೆ ಹೋಗಿದ್ದರೆ ರಾಮಮನೋಹರ ಲೋಹಿಯಾ ಇಲ್ಲವೇ ಜಯಪ್ರಕಾಶ್ ನಾರಾಯಣ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಮಾಡುತ್ತಿದ್ದರೋ ಏನೋ? ಗಾಂಧೀಜಿಯವರಂತೆ ಜೆಪಿಯವರೂ ಮನಸ್ಸು ಮಾಡಿದ್ದರೆ ದೇಶದ ಪ್ರಧಾನಿಯಾಗಬಹುದಿತ್ತು. ಎರಡು ಬಾರಿ ಅಂತಹ ಅವಕಾಶ ಒದಗಿಬಂದಿತ್ತು.
ಮೊದಲನೆಯ ಬಾರಿ ಗಾಂಧೀಜಿಯವರೇ  ಈ ಆಹ್ಹಾನ ನೀಡಿದ್ದರು. ಇನ್ನೇನು ಸ್ವಾತಂತ್ರ್ಯ ಘೋಷಣೆಯಾಗಲಿದೆ ಎನ್ನುವಾಗ ಗಾಂಧಿ ಅನುಯಾಯಿಗಳೆಲ್ಲ ಸಂಪುಟ ಸೇರುವ ಹುರುಪಲಿದ್ದರು. ಆಗ ಗಾಂಧೀಜಿ ಜೆಪಿಯವರನ್ನು ಕರೆದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವಂತೆ ಸಲಹೆ ನೀಡಿದ್ದರು. ಇದಕ್ಕೆ ನೆಹರೂ ಮತ್ತು ಸಂಗಡಿಗರ ವಿರೋಧ ಇದ್ದರೂ ಜೆಪಿ ಒಪ್ಪಿಕೊಂಡಿದ್ದರೆ ದೇಶದ ಇತಿಹಾಸವೇ ಬೇರೆ ದಾರಿ ಹಿಡಿಯುತ್ತಿತ್ತು.  ನೆಹರೂ ನಂತರವಾದರೂ ಅವರು ಪ್ರಧಾನಿಯಾಗುತ್ತಿದ್ದರು.
ಆ ಅವಕಾಶ ಮತ್ತೆ 1964ರಲ್ಲಿ ಜೆಪಿ ಮನೆಬಾಗಿಲು ಬಡಿದಿತ್ತು. ಅಸ್ವಸ್ಥರಾಗಿದ್ದ ನೆಹರೂ ಅವರ ಅಂತ್ಯ ಸಮೀಪಿಸುತ್ತಿದೆ ಎಂದು ಅನಿಸಿದಾಗ ಕೇಂದ್ರ ಸಂಪುಟದಲ್ಲಿ ಹಿರಿಯಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿಯವರು ಖುದ್ದಾಗಿ ಜೆಪಿಯವರನ್ನು ಭೇಟಿ ಮಾಡಿ ನೆಹರೂ ನಂತರ ಪ್ರಧಾನಿಯಾಗುವಂತೆ ಕೋರಿಕೊಂಡಿದ್ದರು. ಗಾಂಧೀಜಿ ಹತ್ಯೆಯಾದ ಎರಡೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದ ಜೆಪಿಯವರು ಶಾಸ್ತ್ರಿಯವರ ಆಹ್ಹಾನವನ್ನು ಒಪ್ಪಿಕೊಳ್ಳಲಿಲ್ಲ.
ಆಗಲೇ ಅವರು ಪಕ್ಷರಾಜಕೀಯವನ್ನು ತ್ಯಜಿಸಿ ವಿನೋಬಾ ಭಾವೆ ಅವರ ಭೂದಾನ ಚಳುವಳಿಯಲ್ಲಿ ಸಕ್ರಿಯರಾಗಿದ್ದರು. ಆದರೆ ಇಳಿವಯಸ್ಸಿನಲ್ಲಿ ತಮ್ಮ ಅನಾರೋಗ್ಯದ ಹೊರತಾಗಿಯೂ ಮತ್ತೆ ಅವರು ಹೋರಾಟದ ರಾಜಕೀಯಕ್ಕೆ ಧುಮುಕಿದರು. ಚುನಾವಣಾ ರಾಜಕಾರಣದಿಂದ ಕೊನೆಯವರೆಗೆ ಅವರು ದೂರವೇ ಉಳಿದರು.
ಅಣ್ಣಾ ಹಜಾರೆ ಅವರು ಇನ್ನೊಬ್ಬ ಗಾಂಧಿ ಆಗಬೇಕು, ಮತ್ತೊಬ್ಬ ಜೆಪಿ ಆಗಬೇಕು ಎಂದು ಆಶಿಸುವುದು ಸುಲಭ. ಆದರೆ ಈಗಿನ ರಾಜಕೀಯದಲ್ಲಿ ಭ್ರಷ್ಟರೇ ಬಹುಸಂಖ್ಯೆಯಲ್ಲಿರುವಾಗ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟುವುದು  ಅಷ್ಟು ಸುಲಭ ಅಲ್ಲ. ಅಂತಹದ್ದೊಂದು ದೊಡ್ಡ ರಾಜಕೀಯ ಚಳುವಳಿಗೆ ಹೆಗಲು ಕೊಡುವ ನಾಯಕರು ಮತ್ತು ಕಾರ್ಯಕರ್ತರು ಎಷ್ಟು ಮಂದಿ ನಮ್ಮ ನಡುವೆ ಇದ್ದಾರೆ? ರಾಜಕಾರಣಿಗಳೆಂದರೆ ಭ್ರಷ್ಟರು ಎಂದಾಗಿರುವ ಕಾರಣದಿಂದಾಗಿಯೇ ಅಣ್ಣಾ ಹಜಾರೆ ಚಳುವಳಿ ರಾಜಕಾರಣಿಗಳ ವಿರುದ್ಧವೇ ನಡೆಯುತ್ತಿದೆ ಎಂಬ ಆತಂಕ ಅಡ್ವಾಣಿಯವರಲ್ಲಿ ಹುಟ್ಟಿರುವುದು.
ಇದಕ್ಕೆ ಕಾರಣ ಎಲ್ಲ ಪಕ್ಷಗಳಲ್ಲಿ ಬಹುಸಂಖ್ಯೆಯಲ್ಲಿ ಭ್ರಷ್ಟರು ತುಂಬಿರುವುದು. ಜೆಪಿಯವರು ‘ಸಂಪೂರ್ಣಕ್ರಾಂತಿ’ ಚಳುವಳಿ ಪ್ರಾರಂಭಿಸಿದಾಗ ಅವರಿಗೆ ಈ ಸಮಸ್ಯೆ ಇರಲಿಲ್ಲ. ಆಗಿನ ವಿರೋಧಪಕ್ಷಗಳಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್ ಫರ್ನಾಂಡಿಸ್, ಮಧು ದಂಡವತೆ, ಮಧುಲಿಮಯೆ, ಮುಲಾಯಂಸಿಂಗ್‌ಯಾದವ್, ಲಾಲುಪ್ರಸಾದ್,ನಾನಾಜಿ ದೇಶಮುಖ್ ಮೊದಲಾದ ನಾಯಕರಿದ್ದರು. ಇವರ್ಯಾರೂ ಆಗ ಅಧಿಕಾರ ರಾಜಕಾರಣದ ಕೆಸರಿಗೆ ಕಾಲಿಟ್ಟಿರಲಿಲ್ಲ.  ಎಡಪಕ್ಷಗಳ ನಾಯಕರನ್ನು ಹೊರತುಪಡಿಸಿ ಉಳಿದ ಯಾವ ವಿರೋಧಪಕ್ಷಗಳಲ್ಲಿ ಅಣ್ಣಾಹಜಾರೆ ಪಕ್ಕದಲ್ಲಿ ಕೂರುವ ಯೋಗ್ಯತೆ ಇರುವ ಎಷ್ಟು ಮಂದಿ ನಾಯಕರು ಈಗ ಇದ್ದಾರೆ?
ನಾಯಕರನ್ನು ಪಕ್ಕಕ್ಕೆ ಇಟ್ಟುಬಿಡಿ, ಹೋರಾಟದ ಸಾಗರಕ್ಕೆ ಧುಮುಕಲು ಸಿದ್ದ ಇರುವ ಕಾರ್ಯಕರ್ತರು ಎಷ್ಟು ಮಂದಿ ಇದ್ದಾರೆ. ನಾಳೆ ಅಣ್ಣಾ ಹಜಾರೆ ದೇಶವ್ಯಾಪಿ ಚಳುವಳಿಗೆ ಕರೆಗೊಟ್ಟರೆ ಎಲ್ಲವನ್ನೂ ತ್ಯಾಗಮಾಡಿ ಅದರಲ್ಲಿ ಪಾಲ್ಗೊಳ್ಳಲು ಎಷ್ಟುಮಂದಿ ಕಾರ್ಯಕರ್ತರು ಮುಂದೆಬರಬಹುದು? ಜೆಪಿ ಚಳುವಳಿ ಪ್ರಾರಂಭವಾಗಿದ್ದೇ ವಿದ್ಯಾರ್ಥಿ ಚಳುವಳಿಯಿಂದ ಎಂಬುದನ್ನು ಮರೆಯಬಾರದು.
ಅಹ್ಮದಾಬಾದ್ ಮತ್ತು ಮೋರ್ವಿಯಲ್ಲಿ ವಿದ್ಯಾರ್ಥಿಗಳು ಹಾಸ್ಟೆಲ್‌ನ ಊಟ-ತಿಂಡಿಯ ದರ ಏರಿಕೆ ವಿರುದ್ಧ ಚಳುವಳಿ ಪ್ರಾರಂಭಿಸಿದಾಗ ಅಲ್ಲಿ ಜೆಪಿ ಇರಲಿಲ್ಲ. ಅದರಿಂದ ಪ್ರೇರಣೆ ಪಡೆದು ಬಿಹಾರದ ವಿದ್ಯಾರ್ಥಿಗಳು ಚಳುವಳಿ ಪ್ರಾರಂಭಿಸಿದ್ದರು. ಆಗಲೂ ಜೆಪಿ ಅದರಲ್ಲಿ ನೇರವಾಗಿ ಭಾಗಿಯಾಗಿರಲಿಲ್ಲ. ಕೊನೆಗೆ ವಿದ್ಯಾರ್ಥಿಗಳು ತಮ್ಮ ನಾಯಕತ್ವ ವಹಿಸಬೇಕೆಂದು ಕೇಳಿಕೊಂಡಾಗ ಜೆಪಿ ‘ನಿಮ್ಮಲ್ಲಿ ಎಷ್ಟುಮಂದಿ ಕನಿಷ್ಠ ಒಂದುವರ್ಷದ ಮಟ್ಟಿಗೆ ಶಾಲೆ-ಕಾಲೇಜು ತೊರೆದು ಚಳುವಳಿಯಲ್ಲಿ ಭಾಗವಹಿಸಲು ಸಿದ್ಧ ಇದ್ದೀರಿ?’ ಎಂದು ಕೇಳಿದ್ದರು.
ವಿದ್ಯಾರ್ಥಿಗಳು ಭರವಸೆ ನೀಡಿದ ನಂತರವೇ ಜೆಪಿ ಸಕ್ರಿಯವಾಗಿ ಚಳುವಳಿನಿರತ ವಿದ್ಯಾರ್ಥಿಗಳ ಜತೆ ಸೇರಿಕೊಂಡದ್ದು.
ಅಣ್ಣಾಹಜಾರೆ ಅವರು ಮೊನ್ನೆಯ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ದೆಹಲಿಯಲ್ಲಿ ಮಾತ್ರವಲ್ಲ ಬಹುತೇಕ ನಗರ-ಪಟ್ಟಣಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಯುವಜನರು ಬೀದಿಗಿಳಿದಿದ್ದರು. ಆದರೆ ಅವರಿಗೆ ಅಣ್ಣಾ ಹಜಾರೆ ಅವರು ಅಂದು ಜೆಪಿ ಕೇಳಿದ್ದ ಪ್ರಶ್ನೆಯನ್ನೇ ಕೇಳಿದರೆ ಎಷ್ಟು ಮಂದಿ ಒಪ್ಪಿಕೊಳ್ಳಲು ಸಿದ್ದ ಇರಬಹುದು?
ಇಮೇಲ್, ಎಸ್‌ಎಂಎಸ್, ಟ್ವಿಟರ್‌ಗಳ ಮೂಲಕ ಕ್ರಾಂತಿ ಮಾಡಲು ಹೊರಟವರಲ್ಲಿ ಎಷ್ಟುಮಂದಿ ಆರು ತಿಂಗಳು ಕೆಲಸಕ್ಕೆ ರಜೆಹಾಕಿ ಅಣ್ಣಾಹಜಾರೆ ಚಳುವಳಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು? ಫ್ರೀಡಮ್‌ಪಾರ್ಕ್‌ನಲ್ಲಿ ಘೋಷಣೆ ಕೂಗುತ್ತಿದ್ದ ವಿದ್ಯಾರ್ಥಿಗಳು ಆಗಲೇ ಸಿಇಟಿ ಪರೀಕ್ಷೆಯ ತಲೆಬಿಸಿಯಲ್ಲಿದ್ದಾರೆ. ಇಮೇಲ್,ಎಸ್‌ಎಂಎಸ್, ಟ್ವಿಟರ್‌ಗಳು ಆಗಲೇ ನಿಂತುಬಿಟ್ಟಿವೆ. ಜೆಪಿ ಚಳುವಳಿಗೆ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರ ಬಲ ತಂದುಕೊಟಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿಯಾದರೂ ಪ್ರಾಮಾಣಿಕರು ಉಳಿದುಕೊಂಡಿದ್ದಾರೆಯೇ? ಉಳಿದುಕೊಂಡಿದ್ದರೆ ಕನಿಷ್ಠ ಕರ್ನಾಟಕದಲ್ಲಿಯಾದರೂ ಅವರು ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬೀದಿಗಿಳಿಯಬೇಕಿತ್ತಲ್ಲಾ? ಇದು ಇಂದಿನ ವಾಸ್ತವ.
ಪ್ರಾಮಾಣಿಕತೆಯೊಂದರಿಂದಲೇ ರಾಜಕೀಯದಲ್ಲಿ ಎಲ್ಲವನ್ನೂ ಸಾಧಿಸಲು ಆಗುವುದಿಲ್ಲ. ಅದು ಸಾಧ್ಯವಾಗುವುದಿದ್ದರೆ ಪ್ರಧಾನಿಯಾಗಿ ಮನಮೋಹನ್‌ಸಿಂಗ್ ಯಶಸ್ವಿಯಾಗಬೇಕಿತ್ತು. ಅಣ್ಣಾಹಜಾರೆ ಅವರು ಎಲ್ಲಾ ಬಗೆಯ ರಾಜಕೀಯದಿಂದ ದೂರ ಇದ್ದು ಪ್ರಾಮಾಣಿಕತೆಯನ್ನು ಉಳಿಸಿಕೊಂಡವರು. ಆದರೆ ಮನಮೋಹನ್‌ಸಿಂಗ್ ಅಧಿಕಾರ ಕೇಂದ್ರಿತ ರಾಜಕೀಯದಲ್ಲಿ ತೊಡಗಿಸಿಕೊಂಡೂ ವೈಯಕ್ತಿಕ ಮಟ್ಟದಲ್ಲಿ ಪ್ರಾಮಾಣಿಕತೆಯನ್ನು ಉಳಿಸಿಕೊಂಡವರು. ಇದೇನು ಕಡಿಮೆ ಸಾಧನೆಯಲ್ಲ. ಹೀಗಿದ್ದರೂ ಪ್ರಾಮಾಣಿಕ ಮನಮೋಹನ್‌ಸಿಂಗ್ ಅವರಿಗೆ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ನೀಡಲು ಆಗಲಿಲ್ಲ. ಆದ್ದರಿಂದ ಕೇವಲ ಅಣ್ಣಾ ಹಜಾರೆ ಮತ್ತು ಅವರ ಬೆರಳೆಣಿಕೆಯ ಬೆಂಬಲಿಗರಿಂದ ಭ್ರಷ್ಟಾಚಾರದ ಮೂಲೋತ್ಪಾಟನೆಯಾಗಲಿ, ರಾಜಕೀಯ ಬದಲಾವಣೆಯಾಗಲಿ ಸಾಧ್ಯವಾಗಲಾರದು.
ಇದು ಸಾಧ್ಯವಾಗಬೇಕಾದರೆ  ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಉಳಿದುಕೊಂಡಿರುವ ಸಜ್ಜನರು ತಮ್ಮ ಪಕ್ಷಗಳನ್ನು ತೊರೆದು ಹೊರಬಂದು ಅಣ್ಣಾಹಜಾರೆ ಮಾರ್ಗದರ್ಶನದಲ್ಲಿ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟಲು ಕೈಜೋಡಿಸಬೇಕಾಗುತ್ತದೆ. ಇದು ಹೇಗೆ ಎನ್ನುವುದಕ್ಕೆ 1977 ಮತ್ತು 1989ರ ರಾಜಕೀಯ ಬದಲಾವಣೆಯ ಮಾದರಿಗಳು ನಮ್ಮ ಮುಂದಿವೆ.ಆಗ ಆಡಳಿತ ಪಕ್ಷ ಮಾತ್ರ ಭ್ರಷ್ಟವಾಗಿತ್ತು, ಈಗ ವಿರೋಧಪಕ್ಷಗಳೂ ಭ್ರಷ್ಟಗೊಂಡಿರುವುದರಿಂದ ಅಲ್ಲಿಯೂ ಒಡೆಯುವ ಕೆಲಸ ನಡೆಯಬೇಕಾಗುತ್ತದೆ. ಮೊದಲು ಅಣ್ಣಾ ಹಜಾರೆ ಚಳುವಳಿಯನ್ನು ಬೆಂಬಲಿಸುತ್ತಿರುವ ಪ್ರಮುಖ ವಿರೋಧಪಕ್ಷವಾದ ಬಿಜೆಪಿಯಿಂದಲೇ ಇದು ಪ್ರಾರಂಭವಾಗಲಿ.

Monday, April 11, 2011

ರಾಜಕೀಯದಿಂದ ದೂರ ಇದ್ದಷ್ಟು ದಿನ ಇವರು ನಮ್ಮಣ್ಣ

ಕತ್ತಲೆಯ ಹಾದಿಯಲ್ಲಿ ಕನಸುಗಳ ದೀಪ ಹಿಡಿದುಕೊಂಡು ಹೊರಟವರಿಗೆ ಎದುರಾಗುವ ಪ್ರತಿಯೊಂದು ನೆರಳುಗಳಲ್ಲಿಯೂ ತಮ್ಮನ್ನು ಮುನ್ನಡೆಸುವ ಅವತಾರಪುರುಷ ಕಾಣುವುದು ಸಹಜ. ಭ್ರಷ್ಟ ವ್ಯವಸ್ಥೆಯಿಂದಾಗಿ ರೋಸಿಹೋಗಿ ಹತಾಶೆಗೀಡಾದ ಜನತೆಯ ಕಣ್ಣುಗಳಿಗೆ ಸರ್ಕಾರದ ವಿರುದ್ಧ ಸಣ್ಣಗೆ ಸಿಟ್ಟುಮಾಡಿಕೊಂಡ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರಲ್ಲಿ ಒಬ್ಬ ಜಯಪ್ರಕಾಶ್ ನಾರಾಯಣ್ ಕಾಣುತ್ತಾರೆ, ಕಪ್ಪು ಹಣದ ವಿರುದ್ಧ ಮಾತನಾಡುವ ಒಬ್ಬ ಸಾಮಾನ್ಯ ಯೋಗಗುರು ಬಾಬಾ ರಾಮ್‌ದೇವ್ ಅವರಲ್ಲಿ ಒಬ್ಬ ವಿನೋಬಾ ಭಾವೆ ಕಾಣುತ್ತಾರೆ, ಒಬ್ಬ  ಸಾಮಾಜಿಕ ಸೇವಾ ಕಾರ್ಯಕರ್ತ ಅಣ್ಣಾ ಹಜಾರೆ ಅವರಲ್ಲಿ ಮಹಾತ್ಮ ಗಾಂಧೀಜಿ ಕಾಣುತ್ತಾರೆ.
ಆದರೆ ಒಬ್ಬ ಮಹಾತ್ಮ, ಒಬ್ಬ ಜೆಪಿ ಇಲ್ಲವೇ ಒಬ್ಬ ವಿನೋಬಾ ಭಾವೆ ರಾತ್ರಿ ಹಗಲಾಗುವುದರೊಳಗೆ ಸುದ್ದಿಮಾಧ್ಯಮಗಳ ಮಿಂಚುಬೆಳಕಲ್ಲಿ ಉದಿಸಿದ ತಾರೆಗಳಲ್ಲ. ಇದನ್ನು ಅರ್ಥಮಾಡಿಕೊಳ್ಳದಿದ್ದರೆ ಆ ಮಹನೀಯರ ಹೋರಾಟದ ಬದುಕನ್ನು ಅಗೌರವಿಸಿದಂತಾಗುವುದು ಮಾತ್ರವಲ್ಲ, ಭ್ರಷ್ಟಚಾರದ ವಿರುದ್ದ ದೇಶದಾದ್ಯಂತ ಹುಟ್ಟಿಕೊಂಡಿರುವ ಜನಾಭಿಪ್ರಾಯ ತಾರ್ಕಿಕ ಅಂತ್ಯ ಕಾಣದೆ ವ್ಯರ್ಥಗೊಂಡು ಮತ್ತೊಂದು ಭ್ರಮನಿರಸನಕ್ಕೆ ದಾರಿಮಾಡಿಕೊಡುವ ಅಪಾಯವೂ ಇದೆ.
ಸರ್ಕಾರ ಮಣಿಯಲು ಕಾರಣವಾದ ‘ಕ್ರಾಂತಿಯ ಹರಿಕಾರರು’ ತಾವೇ ಎಂದು  ಮಾಧ್ಯಮಗಳು ಆಗಲೇ ತಮ್ಮ ಬೆನ್ನು ತಟ್ಟಿಕೊಳ್ಳುತ್ತಿವೆ. ಅಣ್ಣಾ ಹಜಾರೆ ಅವರ ಸತ್ಯಾಗ್ರಹದ ಯಶಸ್ಸಿನಲ್ಲಿ ಅತೀ ಎನಿಸುವಷ್ಟು ಕ್ರಿಯಾಶೀಲವಾಗಿದ್ದ ಮಾಧ್ಯಮಗಳ, ಅದರಲ್ಲೂ ಹುಟ್ಟು-ಸಾವುಗಳೆರಡನ್ನೂ ಹಬ್ಬದಂತೆ ಆಚರಿಸುವ ಟಿವಿ ಚಾನೆಲ್‌ಗಳ ಪಾತ್ರವನ್ನು ಅಲ್ಲಗಳೆಯುವಂತಿಲ್ಲ. ಆದರೆ ಅದೇ ಟಿವಿ ಚಾನೆಲ್‌ಗಳು ಆಗಲೇ ಭಿನ್ನ ರಾಗ ಹಾಡುತ್ತಿರುವ ಬಾಬಾ ರಾಮ್‌ದೇವ್ ಅವರ ಸುತ್ತ ನೆರೆದಿವೆ. ಮಾಧ್ಯಮಗಳ ಮೇಲಿನ ಅತಿ ಅವಲಂಬನೆಯ ಅಪಾಯ ಇದು.
ಒಂದು ಮಸೂದೆಯ ರಚನೆಯ ಸಮಿತಿಯಲ್ಲಿ ನಾಗರಿಕ ಸಮಾಜದ ಐವರು ಪ್ರತಿನಿಧಿಗಳು ಪಾಲ್ಗೊಳ್ಳಲು ಸರ್ಕಾರ ಒಪ್ಪಿಕೊಂಡದ್ದನ್ನೇ ದೊಡ್ಡ ಗೆಲುವೆಂದು ತಿಳಿದುಕೊಳ್ಳಬೇಕಾಗಿಲ್ಲ. ಈಗಿನ ಭ್ರಷ್ಟ ರಾಜಕೀಯ ವ್ಯವಸ್ಥೆಯ ಆಳ-ಅಗಲಗಳ ಪರಿಚಯ ಇರುವ ಯಾರೂ ಅಷ್ಟೊಂದು ಆಶಾವಾದಿಯಾಗುವುದು ಸಾಧ್ಯ ಇಲ್ಲ. ಕರ್ನಾಟಕಕ್ಕಿಂತ ಬೇರೆ ಉದಾಹರಣೆ ಯಾಕೆ ಬೇಕು? ರಾಜ್ಯದ ಮುಖ್ಯಮಂತ್ರಿ ಮತ್ತು ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಲೋಕಾಯುಕ್ತರು ಮಾಡಬೇಕಾಗಿದ್ದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ಕೊಟ್ಟು ಕೈ ಕಟ್ಟಿಹಾಕಿಲ್ಲವೇ? ಇಲ್ಲಿ ಹೈಕೋರ್ಟ್ ಇದ್ದರೆ ಅಲ್ಲಿ ಸುಪ್ರೀಂಕೋರ್ಟ್ ಇದೆ. ನ್ಯಾಯಾಲಯಗಳು ಕೂಡಾ ಇಂದು ಸಂಶಯಾತೀತವಾಗಿ ಉಳಿದಿಲ್ಲ. ಆದ್ದರಿಂದ ಲೋಕಪಾಲರ ನೇಮಕದಿಂದಲೇ ಭ್ರಷ್ಟಾಚಾರ ನಿರ್ಮೂಲನೆಗೊಳ್ಳಲಿದೆ ಎಂದು ಯಾರೂ ತಿಳಿದುಕೊಳ್ಳಬೇಕಾಗಿಲ್ಲ. ಹಾಗೆ ನೋಡಿದರೆ ಲೋಕಪಾಲರ ನೇಮಕಕ್ಕಿಂತಲೂ ಮೊದಲು ಈಗಿನ ಭ್ರಷ್ಟರಾಜಕೀಯ ವ್ಯವಸ್ಥೆಯ ಹುಟ್ಟಿಗೆ ಕಾರಣವಾಗಿರುವ ಚುನಾವಣಾ ವ್ಯವಸ್ಥೆಯ ಸುಧಾರಣೆಯಾಗಬೇಕಿತ್ತು. ಪ್ರತಿಯೊಂದು ಕಾನೂನನ್ನೂ ನಾಗರಿಕ ಸಮಾಜವೇ ರಚಿಸುವ ಇಲ್ಲವೇ ತಿದ್ದುವ ಕೆಲಸವನ್ನು ಮಾಡುವುದು ಸಾಧ್ಯ ಇಲ್ಲವಲ್ಲಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ಕೆಲಸವನ್ನು ಮಾಡಬೇಕಾಗಿರುವುದು ಶಾಸನ ರಚನೆಯ ಜವಾಬ್ದಾರಿ ಹೊಂದಿರುವ ಜನಪ್ರತಿನಿಧಿಗಳಲ್ಲವೇ? ಆದ್ದರಿಂದ ಶಾಸನಸಭೆಗೆ ಪ್ರಾಮಾಣಿಕರು, ಸಚ್ಚಾರಿತ್ರ್ಯಉಳ್ಳವರು ಮತ್ತು ಪ್ರಜ್ಞಾವಂತರು ಆರಿಸಿಬರುವಂತಹ ಚುನಾವಣಾ ವ್ಯವಸ್ಥೆ ಇಲ್ಲದೆ ಹೋದರೆ ಪ್ರತಿಬಾರಿ ಜನಪರವಾದ ಕಾನೂನು ರಚನೆಗೆ ಅಣ್ಣಾ ಹಜಾರೆ ಅವರು ಉಪವಾಸ ಕೂರಬೇಕಾಗುತ್ತದೆ.
ಅಂದ ಮಾತ್ರಕ್ಕೆ ಸಿನಿಕರಾಗುವ ಅಗತ್ಯ ಖಂಡಿತ ಇಲ್ಲ. ಬೇರೇನೂ ಆಗಬೇಕಾಗಿಲ್ಲ, ಸಿವಿಲ್ ಸೊಸೈಟಿ ರಚಿಸಿರುವ ‘ಜನಲೋಕಪಾಲ ಮಸೂದೆ’ ಅದರ ಮೂಲರೂಪದಲ್ಲಿಯೇ ಕಾಯಿದೆಯಾಗಿ ಅನುಷ್ಠಾನಕ್ಕೆ ಬಂದರಷ್ಟೇ ಸಾಕು. ದೇಶದ ಈಗಿನ ಜನಾಂಗ ಮಾತ್ರವಲ್ಲ ಭವಿಷ್ಯದ ಜನಾಂಗ ಕೂಡಾ ಹಜಾರೆ ಅವರಿಗೆ ಚಿರಋಣಿಯಾಗಿರುತ್ತದೆ. ಆದರೆ  ಈ ಹೋರಾಟವನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶ ಹೊಂದಿದ್ದರೆ ಮುಂದಿನ ದಾರಿ ತುಳಿಯುವಾಗ ಎಚ್ಚರಿಕೆಯಿಂದ ಹೆಜ್ಜೆ ಹಾಕಬೇಕಾಗುತ್ತದೆ. ಸಾಮಾನ್ಯವಾಗಿ ಹೋರಾಟಗಾರರೆಲ್ಲರೂ ಶತ್ರುಗಳನ್ನು ಸರಿಯಾಗಿಯೇ ಗುರುತಿಸಿಕೊಂಡಿರುತ್ತಾರೆ, ಆದರೆ ಯಾವಾಗಲೂ ಹೋರಾಟ ಎಡವಿ ಬೀಳುವುದು ಅದರ ನಾಯಕರು ಆರಿಸಿಕೊಳ್ಳುವ ಮಿತ್ರರ ಆಯ್ಕೆಯಲ್ಲಿ. ಅಣ್ಣಾ ಹಜಾರೆ ಮತ್ತು ಅವರ ಸಂಗಾತಿಗಳು ಎಚ್ಚರ ವಹಿಸಬೇಕಾಗಿರುವುದು ಮಿತ್ರರ ಬಗ್ಗೆ, ಶತ್ರುಗಳ ಬಗ್ಗೆ ಅಲ್ಲ.
ಆಮರಣ ಉಪವಾಸ ಕೊನೆಗೊಳಿಸುವ ಮುನ್ನ ಅಣ್ಣಾ ಹಜಾರೆ ಅವರು ಅಲ್ಲಿ ಸೇರಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆ ದೃಶ್ಯಗಳನ್ನು ಟಿವಿ ಚಾನೆಲ್‌ಗಳು ನೇರ ಪ್ರಸಾರ ಮಾಡುತ್ತಿದ್ದವು. ಆ ಹೊತ್ತಿನಲ್ಲಿ ವೇದಿಕೆಯಲ್ಲಿದ್ದ ವ್ಯಕ್ತಿಯೊಬ್ಬ ಕಾಗದದ ಪೊಟ್ಟಣವೊಂದನ್ನು ಬಿಚ್ಚಿ ದೊಡ್ಡ ಕತ್ತಿಯೊಂದನ್ನು ಹೊರತೆಗೆದು ಅಣ್ಣಾ ಅವರ ಕೈಗೆ ಕೊಡಲು ಹೊರಟಿದ್ದ. ಪಕ್ಕದಲ್ಲಿದ್ದ ಸ್ವಾಮಿ ಅಗ್ನಿವೇಶ್ ತಕ್ಷಣ ಜಾಗೃತರಾಗಿ ಕತ್ತಿ ಕೊಡಲು ಬಂದವನನ್ನು ಹಿಂದಕ್ಕೆ ಸರಿಸಿದರು. ಇಲ್ಲದೆ ಹೋಗಿದ್ದರೆ ನಾವೆಲ್ಲ ಕಾಣಬಯಸುವ ‘ಮಹಾತ್ಮಗಾಂಧಿ’ ಅವರು ಕೈಯಲ್ಲಿ ಕತ್ತಿ ಹಿಡಿದ ‘ರೋಮಾಂಚಕಾರಿ’ ಕ್ಷಣಗಳನ್ನು ಟಿವಿ ಚಾನೆಲ್‌ಗಳು ನೇರಪ್ರಸಾರ ಮಾಡಿಬಿಡುತ್ತಿದ್ದವು. ಮರುದಿನದ ಪತ್ರಿಕೆಗಳಲ್ಲಿ ಅದೇ ಚಿತ್ರ ಪ್ರಕಟವಾಗುತ್ತಿತ್ತೋ ಏನೋ? ಕಣ್ಣರೆಪ್ಪೆ ಮುಚ್ಚಿ ತೆರೆದುಕೊಳ್ಳುವಷ್ಟರಲ್ಲಿ ನಡೆದುಹೋದ ಈ ಸಣ್ಣ ಘಟನೆ ಅಣ್ಣಾ ಹಜಾರೆ ಹೋರಾಟದ ಶಕ್ತಿ-ದೌರ್ಬಲ್ಯಗಳೆರಡನ್ನೂ ಹೇಳುವಂತಿತ್ತು.
ಕತ್ತಿ ಮತ್ತು ಉಪವಾಸದ ಸಂಕೇತಗಳು ಬೇರೆ. ಅವುಗಳು ಬಿಂಬಿಸುವ ವಿಚಾರಧಾರೆಗಳು ಕೂಡಾ ಬೇರೆಬೇರೆ. ಅಣ್ಣಾ ಅವರ ಪಕ್ಕದಲ್ಲಿ ಮಾವೋವಾದಿಗಳಿಗೂ ಅಹಿಂಸೆಯ ಪಾಠ ಬೋಧಿಸುತ್ತಿರುವ ಸ್ವಾಮಿ ಅಗ್ನಿವೇಶ್ ಅಂತಹವರು ಮಾತ್ರವಲ್ಲ ಬಂದೂಕಿನ ನಳಿಕೆಯ ಮೂಲಕ ಬದಲಾವಣೆಯನ್ನು ತರಬಯಸುವ ಕಾಡಲ್ಲಿರುವ ಮಾವೋವಾದಿಗಳಿಗೂ, ಅದನ್ನೇ ಉಪವಾಸದ ಮೂಲಕ ಮಾಡಲು ಹೊರಟಿರುವ ಅಣ್ಣಾ ಹಜಾರೆ ಎಂಬ ಗಾಂಧಿವಾದಿಗೂ ಇರುವ ವ್ಯತ್ಯಾಸವನ್ನೇ ಅರಿಯದ ಕುರುಡುಕಣ್ಣುಗಳ ಕತ್ತಿವೀರರೂ ಇದ್ದಾರೆ. ಸ್ವಾಮಿ ಅಗ್ನಿವೇಶ್, ಶಾಂತಿಭೂಷಣ್, ಪ್ರಶಾಂತ್ ಭೂಷಣ್, ಅರವಿಂದ ಕೇರ್ಜಿವಾಲಾ, ಕಿರಣ್‌ಬೇಡಿ ಮೊದಲಾದವರ ಜತೆಯಲ್ಲಿ ಬಾಲಿವುಡ್ ತಾರೆಯರು, ಆಧ್ಯಾತ್ಮವನ್ನೇ ವ್ಯಾಪಾರ ಕೊಂಡಿರುವ ‘ದೇವಮಾನವ’ರು, ಅಧಿಕಾರ ಕಳೆದುಕೊಂಡಿರುವ ಭಗ್ನಹೃದಯಿ ರಾಜಕಾರಣಿಗಳು ಕೂಡಾ ಇದ್ದಾರೆ.
ಇವರೆಲ್ಲರ ನಡುವೆ ಅಣ್ಣಾ ಹಜಾರೆ ಅವರ ಜತೆಯಲ್ಲಿಯೇ ಆಮರಣ ಉಪವಾಸ ಕೂತ ವ್ಯಕ್ತಿಗಳ ಹೆಸರಾದರೂ ಯಾರಿಗಾದರೂ ಗೊತ್ತಿದೆಯೇ? ಯಾವ ಪತ್ರಿಕೆಗಳಲ್ಲಿಯಾದರೂ ಅವರ ಹೆಸರು ಪ್ರಕಟಗೊಂಡಿದೆಯೇ? ಯಾವುದಾದರೂ ಟಿವಿ ಚಾನೆಲ್ ಅವರ ಹೆಸರು ಹೇಳಿದೆಯೇ? ತಾನು ಉಪವಾಸ ಅಂತ್ಯಗೊಳಿಸುವ ಮೊದಲು ಅಣ್ಣಾ ಅವರು ಉಪವಾಸ ಕೂತಿದ್ದವರನ್ನು ಎಬ್ಬಿಸಿ ಅವರ ಗಲ್ಲ ಎತ್ತಿ ಹಣ್ಣಿನ ರಸ ಕುಡಿಸುತ್ತಿದ್ದಾಗಷ್ಟೇ ಆ ಅನಾಮಿಕ ಸತ್ಯಾಗ್ರಹಿಗಳ ಮುಖದರ್ಶನವಾಗಿದ್ದು. ಆಗಲೂ ಅವರ ಹೆಸರುಗಳನ್ನು ಯಾರೂ ಹೇಳಲಿಲ್ಲ.  ಆದರೆ ಮುಂಬೈನಲ್ಲಿ ವಿಮಾನದಲ್ಲಿ ಹಾರಿಬಂದು, ದೆಹಲಿಯ ಪಂಚತಾರಾ ಹೋಟೆಲ್‌ಗಳಲ್ಲಿ ತಿಂಡಿ-ತೀರ್ಥ ಸೇವಿಸಿ ಪಿಆರ್‌ಗಳ ಮೂಲಕ ಮಾಧ್ಯಮಮಿತ್ರರಿಗೆ ತಮ್ಮ ಆಗಮನದ ವಿಷಯವನ್ನು ಮುಂಚಿತವಾಗಿಯೇ ತಿಳಿಸಿ ಅಣ್ಣಾಹಜಾರೆಯವರ ಜತೆಯಲ್ಲಿ ಒಂದಷ್ಟು ಹೊತ್ತು ಕಾಣಿಸಿಕೊಂಡು ಮಿಂಚಿದ ಬಾಲಿವುಡ್ ತಾರೆಯರ ಹೆಸರುಗಳೆಲ್ಲ ಟಿವಿ ನೋಡುವ, ಪತ್ರಿಕೆ ಓದುವ ಜನರಿಗೆಲ್ಲ ಬಾಯಿಪಾಠವಾಗಿದೆ.
ಭ್ರಷ್ಟಾಚಾರದ ವಿರುದ್ಧದ ಹೋರಾಟ ಟಿವಿ ಕ್ಯಾಮೆರಾಗಳು ಕಣ್ಣಿಟ್ಟಿರುವ ವೇದಿಕೆಗಳಿಂದ ಪ್ರಾರಂಭವಾಗುವುದಲ್ಲ, ಅದು ಪ್ರತಿಯೊಬ್ಬರ ಮನೆ ಮತ್ತು ಮನಸ್ಸಿನೊಳಗಿಂದ ಪ್ರಾರಂಭವಾಗಬೇಕು.  ಎದೆ-ತೋಳುಗಳ ಮೇಲೆ ಅಣ್ಣಾಹಜಾರೆ ಹೆಸರು ಬರೆಸುವುದರಿಂದ, ಒಂದೆರಡು ಗಂಟೆ ಧರಣಿ ಕೂತು ಟಿವಿ ಚಾನೆಲ್‌ಗಳಲ್ಲಿ ಕಾಣಿಸಿಕೊಳ್ಳುವುದರಿಂದ, ಇಲ್ಲವೇ ಬೀದಿಗಳಲ್ಲಿ ಕ್ಯಾಂಡಲ್‌ಗಳನ್ನು ಹಚ್ಚುವುದರಿಂದ ಭ್ರಷ್ಟಾಚಾರವನ್ನು ಹೊಡೆದೋಡಿಸುವುದು ಸಾಧ್ಯ ಇಲ್ಲ. ಈ ಚಿತ್ರತಾರೆಯರು ಸರ್ಕಾರಕ್ಕೆ ವಂಚನೆ ಮಾಡದೆ ಗಳಿಸಿದ ಹಣಕ್ಕೆ ಸರಿಯಾಗಿ ವರಮಾನ ತೆರಿಗೆ ಕೊಟ್ಟರೆ ಸಾಕು.
ಅಣ್ಣಾ ಹಜಾರೆ ಅವರಿಗೆ ಅದಕ್ಕಿಂತ ದೊಡ್ಡ ಬೆಂಬಲ ಬೇಕಿಲ್ಲ. ಸಾಧ್ಯವಾದರೆ ಒಂದಷ್ಟು ಒಳ್ಳೆಯ ಅಭಿರುಚಿಯ ಚಿತ್ರಗಳನ್ನು ಸಮಾಜಕ್ಕೆ ನೀಡಲಿ. ಈ ಕೆಲಸವನ್ನು ಮಾಡುತ್ತಾ ಬಂದಿದ್ದೇನೆ ಎಂದು ಎದೆಮೇಲೆ ಕೈಯಿಟ್ಟು ಹೇಳುವ ಎಷ್ಟು ಮಂದಿ ಚಿತ್ರರಂಗದಲ್ಲಿದ್ದಾರೆ? ಲಂಚ ಸ್ವೀಕರಿಸುವುದಿಲ್ಲ ಮಾತ್ರವಲ್ಲ ಕೊಡುವುದೂ ಇಲ್ಲ,  ತೆರಿಗೆ ಕಟ್ಟದೆ ಸರ್ಕಾರಕ್ಕೆ ವಂಚನೆ ಮಾಡುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಗೊತ್ತಿದ್ದೂ ಕಾನೂನಿನ ಉಲ್ಲಂಘನೆ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದವರು ಮಾತ್ರ ವೇದಿಕೆ ಹತ್ತಿ ಎಂದು  ಹಜಾರೆ ಹೇಳಿದ್ದರೆ ಅವರು ಉಪವಾಸ ಕೂತಿದ್ದ ವೇದಿಕೆ ಮುಕ್ಕಾಲು ಪಾಲು ಖಾಲಿಯಾಗಿರುತ್ತಿತ್ತು.
ಎರಡನೆಯ ದೊಡ್ಡ ಅಪಾಯ ಇರುವುದು ಇಂತಹ ಹೋರಾಟಗಾರರನ್ನೆಲ್ಲ ಸುಲಭದಲ್ಲಿ ಸಮ್ಹೋಹನಕ್ಕೊಳಪಡಿಸುವ ರಾಜಕೀಯ ಮಾಯಾಂಗನೆಯಿಂದ. ಎಂಬತ್ತರ ದಶಕದ ಆದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಂದಾಗೆಲ್ಲ ಬೆಂಗಳೂರಿನ ಜನಜೀವನ ಸ್ಥಗಿತಗೊಳ್ಳುತ್ತಿತ್ತು. ಅಧಿಕಾರದಲ್ಲಿದ್ದವರು ಕೈಕಾಲು ಕಂಪಿಸುತ್ತಿದ್ದವು. ಮುಂದೆ ರೈತರದ್ದೇ ಸರ್ಕಾರ ಎಂದು ಭ್ರಮಿಸಿಕೊಂಡವರು ಆ ಕಾಲದಲ್ಲಿ ಬಹಳ ಮಂದಿ ಇದ್ದರು. ಇನ್ನೊಂದೆಡೆ ಅಲ್ಲಿಯ ವರೆಗೆ ಕೇವಲ ಮುಖರಹಿತ ಮತಬ್ಯಾಂಕ್ ಆಗಿದ್ದ ದಲಿತರು ಸಂಘಟಿತರಾಗಿ ನಡೆಸುತ್ತಿದ್ದ ಚಳವಳಿಯಿಂದ ರಾಜಕೀಯ ಪಕ್ಷಗಳು ತಮ್ಮ ನೆಲೆ ಕಳೆದುಕೊಂಡವರಂತೆ ಭೀತಿಗೊಳಗಾಗಿದ್ದವು. ಆದರೇನಾಯಿತು? ಈ ಎರಡೂ ಚಳವಳಿಗಳ ನಾಯಕರು ರಾಜಕೀಯದ ಮೋಹಪಾಶಕ್ಕೆ ಸಿಕ್ಕಿ ತಾವು ನೆಲೆಕಲೆದುಕೊಂಡಿದ್ದು ಮಾತ್ರವಲ್ಲ ಚಳವಳಿಗಳು ಕೂಡಾ ದಿಕ್ಕು ತಪ್ಪಲು ಕಾರಣರಾದರು. ಈ ಅಪಾಯವನ್ನು ಅಣ್ಣಾ ಹಜಾರೆ ಮತ್ತು ಸಂಗಡಿಗರು ಕೂಡಾ ಮುಂದಿನ ದಿನಗಳಲ್ಲಿ ಎದುರಿಸುವ ಸಾಧ್ಯತೆ ಇದೆ.
ಆಗಲೇ ‘ನೀವು ಪ್ರಧಾನಮಂತ್ರಿಯಾಗಬೇಕೆಂದು ಜನ ಬಯಸಿದರೆ ಏನು ಮಾಡುತ್ತೀರಿ?’ ಎಂಬ ಪ್ರಶ್ನೆಯನ್ನು ಪತ್ರಕರ್ತರು ಅಣ್ಣಾ ಹಜಾರೆ ಅವರನ್ನು ಪೆದ್ದುಪೆದ್ದಾಗಿ ಕೇಳತೊಡಗಿದ್ದಾರೆ. ಈ ರೀತಿಯ ಜನಬೆಂಬಲ ಕಂಡಾಗ ಎಂತಹ ಗಟ್ಟಿಮನಸ್ಸಿನ ನಾಯಕರ ಸಂಯಮವೂ ಕರಗುವುದು ಸಹಜ. ಅಣ್ಣಾ ಹಜಾರೆ ಅವರಲ್ಲಿ ಅಲ್ಲದಿದ್ದರೂ ಅವರ ಬೆಂಬಲಿಗರಲ್ಲಿ ರಾಜಕೀಯ ಆಕಾಂಕ್ಷೆ ಹುಟ್ಟಿಕೊಳ್ಳುವ ಸಾಧ್ಯತೆಯೂ ಇದೆ. ಬಾಬಾ ರಾಮ್‌ದೇವ್ ಅವರ ಭಿನ್ನಮತದ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಅವರಿಂದಾಗಿ ತನ್ನ ರಾಜಕೀಯ ಆಕಾಂಕ್ಷೆ ಭಗ್ನಗೊಳ್ಳಬಹುದೆಂಬ ಭೀತಿಯಿಂದ ಹುಟ್ಟಿಕೊಂಡ ಹತಾಶೆಯೂ ಇರುವಂತೆ ಕಾಣುತ್ತಿದೆ.
ಆದ್ದರಿಂದ ಎಲ್ಲಿಯ ವರೆಗೆ ಅಣ್ಣಾಹಜಾರೆ ಮತ್ತು ಸಂಗಡಿಗರು ಅಧಿಕಾರ ರಾಜಕಾರಣದ ಮೋಹಪಾಶಕ್ಕೆ ಕೊರಳೊಡ್ಡದೆ ಹೋರಾಟ ಮುಂದುವರಿಸಿಕೊಂಡು ಹೋಗುತ್ತಾರೋ ಅಲ್ಲಿಯ ವರೆಗೆ ಜನ ಬೆಂಬಲ ಅವರ ಹಿಂದೆ ಇರಬಹುದು. ನೇರವಾಗಿ ಹೊಸ ರಾಜಕೀಯ ಪಕ್ಷ ಸ್ಥಾಪನೆ ಇಲ್ಲವೇ  ಸಾಂಕೇತಿಕ ಸ್ಪರ್ಧೆ, ಹೊರಗಿನ ಬೆಂಬಲ, ಸಜ್ಜನರ ಪರ ಪ್ರಚಾರ ಮೊದಲಾದ ಪರೋಕ್ಷ ಕ್ರಮಗಳ ಮೂಲಕ ಅವಸರದ ರಾಜಕೀಯ ಪ್ರವೇಶದ ದೌರ್ಬಲ್ಯಕ್ಕೆ ಬಲಿಯಾದರೆ ಮತ್ತೊಂದು ಸುತ್ತಿನ ಭ್ರಮನಿರಸನಕ್ಕೆ ಜನತೆ ಸಿದ್ದವಾಗಬೇಕು. ಯಾಕೆಂದರೆ ಪರ್ಯಾಯ ರಾಜಕೀಯ ಸಂಘಟನೆಗೆ ಬೇಕಾದ ತಯಾರಿಯಾಗಲಿ, ಶಕ್ತಿಯಾಗಲಿ ಈ ಹೋರಾಟಗಾರರಲ್ಲಿ ಇದ್ದಂತಿಲ್ಲ. ರಾಜಕೀಯ ಪಕ್ಷಗಳು ಕೂಡಾ  ಮೈಯೆಲ್ಲ ಕಣ್ಣಾಗಿ ಈ ಒಂದು ತಪ್ಪು ಹೆಜ್ಜೆಗಾಗಿ ಕಾಯುತ್ತಾ ಕೂತ ಹಾಗೆ ಕಾಣುತ್ತಿದೆ.